ಕೊಪ್ಪಳ: ‘ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡುವುದರ ಜೊತೆಗೆ ಮಕ್ಕಳನ್ನು ಶೈಕ್ಷಣಿಕವಾಗಿ ಸಮರ್ಥಗೊಳಿಸಬೇಕು’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಬಿ.ಫೌಜಿಯಾ ತರುನ್ನುಮ್ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಹಯೊಗದಲ್ಲಿ ಶುಕ್ರವಾರ ಜಿಲ್ಲಾಡಳಿತ ಭವನದಲ್ಲಿ ನಡೆದ ಜ್ಞಾನಜ್ಯೋತಿ ಹಾಗೂ ಜಿಲ್ಲೆಯ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ ಎಲ್ಲಾ ಸರ್ಕಾರಿ ಅನುದಾನಿತ ಪ್ರೌಢಶಾಲಾ ಮುಖ್ಯೋಪಾಧ್ಯಾಯರು, ಸ್ಪೂರ್ತಿಬಂಧು ಹಾಗೂ ಕಲಿಕಾ ಮಿತ್ರರಿಗೆ ಆಯೋಜಿಸಿದ್ದ ಶೈಕ್ಷಣಿಕ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
‘ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ಎಲ್ಲಾ ಮುಖ್ಯೋಪಧ್ಯಾಯರು ಪ್ರಯತ್ನಿಸಬೇಕು. ಮುಂಬರುವ 10ನೇ ತರಗತಿಯ ಶೈಕ್ಷಣಿಕ ಫಲಿತಾಂಶಕ್ಕಾಗಿ ಪೂರ್ವ ಸಿದ್ದತಾ ಯೋಜನೆಯನ್ನು ರೂಪಿಸಿಕೊಳ್ಳಿ, 10ನೇ ತರಗತಿಯ ಪಠ್ಯವನ್ನು ಡಿಸೆಂಬರ್ ಒಳಗೆ ಪೂರ್ಣಗೊಳಿಸಿ ಜನವರಿಯಿಂದ ಪುನರಾವರ್ತಿತ ಅಭ್ಯಾಸ ಪ್ರಾರಂಭಿಸಬೇಕು’ ಎಂದರು.
ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಮಾತನಾಡಿ ‘ಶಾಲಾ ಶೈಕ್ಷಣಿಕ ಸುಧಾರಣೆಗಾಗಿ ಜ್ಞಾನಜ್ಯೋತಿ ಕಾರ್ಯಾಗಾರ ಉತ್ತಮ ವೇದಿಕೆಯಾಗಿದೆ. ಜಗತ್ತಿನಲ್ಲಿ ಜ್ಞಾನಕ್ಕಿಂತ ದೊಡ್ಡದಾದ ಮತ್ತು ಪವಿತ್ರವಾದ ವಸ್ತು ಇನ್ನೊಂದಿಲ್ಲ. ಜ್ಞಾನಕ್ಕೆ ಸಣ್ಣವರು-ದೊಡ್ಡವರು ಎನ್ನುವ ಬೇಧವಿಲ್ಲ. ಒಬ್ಬ ಶಿಕ್ಷಕ ವಿದ್ಯಾರ್ಥಿಗಳ ಭವಿಷ್ಯದ ನಿರ್ಮಾತೃ. ಶಿಕ್ಷಣದ ಮೂಲಕ ಬದಲಾವಣೆ ತರಬಲ್ಲ ವ್ಯಕ್ತಿ ಎಂದರೆ ಅದು ಶಿಕ್ಷಕ ಮಾತ್ರ. ಶಿಕ್ಷಕನಿಗೆ ವೃತ್ತಿ, ವಿಷಯ, ವಿದ್ಯಾರ್ಥಿಯ ಮೇಲೆ ಗೌರವ ಮತ್ತು ಪ್ರೀತಿ ಇರಬೇಕು ಮತ್ತು ಸದಾ ಅಧ್ಯಾಯನಶೀಲನಾಗಿರಬೇಕು. ಪ್ರತಿ ನಿತ್ಯ ