ಯಲಬುರ್ಗಾ: ‘ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವುದರ ಜತೆಗೆ ಒಳ್ಳೆಯ ಸಂಸ್ಕಾರ ಕಲಿಸಿಕೊಡುವ ಅಗತ್ಯ ಇದೆ. ಇದರಲ್ಲಿ ಪಾಲಕರು ಮತ್ತು ಶಿಕ್ಷಕರ ಜವಾಬ್ದಾರಿ ಹೆಚ್ಚಿದೆ’ ಎಂದು ಉಪನ್ಯಾಸಕ ಬಸವರಾಜ ಕೊಂಡಗುರಿ ಹೇಳಿದರು.
ಪಟ್ಟಣದ ಸಾಮಾಜಿಕ, ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಸಂಸ್ಥೆಯಲ್ಲಿ ಮಕ್ಕಳ ದಿನಾಚರಣೆ ಪ್ರಯುಕ್ತ ನಡೆದ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮಕ್ಕಳ ಮನಸ್ಸು ಅತ್ಯಂತ ಸೂಕ್ಷ್ಮವಾಗಿರುತ್ತದೆ. ಈ ವಯಸ್ಸಿನಲ್ಲಿ ಏನನ್ನು ಕಲಿಯುತ್ತಾರೋ ಅದೇ ಶಾಶ್ವತವಾಗಿ ಉಳಿಯುತ್ತದೆ. ಈ ಕಾರಣದಿಂದ ಮಕ್ಕಳಿಗೆ ರಚನಾತ್ಮಕ ಮತ್ತು ಕ್ರಿಯಾತ್ಮಕ ಶಿಕ್ಷಣ ಅಗತ್ಯ ಎಂದರು.
ಶ್ರೀನಿವಾಸ ದೇಸಾಯಿ, ಸಂಸ್ಥೆಯ ನಿರ್ದೇಶಕ ಜಗದೀಶ ಪಾಟೀಲ ಮಾತನಾಡಿದರು. ಸ್ಪರ್ಧೆಯಲ್ಲಿ ಭಾಗವಹಿಸಿದ್ದ ವಿಜೇತ ಮಕ್ಕಳಿಗೆ ಪ್ರಶಸ್ತಿ ಪತ್ರ ಹಾಗೂ ಬಹುಮಾನ ನೀಡಲಾಯಿತು. ಸಂಸ್ಥೆಯ ಕಾರ್ಯದರ್ಶಿ ಸುಧಾರಾಣಿ ನಡುವಿನಮನಿ, ವಿದ್ಯಾರ್ಥಿ ಪ್ರತಿನಿಧಿಯಾಗಿ ಯಶೋಧಾ ಮಾಟರಂಗಿ ಹಾಗೂ ಪಾಲಕರ ಪ್ರತಿನಿಧಿಯಾಗಿ ಜಯಶ್ರೀ ಅಂಗಡಿ ಭಾಗವಹಿಸಿದ್ದರು.
ಶಿಕ್ಷಕರಾದ ಜಗದೀಶ ಕೊಳ್ಳಿಯವರ ಸ್ವಾಗತಿಸಿದರು. ಶರಣಗೌಡ ಪಾಟೀಲ ನಿರೂಪಿಸಿದರು. ಶಿಕ್ಷಕ ಗಿರೀಶ ಕೆಂಚನಗೌಡ್ರ ಅವರು ವಂದಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.