ಕನಕಗಿರಿ: ‘ಜಾತಿ, ಹಿರಿತನದ ಆಧಾರದ ಮೇಲೆ ಸಚಿವ ಸ್ಥಾನ ನೀಡಲಾಗಿದೆ. ಹಾಲಪ್ಪ ಆಚಾರ ಅವರಿಗೆ ಸಚಿವ ಸ್ಥಾನ ನೀಡಿರುವುದು ಸಂತಸ ತಂದಿದೆ’ ಎಂದು ಶಾಸಕ ಬಸವರಾಜ ದಢೇಸೂಗೂರು ತಿಳಿಸಿದರು.
‘ನಾನು ಸಹ ಸಚಿವ ಸ್ಥಾನದ ಆಕಾಂಕ್ಷಿಯಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮನವಿ ಮಾಡಿಕೊಂಡಿದ್ದೆ. ಆದರೆ ಜಾತಿ ಲೆಕ್ಕಚಾರದಲ್ಲಿ ನನಗೆ ಸಚಿವ ಸ್ಥಾನ ಕೈತಪ್ಪಿದೆ’ ಎಂದು ಅವರು ಇಲ್ಲಿನ ಬಿಜೆಪಿ ಕಚೇರಿ ಯಲ್ಲಿ ಸುದ್ದಿಗಾರರಿಗೆ ಹೇಳಿದರು.
‘ಜಿಲ್ಲಾ ಉಸ್ತುವಾರಿ ಸಚಿವರು ಕನಕಗಿರಿ ವಿಧಾನಸಭಾ ಕ್ಷೇತ್ರ ಹಾಗೂ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಶ್ರಮಿಸುವ ವಿಶ್ವಾಸ ಇದೆ’ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಮುಂದಿನ ದಿನಗಳಲ್ಲಿ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಸಿಗುವ ಭರವಸೆ ಇದೆ ಎಂದು ಅವರು ತಿಳಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ ಅವರು ಕ್ಷೇತ್ರಕ್ಕೆ ಶೀಘ್ರದಲ್ಲಿಯೇ ಭೇಟಿ ನೀಡಿ ತಾಲ್ಲೂಕಿನ ನವಲಿ ಗ್ರಾಮದಲ್ಲಿ ₹1 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಪಿಯು ಕಾಲೇಜು ಕಟ್ಟಡ, ₹30 ಲಕ್ಷ ವೆಚ್ಚದ ಆರೋಗ್ಯ ಕೇಂದ್ರ ಉದ್ಘಾಟನೆ ಮಾಡುವರು. ಇತರ ಕಾರ್ಯಕ್ರಮಗಳಲ್ಲಿಯೂ ಭಾಗವಹಿಸಲಿದ್ದಾರೆ ಎಂದರು.
ಬಿಜೆಪಿ ಮಂಡಲ ಅಧ್ಯಕ್ಷ ಮಹಾಂತೇಶ ಸಜ್ಜನ, ನವಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಭೀಮನಗೌಡ ಹರ್ಲಾಪುರ, ತಾ.ಪಂ ಮಾಜಿ ಸದಸ್ಯ ಬಸವರಾಜ ಸ್ವಾಮಿ, ಪ್ರಮುಖರಾದ ಬಸವನಗೌಡ ಆದಾಪುರ, ಸಣ್ಣ ಕನಕಪ್ಪ, ವಾಗೀಶ ಹಿರೇಮಠ, ಜಿ.ತಿಮ್ಮನಗೌಡ, ವೀರೇಶ ನಾಗವಂಶಿ, ಮಲ್ಲಿಕಾರ್ಜುನ ಬಳಗಾನೂರು, ಗ್ಯಾನಪ್ಪ ಗಾಣದಾಳ, ವಿರುಪಣ್ಣ ಕಲ್ಲೂರು, ಪಂಚಯ್ಯಸ್ವಾಮಿ ಬಿದ್ನೂರುಮಠ, ನಿಂಗಪ್ಪ ನಾಯಕ ಹಾಗೂ ಕಾಡನಗೌಡ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.