ADVERTISEMENT

ಮುಖ್ಯಮಂತ್ರಿಯಿಂದ ಈಡಿಗ ಸಮುದಾಯ ಒಡೆಯುವ ಹುನ್ನಾರ: ಪ್ರಣವಾನಂದ ಸ್ವಾಮೀಜಿ

​ಪ್ರಜಾವಾಣಿ ವಾರ್ತೆ
Published 10 ಡಿಸೆಂಬರ್ 2023, 13:12 IST
Last Updated 10 ಡಿಸೆಂಬರ್ 2023, 13:12 IST
ಪ್ರಣವಾನಂದ ಸ್ವಾಮೀಜಿ
ಪ್ರಣವಾನಂದ ಸ್ವಾಮೀಜಿ   

ಗಂಗಾವತಿ (ಕೊಪ್ಪಳ ಜಿಲ್ಲೆ): ‘ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿ ಈಡಿಗ ಸಮುದಾಯದವರನ್ನು ವ್ಯವಸ್ಥಿತವಾಗಿ ಒಡೆಯುವ ಹುನ್ನಾರಕ್ಕೆ ಕೈಹಾಕಿದ್ದಾರೆ’ ಎಂದು ಈಡಿಗ ಸಮಾಜದ ನಾರಾಯಣ ಗುರುಗಳ ಶಕ್ತಿ ಪೀಠದ ಪ್ರಣವಾನಂದ ಸ್ವಾಮೀಜಿ ಆರೋಪಿಸಿದರು.

ನಗರದ ಬಸವೇಶ್ವರ ಪ್ರತಿಮೆ ಬಳಿ ಭಾನುವಾರ ಈಡಿಗ, ಬಿಲ್ಲವ, ನಾಮಧಾರಿ ಸೇರಿ ಹಿಂದುಳಿದ ಮತ್ತು ಅತಿ ಹಿಂದುಳಿದ ವರ್ಗಗಳಿಗೆ ಸಾಮಾಜಿಕ ಹಕ್ಕುಗಳನ್ನು ಒದಗಿಸಲು ಆಗ್ರಹಿಸಿ ನಡೆಸಿದ ಒಂದು ದಿನದ ಉಪವಾಸ ಸತ್ಯಾಗ್ರಹದಲ್ಲಿ ಮಾತನಾಡಿದ ಅವರು ‘ಸಿದ್ದರಾಮಯ್ಯ ಈಡಿಗ ಸಮಾಜದ ರಾಜಕೀಯ ನಾಯಕರನ್ನು ನಮ್ಮವರಿಂದಲೇ ಮೂಲೆಗುಂಪು ಮಾಡುವ ಪ್ರಯತ್ನ ಮಾಡುತ್ತಿದ್ದಾರೆ’ ಎಂದರು.

‘ಬಿ.ಕೆ. ಹರಿಪ್ರಸಾದ, ಎಚ್.ಆರ್. ಶ್ರೀನಾಥ್‌ ಸೇರಿ ಹಲವರು ಕಾಂಗ್ರೆಸ್‌ಗೆ 40 ವರ್ಷಗಳಿಂದ ದುಡಿಯುತ್ತಿದ್ದಾರೆ. ಆದರೆ ಸಿದ್ದರಾಮಯ್ಯ ಪಕ್ಷದಲ್ಲಿ ಸ್ಥಾನಮಾನ ನೀಡದೆ ಈಡಿಗ ಸಮಾ‌ಜದ ನಾಯಕರನ್ನು ಮುಗಿಸುವ ಹುನ್ನಾರ ನಡೆಸಿದ್ದಾರೆ’ ಎಂದರು.

ADVERTISEMENT

‘ಹರಿಪ್ರಸಾದ್ ಅವರನ್ನು ರಾಜಕೀಯವಾಗಿ ಮುಗಿಸಬೇಕೆಂಬ ದುರುದ್ದೇಶದಿಂದ ಬೆಂಗಳೂರಿನಲ್ಲಿ ಈಡಿಗರ ಸಮಾವೇಶ ನಡೆಸಲಾಗಿದೆ. ಸಮಾವೇಶಕ್ಕೆ ನಮ್ಮ ಅಭ್ಯಂತರವಿಲ್ಲ, ಆದರೆ,ನಮ್ಮದೇ ಸಮುದಾಯದ ಜನರನ್ನು ಬಳಸಿಕೊಂಡು ಸಮಾಜ ಒಡೆಯುವುದನ್ನು ಖಂಡಿತವಾಗಿಯೂ ಒಪ್ಪುವುದಿಲ್ಲ. ಏನೇ ಆದರೂ ನಾವೆಲ್ಲರೂ ಒಂದೇ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.