ಕಾರಟಗಿ: ಕೊರೋನಾ ಸಂಕಷ್ಟದ ಮಧ್ಯೆಯೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಮ್ಮ ಮನವಿಗೆ ಸ್ಪಂದಿಸಿ, 3 ಪದವಿ ಪೂರ್ವ ಕಾಲೇಜು ಆರಂಭಕ್ಕೆ ಹಸಿರು ನಿಶಾನೆ ನೀಡಿದ್ದಾರೆ. ಪಟ್ಟಣದಲ್ಲಿ ಪದವಿ ಕಾಲೇಜು ಆರಂಭದ ಯತ್ನ ಮುಂದುವರೆದಿದ್ದು, ಬಹುದಿನದ ಆಸೆಯನ್ನು ಶೀಘ್ರವೇ ಈಡೇರಿಸಲಾಗುವುದು ಎಂದು ಶಾಸಕ ಬಸವರಾಜ ದಢೇಸುಗೂರ ಹೇಳಿದರು.
ಪಟ್ಟಣದ ಶಾಸಕರ ಕಚೇರಿಯಲ್ಲಿ ಯರಡೋಣ ಗ್ರಾಮಸ್ಥರ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಕ್ಷೇತ್ರದ ಯರಡೋಣ, ಮುಸಲಾಪುರ, ಹಾಗೂ ಹುಲಿಹೈದರ್ಗೆ ಪದವಿ ಪೂರ್ವ ಕಾಲೇಜುಗಳು ಮಂಜೂರಾಗಿದೆ. ನದಿಪಾತ್ರದ ಗ್ರಾಮಗಳ ವಿದ್ಯಾರ್ಥಿಗಳಿಗೆ ಯರಡೋಣ ಕೇಂದ್ರಸ್ಥಾನ ಆಗಿದ್ದು, ಅಲ್ಲಿನ ವಿದ್ಯಾರ್ಥಿಗಳಿಗೆ ಇನ್ನೂ ಮುಂದೆ ಅಲೆದಾಡುವುದು ತಪ್ಪಲಿದೆ ಎಂದು ತಿಳಿಸಿದರು.
ಯರಡೋಣ ಗ್ರಾಮದಲ್ಲಿ ಅಮೃತ ಯೋಜನೆ ಜಾರಿ, ಮನೆಗಳ ಮಂಜೂರು, ಸಿಸಿ ರಸ್ತೆ, ಕುಡಿಯುವ ನೀರು ಸಹಿತ ಇತರೆಲ್ಲಾ ಸೌಲಭ್ಯಗಳನ್ನು ಒದಗಿಸಲು ಪ್ರಾಮಾಣಿಕವಾಗಿ
ಶ್ರಮಿಸಲಾಗುವುದು. ನೂತನ ಕಾಲೇಜು ಆರಂಭವಾಗುತ್ತಿರುವುದರಿಂದ ಅಗತ್ಯ ಸೌಲಭ್ಯ ಕಲ್ಪಿಸಲು ಅನುದಾನ ದೊರಕಿಸಲಾಗುವುದು ಎಂದರು.
ಗಂಗಾವತಿ ಎಪಿಎಂಸಿ ಅಧ್ಯಕ್ಷ ಚಂದ್ರೇಗೌಡ, ಯರಡೋಣ ಹೋಬಳಿ ಎಂದು ಘೋಷಣೆಯಾಗಿದೆ. ನಾಡಕಚೇರಿ ಸಹಿತ ಇತರೆಲ್ಲಾ ಸೌಲಭ್ಯಗಳನ್ನು ಕಲ್ಪಿಸಲು ಶಾಸಕರು ಮುಂದಾಗಬೇಕು ಎಂದು ಮನವಿ ಮಾಡಿದರು.
ವಕೀಲ ರವಿ ಸಿಂಗ್ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ವಿಜಯಕುಮಾರ ಮಾತನಾಡಿದರು. ಗ್ರಾಮಸ್ಥರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.