ADVERTISEMENT

ಕೊಪ್ಪಳ | ಕಟ್ಟುನಿಟ್ಟಾಗಿ SSLC ಪರೀಕ್ಷೆ ನಡೆಸಲು ಡಿಡಿಪಿಐ ಸೂಚನೆ

ಪರೀಕ್ಷಾ ಕೇಂದ್ರದ ಶಿಕ್ಷಕರಿಗೆ ನೋಟಿಸ್‌

​ಪ್ರಜಾವಾಣಿ ವಾರ್ತೆ
Published 4 ಏಪ್ರಿಲ್ 2023, 13:34 IST
Last Updated 4 ಏಪ್ರಿಲ್ 2023, 13:34 IST
   

ಕುಷ್ಟಗಿ (ಕೊಪ್ಪಳ ಜಿಲ್ಲೆ): ಜಿಲ್ಲೆಯ ಕುಷ್ಟಗಿ ತಾಲ್ಲೂಕಿನ ತಾವರಗೇರಾದಲ್ಲಿ ಸೋಮವಾರ ಎಸ್ಸೆಸ್ಸೆಲ್ಸಿ ಗಣಿತ ವಿಷಯದ ಪರೀಕ್ಷೆ ನಡೆಯುತ್ತಿದ್ದಾಗ ಅಕ್ರಮದ ಆರೋಪ ಬೆಳಕಿಗೆ ಬಂದ ಬೆನ್ನಲ್ಲೇ ಅಲ್ಲಿನ ಪರೀಕ್ಷಾ ಕೇಂದ್ರದಲ್ಲಿ ಕಾರ್ಯನಿರ್ವಹಿಸಿದ ಶಿಕ್ಷಕರಿಗೆ ಇಲಾಖೆ ನೋಟಿಸ್‌ ಜಾರಿ ಮಾಡಿದೆ. ಕೆಲವರನ್ನು ಅಲ್ಲಿನ ಕೇಂದ್ರದ ಕಾರ್ಯದಿಂದ ಬಿಡುಗಡೆ ಮಾಡಲಾಗಿದೆ.

ಈ ಕುರಿತು ಮಂಗಳವಾರ 'ಪ್ರಜಾವಾಣಿ'ಗೆ ಮಾಹಿತಿ ನೀಡಿದ ಕುಷ್ಟಗಿ ಕ್ಷೇತ್ರ ಶಿಕ್ಷಣಾಧಿಕಾರಿ ಸುರೇಂದ್ರ ಕಾಂಬಳೆ ‘ಸಾಮೂಹಿಕ ನಕಲಿಗೆ ಶಿಕ್ಷಕರೇ ಸಹಕರಿಸಿರುವ ಪತ್ರಿಕಾ ವರದಿಗಳಿಗೆ ಸಂಬಂಧಿಸಿದಂತೆ ಆ ಕೇಂದ್ರದಲ್ಲಿದ್ದ ಶಿಕ್ಷಕರಿಗೆ ನೋಟಿಸ್‌ ನೀಡಲಾಗಿದೆ’ ಎಂದರು.

‘ಎಲ್ಲ ಪರೀಕ್ಷಾ ಕೇಂದ್ರಗಳಿಗೆ ವಿಧಿಸಲಾಗಿರುವ 144 ಕಲಂ ನಿಷೇಧಾಜ್ಞೆ ಅನ್ವಯ ಪೊಲೀಸ್ ಬಂದೋಬಸ್ತ್‌ ಕಲ್ಪಿಸಬೇಕು. ಅನಧಿಕೃತವಾಗಿ ಬೇರೆಯವರು ಪರೀಕ್ಷಾ ಕೇಂದ್ರದ ಒಳಗೆ ಪ್ರವೇಶಿಸುವುದನ್ನು ಕಟ್ಟುನಿಟ್ಟಾಗಿ ನಿರ್ಬಂಧಿಸುವುದು. ಕೇಂದ್ರದ ಸುತ್ತಲಿನ ಜೆರಾಕ್ಸ್‌ ಅಂಗಡಿಗಳನ್ನು ಬಂದ್‌ ಮಾಡಿಸಲು ಕ್ರಮ ಕೈಗೊಳ್ಳಬೇಕು’ ಎಂದು ಪೊಲೀಸ್‌ ಇಲಾಖೆಗೆ ಪತ್ರ ಬರೆಯಲಾಗಿದೆ ಎಂದರು.

ADVERTISEMENT

ಅದೇ ರೀತಿ ಆಯಾ ವಿಷಯದ ಪರೀಕ್ಷೆ ದಿನದಂದು ಸಂಬಂಧಿಸಿದ ವಿಷಯದ ಶಿಕ್ಷಕರು ಕೇಂದ್ರದಲ್ಲಿ ಕರ್ತವ್ಯಕ್ಕೆ ನಿಯೋಜಿಸದಂತೆ ತೀರ್ಮಾನಿಸಲಾಗಿದೆ.

ಮಾಧ್ಯಮಗಳಲ್ಲಿ ವರದಿ ಪ್ರಕಟವಾದ ಹಿನ್ನೆಲೆಯಲ್ಲಿ ಮಂಗಳವಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಎಂ.ಎ. ರೆಡ್ಡೇರ್ ಕುಷ್ಟಗಿ ತಾಲ್ಲೂಕಿನ ಎಲ್ಲಾ 15 ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರ ಹಾಗೂ ಸಿಬ್ಬಂದಿ ಸಭೆ ಸಭೆ ನಡೆಸಿದರು. ‘ಯಾವುದೇ ಕಾರಣಕ್ಕೂ ಪರೀಕ್ಷಾ ಕೇಂದ್ರದಲ್ಲಿ ಕರ್ತವ್ಯಲೋಪ ಆಗಬಾರದು’ ಎಂದು ತಾಕೀತು ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.