ಕೊಪ್ಪಳ: ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆಯು ವ್ಯಾಪಕವಾಗಿ ಹರಡುತ್ತಿರುವ ಕಾರಣ ಪ್ರಸಕ್ತ ನಿರ್ಬಂಧಗಳಿಂದ ಹಲವು ಅಸಂಘಟಿತ ವಲಯಗಳಿಗೆ ಪ್ರತಿಕೂಲ ಪರಿಣಾಮ ಉಂಟಾಗಿದ್ದು, ಕಾರ್ಮಿಕ ಇಲಾಖೆ ವ್ಯಾಪ್ತಿಯಲ್ಲಿ ಬರುವ ಅಸಂಘಟಿತ ಕಾರ್ಮಿಕರಿಗೆ ಮುಖ್ಯಮಂತ್ರಿ ಪರಿಹಾರ ಧನ ಘೋಷಿಸಿದ್ದು, ಜಿಲ್ಲೆಯ ಅರ್ಹ ಅಸಂಘಟಿತ ವಲಯದ ಕಾರ್ಮಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಸಂಘಟಿತ ಕಾರ್ಮಿಕರಾದ ಕ್ಷೌರಿಕರು, ಅಗಸರು, ಟೈಲರ್ಗಳು, ಹಮಾಲಿಗಳು, ಚಿಂದಿ ಆಯುವವರು, ಕುಂಬಾರರು, ಭಟ್ಟಿಕಾರ್ಮಿಕರು, ಅಕ್ಕಸಾಲಿಗರು, ಮೆಕ್ಯಾನಿಕ್ಗಳು, ಕಮ್ಮಾರರು ಮತ್ತು ಗೃಹಕಾರ್ಮಿಕರಿಗೆ ತಲಾ ₹2ಸಾವಿರದಂತೆಒಂದು ಬಾರಿಯ ನೆರವನ್ನು ನೀಡುವುದಾಗಿ ಮುಖ್ಯಮಂತ್ರಿಗಳು ಘೋಷಿಸಿದ್ದು, ಅರ್ಹ ಫಲಾನುಭವಿಗಳು ಜು.31 ರೊಳಗಾಗಿ ಸೇವಾಸಿಂಧು ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
2020ನೇ ಸಾಲಿನಲ್ಲಿ ಒಂದು ಬಾರಿಯ ನೆರವು ಪಡೆದ ಅಗಸರು ಮತ್ತು ಕ್ಷೌರಿಕ ಫಲಾನುಭವಿ ಕುಟುಂಬಗಳು ಮತ್ತೊಮ್ಮೆ ಪ್ರತ್ಯೇಕ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಪ್ರಸಕ್ತ ಸಾಲಿನಲ್ಲಿ ನೆರವು ಪಡೆಯದ ಅಗಸ ಮತ್ತು ಕ್ಷೌರಿಕ ವೃತ್ತಿಯಲ್ಲಿ ತೊಡಗಿರುವ ಕುಟುಂಬದ ಒಬ್ಬ ಕಾರ್ಮಿಕರು ಅರ್ಜಿ ಸಲ್ಲಿಸಬಹುದು.
ನೆರವು ಪಡೆಯಲು ಅರ್ಹತೆ: ವಯೋಮಿತಿ 18 ರಿಂದ 65 ವರ್ಷದೊಳಗಿರಬೇಕು. ಕುಟುಂಬದಲ್ಲಿ ಒಬ್ಬರು ಮಾತ್ರ ಪರಿಹಾರ ಧನ ಪಡೆಯಲು ಅರ್ಹರಿದ್ದು, ಒಬ್ಬರು ಮಾತ್ರ ಅರ್ಜಿ ಸಲ್ಲಿಸುವುದು. ಕಟ್ಟಡ ಕಾರ್ಮಿಕರು ಹಾಗೂ ಘೋಷಿತ 11 ವರ್ಗಗಳಲ್ಲಿ ಕೇವಲ ಒಂದು ವೃತ್ತಿಗೆ ಮಾತ್ರ ಕುಟುಂಬದಲ್ಲಿನ ಒಬ್ಬ ಸದಸ್ಯರು ಮಾತ್ರ ಪರಿಹಾರಕ್ಕಾಗಿ ಅರ್ಜಿ ಸಲ್ಲಿಸಲು ಅರ್ಹರು.
ಬಡತನ ರೇಖೆಗಿಂತ ಕೆಳಗೆ ಇರುವ (ಬಿ.ಪಿ.ಎಲ್ ಕಾರ್ಡ್ ಹೊಂದಿರುವ) ಅಸಂಘಟಿತ ಕಾರ್ಮಿಕರು ಮಾತ್ರ ಪರಿಹಾರ ಪಡೆಯಲು ಅರ್ಹರು. ಕರ್ನಾಟಕದಲ್ಲಿ ವೃತ್ತಿ ನಿರ್ವಹಿಸುತ್ತಿರುವ ಹೊರ ರಾಜ್ಯದ ಕಾರ್ಮಿಕರು ಸಹ ಪರಿಹಾರ ಪಡೆಯಲು ಅರ್ಹರಾಗಿರುತ್ತಾರೆ.
ಆದರೆ, ಅಂತಹ ಫಲಾನುಭವಿ ಅಥವಾ ಕಾರ್ಮಿಕರು ಕರ್ನಾಟಕ ಸರ್ಕಾರ ನೀಡುವ ಬಿ.ಪಿ.ಎಲ್. ಕಾರ್ಡ್ ಹೊಂದಿರಬೇಕು. ಅರ್ಜಿ ಸಲ್ಲಿಸಿರುವ ಕಾರ್ಮಿಕರು ವೃತ್ತಿ ನಿರ್ವಹಿಸುತ್ತಿರುವ ಕುರಿತು ಸಂಬಂಧಿಸಿದ ಅಧಿಕಾರಿಗಳಿಂದ ಪ್ರಮಾಣ ಪತ್ರ ಪಡೆದಿರಬೇಕು. ಆಧಾರ್ ಸಂಖ್ಯೆ ಜೋಡಣೆ ಆಗಿರುವ ಬ್ಯಾಂಕ್ ಖಾತೆ ಹೊಂದಿರಬೇಕು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.