ADVERTISEMENT

ಬೊಮ್ಮಾಯಿ ಪೂರ್ಣ ಅವಧಿ ಸಿಎಂ: ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ

​ಪ್ರಜಾವಾಣಿ ವಾರ್ತೆ
Published 15 ನವೆಂಬರ್ 2021, 2:41 IST
Last Updated 15 ನವೆಂಬರ್ 2021, 2:41 IST

ಕುಷ್ಟಗಿ: ‘ಮುಖ್ಯಮಂತ್ರಿ ಬದಲಾವಣೆ ವಿಷಯ ಅಪ್ರಸ್ತುತ. ಅವಧಿ ಪೂರ್ಣಗೊಳ್ಳುವವರೆಗೂ ಬಸವರಾಜ ಬೊಮ್ಮಾಯಿಯವರೇ ಮುಖ್ಯಮಂತ್ರಿಯಾಗಿರುತ್ತಾರೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ ಸ್ಪಷ್ಟಪಡಿಸಿದರು.

ಪಟ್ಟಣದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,‘ವಿಧಾನ ಪರಿಷತ್ ಚುನಾವಣೆಯನ್ನು ಅವರ ನೇತೃತ್ವದಲ್ಲೇ ಪಕ್ಷ ಎದುರಿಸಲಿದೆ’ ಎಂದರು.

ಯಾವುದೇ ಆಧಾರ, ಮಾಹಿತಿ ಇಲ್ಲದಿದ್ದರೂ ಕೆಲಸವೇ ಇಲ್ಲದ ಕಾಂಗ್ರೆಸ್‌ನವರು ಬಿಟ್‌ ಕಾಯಿನ್‌ ಹಗರಣವನ್ನು ಪ್ರಸ್ತಾಪಿಸುವ ಮೂಲಕ ಅನಾವಶ್ಯಕವಾಗಿ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ತಪ್ಪುಗಳಾದಾಗ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಅದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುವುದಕ್ಕೆ ಅವಕಾಶವಿದೆ. ಆದರೆ ಅಧಿಕಾರವಿಲ್ಲದೆ ತಳಮಳಿಸುತ್ತಿರುವ ಕಾಂಗ್ರೆಸ್‌ ಪಕ್ಷದವರು ಇಂಥ ಇಲ್ಲಸಲ್ಲದ ವಿಚಾರಗಳನ್ನು ಹರಡುವ ತಮ್ಮ ಹಳೆ ಚಾಳಿಯನ್ನು ಮುಂದುವರೆಸಿದ್ದಾರೆ ಎಂದು ಆರೋಪಿಸಿದರು.

ADVERTISEMENT

ಜಗದೀಶ ಶೆಟ್ಟರ್ ಅವರ ದೆಹಲಿ ಪ್ರವಾಸಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ವೈಯಕ್ತಿಕ ಕೆಲಸಕ್ಕೆ ದೆಹಲಿಗೆ ಹೋಗುತ್ತಿರುವುದಾಗಿ ಸ್ವತಃ ಶೆಟ್ಟರ್ ಅವರೇ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಅದಕ್ಕೆ ಸಂಬಂಧವಿಲ್ಲದ ವಿಷಯ ತಳುಕು ಹಾಕುವುದು ಸರಿಯಲ್ಲ ಎಂದರು.

ಸಂಸದ ಸಂಗಣ್ಣ ಕರಡಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ದೊಡ್ಡನಗೌಡ ಪಾಟೀಲ, ಪಕ್ಷದ ಮುಖಂಡ ಹಾಗೂ ನಿವೃತ್ತ ಐಎಎಸ್‌ ಅಧಿಕಾರಿ ಕೆ.ಶಿವರಾಮು ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.