ADVERTISEMENT

ಗುಂಪುಗಳ ಮಾರಾಮಾರಿ; 9 ಮಂದಿಗೆ ಗಾಯ

69 ಜನರ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲು

​ಪ್ರಜಾವಾಣಿ ವಾರ್ತೆ
Published 23 ಮೇ 2022, 4:28 IST
Last Updated 23 ಮೇ 2022, 4:28 IST
ಕಾರಟಗಿ ಪೊಲೀಸ್‌ ಠಾಣೆ ಮುಂಭಾಗದಲ್ಲಿ ಪರಿಶಿಷ್ಟ ಜಾತಿ ಸಮುದಾಯದವರು ಭಾನುವಾರ ಧರಣಿ ನಡೆಸಿದರು
ಕಾರಟಗಿ ಪೊಲೀಸ್‌ ಠಾಣೆ ಮುಂಭಾಗದಲ್ಲಿ ಪರಿಶಿಷ್ಟ ಜಾತಿ ಸಮುದಾಯದವರು ಭಾನುವಾರ ಧರಣಿ ನಡೆಸಿದರು   

ಕಾರಟಗಿ (ಕೊಪ್ಪಳ ಜಿಲ್ಲೆ): ತಾಲ್ಲೂಕಿನ ನಂದಿಹಳ್ಳಿ ಗ್ರಾಮದಲ್ಲಿ ಶನಿವಾರ ರಾತ್ರಿ ಅಕ್ರಮ ಮರಳು ಮಾರಾಟ ಮತ್ತು ಹಣ ಹಂಚಿಕೆ ವಿಷಯದಲ್ಲಿ ಪರಿಶಿಷ್ಟ ಜಾತಿ ಮತ್ತು ನಾಯಕ ಸಮುದಾಯಗಳ ನಡುವೆ ಮಾರಾಮಾರಿಯಾಗಿದ್ದು, ಪರಿಶಿಷ್ಟ ಜಾತಿಯ 9 ಮಂದಿ ಗಾಯಗೊಂಡಿದ್ದಾರೆ. ಎರಡೂ ಗುಂಪಿನವರು ಬಡಿಗೆ, ಕಲ್ಲುಗಳಿಂದ ಪರಸ್ಪರ ಹೊಡೆದಾಡಿಕೊಂಡಿದ್ದು, ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

‘ಪರಿಶಿಷ್ಟ ಜಾತಿಯ ದೇವಣ್ಣ ಹಾವಣ್ಣ ಮಾದಿಗ ಎಂಬುವರು 69 ಜನರ ವಿರುದ್ಧ ದೂರು ನೀಡಿದ್ದಾರೆ. ಲಿಂಗಾಯತ, ಉಪ್ಪಾರ ಜನಾಂಗದ ತಲಾ ಒಬ್ಬರು ಮತ್ತು 67 ನಾಯಕ ಸಮುದಾಯದವರ ವಿರುದ್ಧ ಪ್ರಕರಣ ದಾಖಲಾಗಿದೆ. 16 ಆರೋಪಿಗಳನ್ನು ಬಂಧಿಸಲಾಗಿದೆ' ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಭಾನುವಾರ ಇಡೀ ದಿನ ಕಾರಟಗಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ ಪರಿಶಿಷ್ಟ ಜಾತಿ ಸಮುದಾಯದವರು,‘ಪ್ರಕರಣದ ಎಲ್ಲಾ 69 ಜನರನ್ನೂ ಬಂಧಿಸಬೇಕು. ನಮಗೆ ಅನ್ಯಾಯವಾಗಿದೆ. ನಮ್ಮ ವಿರುದ್ಧ ದೂರು ಸ್ವೀಕರಿಸಬಾರದು’ ಎಂದರು.

ADVERTISEMENT

ಕಾನೂನು ಮತ್ತು ಸುವ್ಯವಸ್ಥೆಗೆ ಪೊಲೀಸರು ಕ್ರಮ ಕೈಗೊಂಡಿದ್ದು, ಗ್ರಾಮದಲ್ಲಿ ಇಬ್ಬರು ಇನ್‌ಸ್ಪೆಕ್ಟರ್‌, ನಾಲ್ವರು ಸಬ್‌ ಇನ್‌ಸ್ಪೆಕ್ಟರ್‌, ಎರಡು ಮೀಸಲು ಪಡೆಯ ತುಕಡಿಗಳು ಠಿಕಾಣಿ ಹೂಡಿದ್ದಾರೆ. ಗ್ರಾಮಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಡಿವೈಎಸ್ಪಿ ಭೇಟಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.