ADVERTISEMENT

ಲಸಿಕೆ ಕುರಿತು ತಿಳಿವಳಿಕೆ ಮೂಡಿಸಿ: ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ಪಾಟೀಲ

ಶಿಕ್ಷಕ, ಉಪನ್ಯಾಸಕರ ಕುಟುಂಬಕ್ಕೂ ಕೋವಿಡ್‌ ಲಸಿಕೆ

​ಪ್ರಜಾವಾಣಿ ವಾರ್ತೆ
Published 20 ಜೂನ್ 2021, 2:55 IST
Last Updated 20 ಜೂನ್ 2021, 2:55 IST
ಕೊಪ್ಪಳದ ಸರ್ಕಾರಿ ನೌಕರರ ಸಾಂಸ್ಕೃತಿಕ ಭವನದಲ್ಲಿ ನಡೆದ ಉಚಿತ ಕೋವಿಡ್ ಲಸಿಕೆ ನೀಡಿಕೆ ಕಾರ್ಯಕ್ರಮಕ್ಕೆ ಸಚಿವ ಬಿ.ಸಿ.ಪಾಟೀಲ ಚಾಲನೆ ನೀಡಿದರು
ಕೊಪ್ಪಳದ ಸರ್ಕಾರಿ ನೌಕರರ ಸಾಂಸ್ಕೃತಿಕ ಭವನದಲ್ಲಿ ನಡೆದ ಉಚಿತ ಕೋವಿಡ್ ಲಸಿಕೆ ನೀಡಿಕೆ ಕಾರ್ಯಕ್ರಮಕ್ಕೆ ಸಚಿವ ಬಿ.ಸಿ.ಪಾಟೀಲ ಚಾಲನೆ ನೀಡಿದರು   

ಕೊಪ್ಪಳ: ‘ಕೋವಿಡ್ ನಿಯಂತ್ರಣದಲ್ಲಿ ಶಿಕ್ಷಕರು ಉತ್ತಮ ಕೆಲಸ ಮಾಡುತ್ತಿದ್ದು, ಅವರನ್ನು ಕೋವಿಡ್ ವಾರಿಯರ್ಸ್ ಎಂದು ಘೋಷಿಸಲಾಗಿದೆ. ಅದಕ್ಕಾಗಿ ಆದ್ಯತೆ ಮೇರೆಗೆ ಉಚಿತವಾಗಿ ಲಸಿಕೆ ಹಾಕಲಾಗುತ್ತಿದ್ದು, ಲಸಿಕೆ ಪಡೆದ ಶಿಕ್ಷಕರು ಜನರಲ್ಲಿ ತಿಳಿವಳಿಕೆ ಮೂಡಿಸುವ ಕೆಲಸ ಮಾಡಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ ಹೇಳಿದರು.

ನಗರದ ಜಿಲ್ಲಾ ಸರ್ಕಾರಿ ನೌಕರರ ಭವನದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ನಗರಸಭೆ, ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಈಶಾನ್ಯ ಕರ್ನಾಟಕ ಶಿಕ್ಷಕರ ಸಂಘಟನೆಗಳ ಸಹಯೋಗದಲ್ಲಿ ಆಯೋಜಿಸಿದ್ದ ಶಿಕ್ಷಕರಿಗೆ ಮತ್ತು ಉಪನ್ಯಾಸಕರಿಗೆ ಉಚಿತ ಕೋವಿಡ್ ಲಸಿಕೆ ನೀಡಿಕೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕೋವಿಡ್ ಮೂರನೇ ಅಲೆ ಎದುರಿಸಲು ನಾವೆಲ್ಲರೂ ಸಿದ್ಧರಾಗಬೇಕಾಗಿದೆ. ಶಿಕ್ಷಕರಿಗೆ ಹೆಚ್ಚಿನ ಜವಾಬ್ದಾರಿ ಇದ್ದು, ಮೂರನೇ ಅಲೆಯಲ್ಲಿ ಮಕ್ಕಳಿಗೆ ಹೆಚ್ಚಿನ ತೊಂದರೆಯಾಗುವ ಕುರಿತು ತಜ್ಞರು ತಿಳಿಸಿದ್ದಾರೆ. ಮಕ್ಕಳಿಗೆ ಹಾಗೂ ಪೋಷಕರಿಗೆ ಸುರಕ್ಷತಾ ಕ್ರಮಗಳನ್ನು ವಹಿಸುವಂತೆ ಸೂಕ್ತ ತಿಳಿವಳಿಕೆ ನೀಡಬೇಕು. ಹಳ್ಳಿಗಳಿಗೆ ತೆರಳಿ, ಜಾಗೃತಿ ಮೂಡಿಸುವ ಮೂಲಕ ಮಕ್ಕಳನ್ನು ರಕ್ಷಿಸಬೇಕು ಎಂದು ಅವರು ಶಿಕ್ಷಕರಿಗೆ ಸಲಹೆ ನೀಡಿದರು.

