ಗಂಗಾವತಿ (ಕೊಪ್ಪಳ ಜಿಲ್ಲೆ): ತುಂಗಭದ್ರಾ ಜಲಾಶಯದಿಂದ ನಿರಂತರವಾಗಿ ನದಿಗೆ ನೀರು ಹರಿಸುತ್ತಿರುವ ಕಾರಣ ತಾಲ್ಲೂಕಿನ ವಿರೂಪಾಪುರ ಗಡ್ಡೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ತೆರಳುವ ಮಾರ್ಗದ ಸಂಪರ್ಕ ಕಡಿತವಾಗಿದೆ.
ಇದರಿಂದಾಗಿ ವಿದ್ಯಾರ್ಥಿಗಳಿಗೆ ಎಂಟು ದಿನಗಳಿಂದ ತಮ್ಮ ಶಾಲೆಗೆ ಹೋಗಲು ಸಾಧ್ಯವಾಗುತ್ತಿಲ್ಲ. ಇದೀಗ ತಾಲ್ಲೂಕು ಆಡಳಿತ ಮಕ್ಕಳ ಓದಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆ ಮಾಡಿದೆ. ವಿರೂಪಾಪುರ ಗಡ್ಡೆ ಶಾಲೆಯಲ್ಲಿ 1ರಿಂದ 5ನೇ ತರಗತಿಯವರೆಗೆ ಒಟ್ಟು 25 ವಿದ್ಯಾರ್ಥಿಗಳು ಓದುತ್ತಿದ್ದಾರೆ. ಹೀಗಾಗಿ ಶಾಲೆಯ ಮುಖ್ಯ ಶಿಕ್ಷಕ ಹನುಮಂತಪ್ಪ ಮಕ್ಕಳನ್ನು ಸಮೀಪದ ಕರಿಯಮ್ಮನಗಡ್ಡಿ ಪುನರ್ವಸತಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಕರೆದುಕೊಂಡು ಹೋಗಿ ಅಲ್ಲಿ ಪಠ್ಯ ಚಟುವಟಿಕೆ ನಡೆಸುತ್ತಿದ್ದಾರೆ. ಬೇರೊಂದು ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ತಯಾರಿಸಿಕೊಂಡು ಬರಲಾಗುತ್ತಿದೆ.
ರಾಮಾಯಣ ಕಾಲದ ಐತಿಹಾಸಿಕ ಸ್ಥಳ ಪಂಪಾಸರೋವರಕ್ಕೆ ತೆರಳುವ ರಸ್ತೆ ಮಾರ್ಗ ಜಲಾವೃತವಾಗಿದೆ. ಸುತ್ತಲಿನ ಬಾಳೆ ತೋಟಕ್ಕೂ ನೀರು ನುಗ್ಗಿದೆ. ಚಿಂತಾಮಣಿ ಬಳಿ ಕುಳಮಂಟಪ ಭಾಗಶಃ ಮುಳುಗಡೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.