ಜೀರಾಳ (ಕನಕಗಿರಿ): ‘ಬೇಸಿಗೆ ಅವಧಿಯಲ್ಲಿ ‘ದುಡಿಯೋಣ ಬಾ ಅಭಿಯಾನ’ ಆರಂಭಿಸಲಾಗಿದ್ದು, ಈ ಅಭಿಯಾನ ಎರಡು ತಿಂಗಳದ ವರೆಗೆ ನಡೆಯಲಿದೆ’ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಡಾ. ಡಿ. ಮೋಹನ್ ತಿಳಿಸಿದರು.
ತಾಲ್ಲೂಕಿನ ಜೀರಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ದುಡಿಯೋಣ ಬಾ ಅಭಿಯಾನ ಯೋಜನೆಯಲ್ಲಿ ಬುಧವಾರ ನಡೆದ ಕೆರೆ ಹೂಳು ಎತ್ತುವ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು. ನರೇಗಾ ಯೋಜನೆ ಅಡಿಯಲ್ಲಿ 100 ದಿನ ದುಡಿಯಲು ಅವಕಾಶವಿದೆ. ಶ್ರಮ ವಹಿಸಿ ದುಡಿದರೆ ಕೈ ತುಂಬ ಹಣ ಪಡೆಯಬಹುದಾಗಿದೆ ಎಂದರು. ಬೇಸಿಗೆ ಅವಧಿಯಲ್ಲಿ ಕೂಲಿ ಕಾರ್ಮಿಕರಿಗೆ ಗ್ರಾಮೀಣ ಭಾಗದಲ್ಲಿ ಕೆಲಸ ಇಲ್ಲದಿರುವುದನ್ನು ಮನಗಂಡು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ 60 ದಿನದ ವರೆಗೆ ಕೆಲಸ ನೀಡುವ ಉದ್ದೇಶದಿಂದ ಈ ಕಾರ್ಯಕ್ರಮ ಆರಂಭಿಸಿದೆ ಎಂದು ಅವರು ಮಾಹಿತಿ ನೀಡಿದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರವೀಂದ್ರ ಕುಲಕರ್ಣಿ, ನರೇಗಾ ಐಇಸಿ ಸಂಯೋಜಕರಾದ ಬಾಳಪ್ಪ ತಾಳಕೇರಿ, ಕೆ. ಶಿವಕುಮಾರ.ಕೆ, ಟಿಎಇ ಶರಣಯ್ಯ ಸ್ವಾಮಿ, ಗ್ರಾಮ ಪಂಚಾಯಿತಿ ಸಿಬ್ಬಂದಿ ಕನಕರಾಯ ಹಾಗೂ ಸಿದ್ದು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.