ADVERTISEMENT

ವಿಧಾನ ಪರಿಷತ್ ಸದಸ್ಯ ಶಶೀಲ್.ಜಿ.ನಮೋಶಿ ಮಾತನಾಡಿ,‘ಶಿಕ್ಷಕರನ್ನು ಕೋವಿಡ್ ವಾರಿಯರ್ಸ್ ಎಂದು ಘೋಷಿಸಿದ್ದು, ಅವರಿಗೆ ಕೋವಿಡ್ ಲಸಿಕೆ ಹಾಕಿಸಲಾಗುತ್ತಿದೆ. ಶಿಕ್ಷಕರು ಮಕ್ಕಳಿಗೆ ಶಿಕ್ಷಣ ನೀಡುವುದರ ಜತೆಗೆ ಚುನಾವಣೆ, ಕೋವಿಡ್ ಕರ್ತವ್ಯ ಸೇರಿದಂತೆ ಇತರೆ ಎಲ್ಲ ಕೆಲಸಗಳಲ್ಲಿ ತೊಡಗಿರುತ್ತಾರೆ. ಹಾಗಾಗಿ ಸುರಕ್ಷತೆಯ ದೃಷ್ಟಿಯಿಂದ ಎಲ್ಲ ಶಿಕ್ಷಕರು ಲಸಿಕೆ ಹಾಕಿಸಿಕೊಳ್ಳಬೇಕು’ ಎಂದರು.

ಲಸಿಕಾ ಕಾರ್ಯಕ್ರಮದಲ್ಲಿ 800 ಶಿಕ್ಷಕರಿಗೆ ಲಸಿಕೆ ನೀಡಲಾಯಿತು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಶಂಭುಲಿಂಗನಗೌಡ ಪಾಟೀಲ ಹಲಗೇರಿ ಮಾತನಾಡಿದರು.

ಸಂಸದ ಸಂಗಣ್ಣ ಕರಡಿ, ಶಾಸಕ ಅಮರೇಗೌಡ ಬಯ್ಯಾಪುರ, ಹಾಲಪ್ಪ ಆಚಾರ, ಕೆ.ರಾಘವೇಂದ್ರ ಹಿಟ್ನಾಳ್, ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್, ಜಿಲ್ಲಾ ಪಂಚಾಯಿತಿ ಸಿಇಒ ರಘುನಂದನ್ ಮೂರ್ತಿ, ಎಸ್‌ಪಿ ಟಿ.ಶ್ರೀಧರ್, ಜಿಲ್ಲಾ ಪಂಚಾಯಿತಿ ಸದಸ್ಯ ಗವಿಸಿದ್ದಪ್ಪ ಕರಡಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಟಿ.ಲಿಂಗರಾಜು, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ದೊಡ್ಡಬಸಪ್ಪ ನೀರಲಕೇರಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಉಮೇಶ ಪೂಜಾರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.