ಕೊಪ್ಪಳ: ‘ಜಿಲ್ಲೆಯಲ್ಲಿ ಈ ಸಲ ಮಳೆ ಆಶಾದಾಯವಾಗಿ ಕಂಡು ಬರುತ್ತಿಲ್ಲ. ಹಾಗಾಗಿ ಜಿಲ್ಲೆಯ ಎಲ್ಲಾ ರೈತರಿಗೆ ಬೆಳೆ ವಿಮೆ ಮಾಡಲು ಕ್ರಮ ವಹಿಸಬೇಕು’ ಎಂದು ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೃಷಿ ಹಾಗೂ ಕೃಷಿ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ಅವರು, ‘ಇಲ್ಲಿಯವರೆಗೆ ಸರಿಯಾಗಿ ಮಳೆಯಾಗಿಲ್ಲ. ಮುಂದೆ ಇದೇ ರೀತಿಯ ಪರಿಸ್ಥಿತಿ ಮುಂದುವರಿದರೆ ರೈತರಿಗೆ ಕಷ್ಟವಾಗುತ್ತದೆ. ರೈತರು ಬೆಳೆ ವಿಮೆ ಈ ವರ್ಷ ಹೆಚ್ಚಿನ ಸಂಖ್ಯೆಯಲ್ಲಿ ಮಾಡಿಸಬೇಕು. ಕಳೆದ ವರ್ಷ ಎಷ್ಟು ಮಾಡಿದ್ದಾರೆ ಈ ಕುರಿತು ಅವರಿಗೆ ಸರಿಯಾಗಿ ಮಾಹಿತಿ ನೀಡಿ’ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಟಿ.ಎಸ್. ರುದ್ರೇಶಪ್ಪ ಅವರಿಗೆ ಹೇಳಿದರು.
‘ಬರುವ ವರ್ಷ ಸಾಮಾಜಿಕ ಅರಣ್ಯ ವಿಭಾಗದಿಂದ ಜಿಲ್ಲೆಯಲ್ಲಿ ಒಂದು ಲಕ್ಷ ಸಸಿಗಳನ್ನು ನೆಡಬೇಕು. ರಸ್ತೆಯ ಎಲ್ಲಾ ಕಡೆಗಳಲ್ಲಿ ನೆಡುವುದರ ಜೊತೆಗೆ ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ವಸತಿ ನಿಲಯಗಳ ಕಾಂಪೌಂಡ್ ಒಳಗಡೆ ಆಯಾ ಇಲಾಖೆಯಿಂದ ಅವರಿಗೆ ಎಷ್ಟು ಗಿಡಗಳನ್ನು ಬೇಕು ಎಂಬ ಮಾಹಿತಿ ಪಡೆಯಬೇಕು’ ಎಂದರು.
ಜಿಲ್ಲಾ ಪಂಚಾಯಿತಿ ಸಿಇಒ ವರ್ಣಿತ್ ನೇಗಿ, ಹೆಚ್ಚುವರಿ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ತೋಟಗಾರಿಕೆ ಇಲಾಖೆಯ ಉಪನಿರ್ದೆಶಕ ಕೃಷ್ಣ ಉಕ್ಕುಂದ, ಉಪ ಅರಣ್ಯ ಸಂರಕ್ಷಣಾಧಿಕಾರಿ ಹುಸೇನ್ ಪೆಂಡಾರಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.