ADVERTISEMENT

‘ಗೆಲುವು ನಿರೀಕ್ಷಿತ: ಕಾಂಗ್ರೆಸ್, ಜೆಡಿಎಸ್‌ ಅಪ್ರಸ್ತುತ’

ಉಪಮುಖ್ಯಮಂತ್ರಿ, ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 11 ನವೆಂಬರ್ 2020, 7:32 IST
Last Updated 11 ನವೆಂಬರ್ 2020, 7:32 IST
ಡಾ.ಅಶ್ವತ್ಥ ನಾರಾಯಣ
ಡಾ.ಅಶ್ವತ್ಥ ನಾರಾಯಣ   

ಕೊಪ್ಪಳ: ‘ಶಿರಾ ಮತ್ತು ರಾಜರಾಜೇಶ್ವರಿ ನಗರದಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳ ಗೆಲುವು ನಿಶ್ಚಿತವಾಗಿತ್ತು. ಈ ಚುನಾವಣೆಯಲ್ಲಿ ಕಾಂಗ್ರೆಸ್‌, ಜೆಡಿಎಸ್‌ ಅಪ್ರಸ್ತುತವಾಗಿದೆ’ ಎಂದು ಉನ್ನತ ಶಿಕ್ಷಣ ಸಚಿವ ಹಾಗೂ ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಹೇಳಿದರು.

ಕುಕನೂರು ತಾಲ್ಲೂಕಿನ ತಳಕಲ್ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿಗೆ ಭೇಟಿ ನೀಡಿ ಸಭೆ ನಡೆಸಿ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಬಿಜೆಪಿ ಅಭ್ಯರ್ಥಿಗಳು ಜನರ ನಿರೀಕ್ಷೆಯಂತೆ ಗೆದ್ದಿದ್ದಾರೆ. ಕಾಂಗ್ರೆಸ್‌ಗೆ ರಾಜ್ಯದಲ್ಲಿ ಎಲ್ಲೂ ಅವಕಾಶ ಇಲ್ಲದಂತೆ ಮತದಾರರು ತೀರ್ಪು ನೀಡಿದ್ದಾರೆ. ಅವರ ಆಸೆಯನ್ನು ಸಾಕಾರಗೊಳಿಸುವಂತೆ ಉತ್ತಮವಾಗಿ ಕೆಲಸ ಮಾಡಿ ಮುಂದಿನ ಎಲ್ಲ ಚುನಾವಣೆಗಳಲ್ಲಿ ಗೆಲ್ಲುತ್ತೇವೆ ಎಂದು ಹೇಳಿದರು.

ADVERTISEMENT

ಜಿಲ್ಲೆಯಲ್ಲಿ ಎರಡು ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳನ್ನು ಆರಂಭಿಸಲಾಗಿದೆ. ಮೂಲಸೌಕರ್ಯ, ಸಿಬ್ಬಂದಿ ಕೊರತೆ ಇದೆ. ಅವುಗಳನ್ನು ಹಂತಹಂತವಾಗಿ ಬಗೆಹರಿಸಲಾಗುವುದು. ಒಳ್ಳೆಯ ಉದ್ದೇಶದಿಂದ ಕಾಲೇಜು ಆರಂಭಿಸಲಾಗಿದೆ. ಇಲ್ಲಿ ಅಷ್ಟೇ ಆ ಸಮಸ್ಯೆ ಇಲ್ಲ. ರಾಜ್ಯದ ಎಲ್ಲ ಕಡೆ ಸಮಸ್ಯೆ ಇದೆ. ಕೋವಿಡ್‌ ಸಂಕಷ್ಟ ಸಮಯದಲ್ಲಿ ಹಣಕಾಸಿನ ಕೊರತೆ ಇದೆ. ವಿಶ್ವೇಶ್ವರಯ್ಯ ತಾಂತ್ರಿಕ ವಿವಿಯಿಂದ ₹14 ಕೋಟಿ ಅನುದಾನ ನೀಡಲು ಕುಲಪತಿ ಒಪ್ಪಿದ್ದಾರೆ ಎಂದರು.

ರಾಜ್ಯದಲ್ಲಿ ಮಾದರಿಯಾದ ನೇಮಕಾತಿ ಪ್ರಕ್ರಿಯೆ, ವರ್ಗಾವಣೆ ನಿಯಮ ಜಾರಿಗೊಳಿಸಲಾಗಿದೆ. ರಾಜ್ಯದಲ್ಲಿ ಎಲ್ಲ ಕಾಲೇಜುಗಳಲ್ಲಿ 8 ಸಾವಿರ ಸ್ಮಾರ್ಟ್ ಕಾಲೇಜು ಆರಂಭಿಸಲಾಗುತ್ತಿದೆ. ಇದು ದೇಶದಲ್ಲಿಯೇ ಮೊದಲು. ಅಂಕಪಟ್ಟಿ ಡಿಜಟಲೀಕರಣ ಕುರಿತು ಖಾಸಗಿಯವರಿಗೆ ನೀಡುವ ಕುರಿತು ಯಾವ ನಿರ್ಧರವಾಗಿಲ್ಲ. ವಿಶ್ವವಿದ್ಯಾಲಯಗಳು ಸ್ವಾಯತ್ತ ಸಂಸ್ಥೆ ಆಗಿರುವುದರಿಂದ ಆ ಕುರಿತು ಅವರೇ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು.

ಕೊಪ್ಪಳ ಸ್ನಾತಕೋತ್ತರ ಕೇಂದ್ರಕ್ಕೆ ಕಟ್ಟಡ ನಿರ್ಮಾಣ ಮಾಡುವ ಕುರಿತು ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಿ ಶೀಘ್ರ ನಿರ್ಮಾಣ ಮಾಡಲಾಗುವುದು. ಸರ್ಕಾರದ ಮಟ್ಟದಲ್ಲಿ ಉನ್ನತ ಶಿಕ್ಷಣಕ್ಕೆ ಏನು ಅವಶ್ಯಕತೆ ಇದೆಯೋ ಅದನ್ನು ನಾವು ಪ್ರಾಮಾಣಿಕವಾಗಿ ಮಾಡುತ್ತೇವೆ ಎಂದು ಹೇಳಿದರು.

ಮಾಜಿ ಸಿಎಂ ಸಿದ್ದು ಬದಲಾಗಬೇಕು: ‘ಚುನಾವಣೆ ನಂತರ ಮುಖ್ಯಮಂತ್ರಿ ಬದಲಾಗುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಆದರೆ ಈ ಚುನಾವಣೆ ನಂತರ ಸಿದ್ದರಾಮಯ್ಯನವರೇ ಬದಲಾಗಬೇಕು. ಹಾಗೆ ಮತದಾರರು ತೀರ್ಪು ನೀಡಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನನ್ನ ಬದಲಾವಣೆ ಅಲ್ಲ ಸ್ವಾಮಿ, ಇನ್ನಾದರೂ ನೀವು ಬದಲಾಗಬೇಕು ಎಂದು ಹೇಳಿದ್ದಾರೆ’ ಈ ಕುರಿತು ನಾವೇನೂ ಹೇಳುವುದಿಲ್ಲ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.