ಕನಕಗಿರಿ: ಜಿಲ್ಲೆಯಲ್ಲಿ ನಡೆಯುವ ಕಾನೂನು ಬಾಹಿರ ಚಟುವಟಿಕೆಗಳ ವಿರುದ್ಧ ನಿರಂತರ ಹೋರಾಟ ನಡೆಸಿಕೊಂಡು ಬರುತ್ತಿರುವ ಪ್ರಗತಿಪರ ಸಂಘಟನೆಗಳ ಮುಖಂಡರು ಹಾಗೂ ಬರಹಗಾರರ ವಿರುದ್ಧ ಅನಗತ್ಯವಾಗಿ ಪೊಲೀಸ್ ಪ್ರಕರಣ ದಾಖಲಿಸಿರುವುದು ಸರಿಯಲ್ಲ ಎಂದು ಹಿರಿಯ ಹೋರಾಟಗಾರ ಜೆ. ಭಾರಧ್ವಜಾ ತಿಳಿಸಿದರು.
ಜಿಲ್ಲೆಯ ಬರಹಗಾರರು ಹಾಗೂ ಪ್ರಗತಿಪರ ಸಂಘಟನೆಗಳ ವಿರುದ್ದ ದಾಖಲಿಸಿರುವ ಘಟನೆಯನ್ನು ಖಂಡಿಸಿ ವಿವಿಧ ಪ್ರಗತಿಪರ ಹಾಗೂ ದಲಿತ ಸಂಘಟನೆಗಳ ಮುಖಂಡರು ಬುಧವಾರ ಇಲ್ಲಿನ ತಹಶೀಲ್ದಾರ್ ರವಿ ಅಂಗಡಿ ಅವರಿಗೆ ಮನವಿ ಪತ್ರ ಸಲ್ಲಿಸಿದ ನಂತರ ಅವರು ಮಾತನಾಡಿದರು.
ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಸಂಗೀತ ಅವರು ಪ್ರಕರಣ ದಾಖಲಿಸಿರುವದನ್ನು ಗಂಭೀರವಾಗಿ ಪರಿಗಣಿಸಿ ಕೊಪ್ಪಳದ ನಗರ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಮೌನೇಶ ಪಾಟೀಲ ಅವರನ್ನು ಸೇವೆಯಿಂದ ಅಮಾನತ್ತುಗೊಳಿಸಬೇಕು ಹಾಗೂ ಪ್ರಕರಣಗಳನ್ನು ಹಿಂದಕ್ಕೆ ಪಡೆದುಕೊಳ್ಳಬೇಕೆಂದು ಅವರು ಒತ್ತಾಯಿಸಿದರು.
ವಿಠ್ಠಪ್ಪ ಗೋರ್ಲಂಟಿ, ಅಲ್ಲಮಪ್ರಭು ಬೆಟ್ಟದೂರ, ಡಿ.ಎಚ್.ಪೂಜಾರ, ಆನಂದ ಭಂಡಾರಿ, ಬಸವರಾಜ ಶೀಲವಂತರ ಸೇರಿದಂತೆ 13 ಜನರು ಅವರು ಅನ್ಯಾಯ, ಅಕ್ರಮಗಳ ವಿರುದ್ದ ಧ್ವನಿ ಎತ್ತಿ ಬಯಲಿಗೆ ತಂದಿದ್ದಾರೆ ಇಂಥವರ ವಿರುದ್ದ ಪ್ರಕರಣ ದಾಖಲಿಸಿ ಸಂವಿಧಾನಕ್ಕೆ ಅಪಚಾರ ಎಸಗಲಾಗಿದೆ ಎಂದು ಭಾರದ್ವಾಜ್ ಅವರು ಆಕ್ರೋಶ ವ್ಯಕ್ತಪಡಿಸಿದರು.
ಪೊಲೀಸ್ ಅಧಿಕಾರಿ ಮೌನೇಶ ಪಾಟೀಲ ಅವರನ್ನು ಅಮಾನತ್ತುಗೊಳಿಸಬೇಕು. ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ಒಳಪಡಿಸಬೇಕೆಂದು ಅವರು ಒತ್ತಾಯಿಸಿದರು.
ತಹಶೀಲ್ದಾರ್ ರವಿ ಅಂಗಡಿ ಅವರಿಗೆ ಮುಖಂಡರು ಮನವಿ ಪತ್ರ ಸಲ್ಲಿಸಿದರು.
ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ನಾಗೇಶ ಬಡಿಗೇರ, ಪಾಮಣ್ಣ ಅರಳಿಗನೂರ, ನೀಲಕಂಠ ಬಡಿಗೇರ, ಹಸೇನಸಾಬ, ಸಣ್ಣ ಹನುಮಂತಪ್ಪ, ಶೇಷಪ್ಪ ಪೂಜಾರ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.