ಕೊಪ್ಪಳ: ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಮಂಗಳವಾರ ಬೆಳಗಿನ ಜಾವದಿಂದಲೇ ಬಿರುಸಿನ ಮಳೆಯಾಗಿದೆ.
ಕಳೆದ ಎರಡು ದಿನಗಳಿಂದ ತಡರಾತ್ರಿ ಜಿಟಿ ಜಿಟಿ ಮಳೆ ಸುರಿದಿತ್ತು. ಮಂಗಳವಾರ ಬೆಳಿಗ್ಗೆ ಗುಡುಗಿನ ಆರ್ಭಟದೊಂದಿಗೆ ಮಳೆ ಸುರಿಯುತ್ತಿದೆ. ಗೌರಿ ಹಬ್ಬದ ಆಚರಣೆಗೆ ಪೂಜಾ ಸಾಮಗ್ರಿಗಳನ್ನು ತರಲು ಮಾರುಕಟ್ಟೆಗೆ ಹೋಗಬೇಕಿದ್ದ ಜನ ಇದರಿಂದ ಪರದಾಡಬೇಕಾಯಿತು.
ರಸ್ತೆ ಬದಿ ಹೂವು, ಹಣ್ಣು ಹಾಗೂ ತರಕಾರಿ ಮಾರಾಟ ಮಾಡುವ ವ್ಯಾಪಾರಿಗಳು ಎಂದಿನಂತೆ ವ್ಯಾಪಾರವಿಲ್ಲದೆ ಪರದಾಡಬೇಕಾಯಿತು. ಬಸ್ ನಿಲ್ದಾಣ ಸಮೀಪ ಮಾರಾಟಕ್ಕೆ ಇಟ್ಟಿದ ಗಣೇಶ ಮೂರ್ತಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಯಿತು.
ಕೊಪ್ಪಳ ತಾಲ್ಲೂಕಿನ ಮುನಿರಾಬಾದ್ ಹಾಗೂ ಅಳವಂಡಿಯಲ್ಲಿ ಬೆಳಿಗ್ಗೆ 6 ಗಂಟೆಯಿಂದ ಮಳೆಯಾಗುತ್ತಿದೆ. ಕುಷ್ಟಗಿ ತಾಲ್ಲೂಕಿನ ಹನುಮಸಾಗರ, ಗಂಗಾವತಿ, ಆನೆಗೊಂದಿ ಭಾಗದಲ್ಲಿ ಜೋರು ಮಳೆ ಸುರಿಯುತ್ತಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.