ಕೊಪ್ಪಳ: ಜಿಲ್ಲೆಯ ಕುಷ್ಟಗಿ ತಾಲ್ಲೂಕಿನಲ್ಲಿ ಮನರೇಗಾ ಯೋಜನೆಯಡಿ ಕಾಮಗಾರಿ ಮಾಡಲು ವಿವಿಧ ಸಾಮಗ್ರಿ ಸರಬರಾಜು ಮಾಡಿದ ವ್ಯಾಪಾರಿಗಳಿಗೆ ಜಿಲ್ಲಾ ಪಂಚಾಯಿತಿ ವೇತನ ಪಾವತಿ ಮಾಡಬೇಕು ಎಂದು ಆಗ್ರಹಿಸಿ ಇಲ್ಲಿನ ಜಿಲ್ಲಾ ಪಂಚಾಯಿತಿ ಕಚೇರಿ ಮುಂದೆ ವ್ಯಾಪಾರಿಗಳು ಗುರುವಾರ ಪ್ರತಿಭಟನೆ ನಡೆಸಿದರು.
ರಾಸಾಯನಿಕ ಬಾಟಲ್ಗಳನ್ನು ಮುಂದಿಟ್ಟುಕೊಂಡು ನಮಗೆ ಹಣ ಪಾವತಿ ಮಾಡದಿದ್ದರೆ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಅವರು ಹೇಳಿದರು.
ಸುಮಾರು 200 ವ್ಯಾಪಾರಿಗಳಿಗೆ ₹10 ಕೋಟಿ ನೀಡಬೇಕಾಗಿದೆ. 2019ರಲ್ಲಿಯೇ ನರೇಗಾ ಕಾಮಗಾರಿಗೆ ಸಾಮಗ್ರಿ ಪೂರೈಕೆ ಮಾಡಿದ್ದೆವು. ಮೂವರು ಜಿಲ್ಲಾ ಪಂಚಾಯಿತಿ ಸಿಇಒ ಬದಲಾದರೂ ಹಣ ಪಾವತಿಯಾಗಿಲ್ಲ ಎಂದು ದೂರಿದರು.
ಜಿಲ್ಲಾ ಪಂಚಾಯಿತಿ ನಮ್ಮ ವೇತನ ಪಾವತಿ ಮಾಡದಿದ್ದರೆ ಕುಟುಂಬ ಸಮೇತ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದರು.
ಸ್ಥಳಕ್ಕೆ ಬಂದ ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ರತ್ನಂ ಪಾಂಡೆಯ, ಕುಷ್ಟಗಿ ತಾಲ್ಲೂಕು ಪಂಚಾಯಿತಿ ಇಒ ನೀವು ಪೂರೈಸಿದ ಕಾಮಗಾರಿಗಳ ಕಡತ ಪರಿಶೀಲನೆ ಮಾಡಿದ್ದಾರೆ. ಅವು ಸರಿಯಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ಸಮಸ್ಯೆ ಪರಿಹಾರವಾಗುವ ತನಕ ವೇತನ ಪಾವತಿಸಲು ಬರುವುದಿಲ್ಲ. ಮುಂದಿನ ವಾರ ಖುದ್ದು ನಾನೇ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತೇನೆ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.