ADVERTISEMENT

ಕ್ರಿಯಾಯೋಜನೆ ಸಿದ್ಧಪಡಿಸಿ, ಪ್ರಸ್ತಾವ ಸಲ್ಲಿಸಿ

ಅಂಜನಾದ್ರಿ ದೇವಸ್ಥಾನದ ಅಭಿವೃದ್ಧಿ ಸಭೆಯಲ್ಲಿ ಪಿ.ಸುನೀಲ್‌ ಕುಮಾರ ಸೂಚನೆ

​ಪ್ರಜಾವಾಣಿ ವಾರ್ತೆ
Published 3 ಜೂನ್ 2020, 14:36 IST
Last Updated 3 ಜೂನ್ 2020, 14:36 IST
ಕೊಪ್ಪಳದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಮಾತನಾಡಿದರು
ಕೊಪ್ಪಳದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಮಾತನಾಡಿದರು   

ಕೊಪ್ಪಳ: ಗಂಗಾವತಿ ತಾಲ್ಲೂಕಿನ ಅಂಜನಾದ್ರಿ ಬೆಟ್ಟದ ಆಂಜನೇಯ ಸ್ವಾಮಿ ದೇವಸ್ಥಾನದ ಸಮಗ್ರ ಅಭಿವೃದ್ಧಿಗಾಗಿ ಪ್ರಸಕ್ತ ಸಾಲಿನ ಆಯವ್ಯಯದಲ್ಲಿ ಸರ್ಕಾರ ₹ 20 ಕೋಟಿ ಅನುದಾನ ಘೋಷಿಸಿದ್ದು, ದೇವಸ್ಥಾನಕ್ಕೆ ಬರುವ ಭಕ್ತರಿಗೆ ಮೂಲಸೌಕರ್ಯ ಒದಗಿಸಲು ಮತ್ತು ದೇವಾಲಯದ ಅಭಿವೃದ್ಧಿಗಾಗಿ ಬಳಸಲು ಕ್ರಿಯಾಯೋಜನೆ ಸಿದ್ಧಪಡಿಸಿ, ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಜಿಲ್ಲಾ ಪ್ರವಾಸೋದ್ಯಮ ಇಲಾಖೆಗೆ ಅನುದಾನ ನೀಡಲಾಗಿದ್ದು, ಆ ಇಲಾಖೆಯ ಮೂಲಕ ಅಂಜನಾದ್ರಿ ಬೆಟ್ಟದಲ್ಲಿ ಭಕ್ತರು ಹಾಗೂ ಯಾತ್ರಾರ್ತಿಗಳ ಅನುಕೂಲಕ್ಕಾಗಿ ರೋಪ್‌ವೇ ಸೌಲಭ್ಯ ಒದಗಿಸುವುದು, ಆಂಜನೇಯ ಸ್ವಾಮಿ ದೇವಸ್ಥಾನದ ಪ್ರದಕ್ಷಿಣೆ ರಸ್ತೆಗಳನ್ನು ನಿರ್ಮಾಣ ಮಾಡುವುದು, ಅಂಜನಾದ್ರಿ ಬೆಟ್ಟದ ಮುಂಭಾಗಕ್ಕೆ ಹೊಂದಿಕೊಂಡಂತೆ ಅಂದಾಜು ಆರು ಎಕರೆ ಜಮೀನು ಭೂಸ್ವಾಧೀನ ಮಾಡಿಕೊಳ್ಳುವುದು, ಆಂಜನೇಯ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಮಾಡುವ ಕುರಿತು, ಪಂಪಾ ಸರೋವರದ ಅಭಿವೃದ್ಧಿ, ಅಂಜನಾದ್ರಿ ಬೆಟ್ಟದ ಹತ್ತಿರ ಯಾತ್ರಿ ನಿವಾಸದ ನಿರ್ಮಾಣ ಮಾಡಲು ಯೋಜಿಸಲಾಗಿದೆ ಎಂದರು.

ADVERTISEMENT

ರೋಪ್ ವೇ ನಿರ್ಮಾಣದ ಖರ್ಚು ವೆಚ್ಚದ ಕುರಿತು ಒಂದು ವಾರದೊಳಗೆ ಅಂದಾಜು ವೆಚ್ಚದ ಪಟ್ಟಿ ಸಿದ್ಧಪಡಿಸಿ ಸಲ್ಲಿಸಬೇಕು.ದೇವಸ್ಥಾನದ ಜೀರ್ಣೋದ್ಧಾರದ ಸಂದರ್ಭದಲ್ಲಿ ದೇವಸ್ಥಾನದ ಮೂಲ ವಿನ್ಯಾಸಕ್ಕೆ ಧಕ್ಕೆ ಬರದಂತೆ ವಿನ್ಯಾಸ ರೂಪಿಸಬೇಕು. ಪ್ರದಕ್ಷಿಣೆ ರಸ್ತೆ ನಿರ್ಮಾಣದ ಜೊತೆಗೆ ಅಲ್ಲಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಪರಿಣತರಿಂದ ಸೂಕ್ತ ನಕ್ಷೆ ತಯಾರಿಸಿ ಆ ಪ್ರಕಾರ ಕಾಮಗಾರಿಗಳನ್ನು ಆರಂಭಿಸಬೇಕುಎಂದು ಲೋಕೋಪಯೋಗಿ ಇಲಾಖೆ ಅಧಿಕಾರಿಗೆ ಸೂಚಿಸಿದರು.

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕ ಕನಕರೆಡ್ಡಿ ನಾರಾಯಣರೆಡ್ಡಿ, ನಿರ್ಮಿತಿ ಕೆಂದ್ರದ ಶಶಿಧರ ಪಾಟೀಲ್, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ರಾಜಶೇಖರ ನಾಡಗೀರ, ಹವಾಮಾದ ಪ್ರತಿನಿಧಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.