ಕೊಪ್ಪಳ: ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಕಲ್ಯಾಣ ಕರ್ನಾಟಕ ಜಿಲ್ಲೆಗಳ ನೋಂದಾಯಿತ ಕಾರ್ಮಿಕರ ಸಂಘಗಳ ಒಕ್ಕೂಟದ ಪದಾಧಿಕಾರಿಗಳು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕ ಸಂಘಟನೆಗಳ ಒಕ್ಕೂಟದ ಸಹಯೋಗದಲ್ಲಿ ನಡೆದ ಪ್ರತಿಭಟನಾ ಮೆರವಣಿಗೆ ಅಶೋಕ ವೃತ್ತದಿಂದ ಆರಂಭವಾಯಿತು.
ಕಾರ್ಮಿಕರ ಕಲ್ಯಾಣ ಮಂಡಳಿ ಹೊಸದಾಗಿ ಜಾರಿಗೆ ಮಾಡಿರುವ ಕುಟುಂಬ ಐಡಿ ಅಪ್ಲಿಕೇಷನ್ ರದ್ದು ಮಾಡಬೇಕು. ನೈಜ ಕಾರ್ಮಿಕರ ವಿವಿಧ ಸೌಲಭ್ಯಗಳ ಅರ್ಜಿಗಳನ್ನು ಸಕಾರಣವಿಲ್ಲದೆ ತಿರಸ್ಕರಿಸುವುದನ್ನು ನಿಲ್ಲಿಸಬೇಕು, 2024–25ನೇ ಆರ್ಥಿಕ ವರ್ಷದಲ್ಲಿ ರಾಜ್ಯದಾದ್ಯಂತ ಕಾಟಾಚಾರಕ್ಕೆ ಎನ್ನುವಂತೆ ಆರೋಗ್ಯ ತಪಾಸಣೆ ಮಾಡಿ ಬೋಗಸ್ ಬಿಲ್ ಸೃಷ್ಟಿಮಾಡಲಾಗಿದೆ. ಇದರಲ್ಲಿ ₹800 ಕೋಟಿ ಭ್ರಷ್ಟಾಚಾರ ನಡೆದಿದ್ದು, ತನಿಖೆ ನಡೆಸಬೇಕು ಹಾಗೂ ಫಲಾನುಭವಿಗಳಿಗೆ ಹೆರಿಗೆ ಮತ್ತು ಮದುವೆ ಸಹಾಯಧನದ ಬಾಂಡ್ಗಳನ್ನು ಇದುವರೆಗೂ ನೀಡಿಲ್ಲ, ಈ ಕುರಿತು ಕ್ರಮ ವಹಿಸಬೇಕು ಎಂದು ಹೋರಾಟಗಾರರು ಆಗ್ರಹಿಸಿದರು.
ಸರ್ಕಾರಿ ಆಸ್ಪತ್ರೆಯಲ್ಲಿ ಅತ್ಯಂತ ಕಡಿಮೆ ಹಣದಲ್ಲಿ ಆಗುವ ಕಾರ್ಮಿಕರ ವೈದ್ಯಕೀಯ ಪರೀಕ್ಷೆಯನ್ನು ಬಹಳಷ್ಟು ಹಣ ತೆತ್ತು ಮಾಡಿಸಲಾಗುತ್ತಿದೆ. ಇದರಲ್ಲಿಯೂ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪಿಸಿದರು.
ಒಕ್ಕೂಟದ ಅಧ್ಯಕ್ಷ ರಮೇಶ ಜಿ. ಘೋರ್ಪಡೆ, ಉಪಾಧ್ಯಕ್ಷ ಶರಣಪ್ಪ ರೊಟ್ಟಿ, ಕಾರ್ಯದರ್ಶಿ ಮೆಹಬೂಬ್ ಮಣ್ಣೂರ, ಖಜಾಂಚಿ ಮಹೇಶ ಗೋಡೆಕಾರ ಸೇರಿದಂತೆ ಅನೇಕ ಕಾರ್ಮಿಕರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.