ಯಲಬುರ್ಗಾ: ‘ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ವಿವಾಹವನ್ನು ಮಾಡುವುದರಿಂದ ಮಕ್ಕಳಲ್ಲಿ ಆಗುವ ದೈಹಿಕ, ಮಾನಸಿಕ, ಶಾರೀರಿಕ ಬದಲಾವಣೆಯು ವ್ಯತಿರಿಕ್ತ ಪರಿಣಾಮ ಬೀರುವುದು’ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ರಾಮತ್ನಾಳ ಹೇಳಿದರು.
ತಾಲ್ಲೂಕಿನ ಹಿರೇಅರಳಿಹಳ್ಳಿ ಗ್ರಾಮ ಪಂಚಾಯಿತಿ ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿಗಳಿಂದ ಆಯೋಜಿಸಲಾಗಿದ್ದ ಬಾಲ್ಯವಿವಾಹ ತಡೆ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ‘ಇತ್ತೀಚಿನ ದಿನಗಳಲ್ಲಿ ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಕರಲ್ಲಿ ಜಾಗೃತಿ ಮೂಡಿಸುವುದು ಅಗತ್ಯವಿದೆ. ಗಂಭೀರವಾದ ಸಂಗತಿಯಾಗಿರುವುದರಿಂದ ಪ್ರತಿಯೊಬ್ಬರು ಎಚ್ಚೆತ್ತುಕೊಂಡು ನಿಯಂತ್ರಣಕ್ಕೆ ಮುಂದಾಗಬೇಕು’ ಎಂದರು.
ಕೆ.ಎಚ್.ಪಿ.ಟಿ ಮಕ್ಕಳು ಬಾಲ್ಯ ವಿವಾಹ ಜಾಗೃತಿ ನಾಟಕ ಪ್ರದರ್ಶನ ಮಾಡಿದರು. ಗ್ರಾ.ಪಂ. ಅಧ್ಯಕ್ಷೆ ಶಾಂತಮ್ಮ ವಾದಿ ಅಧ್ಯಕ್ಷತೆ ವಹಿಸಿದ್ದರು. ಸದಸ್ಯರಾದ ತೀರ್ಥಪ್ಪ ಭಜಂತ್ರಿ, ಅಭಿವೃದ್ಧಿ ಅಧಿಕಾರಿ ಸೋಮಪ್ಪ ಪೂಜಾರಿ, ಪ್ರೌಢಶಾಲಾ ಮುಖ್ಯೋಪಾಧ್ಯಾಯ ಕಲ್ಲಯ್ಯ ಕೋಮಲಾಪೂರಮಠ, ಮಾಂತೇಶ ವಾದಿ, ಶಾಲಾ ಶಿಕ್ಷಕರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಶಿಕ್ಷಕಿಯರು ಶಾಲಾಮಕ್ಕಳು, ಗ್ರಾಮಸ್ಥರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.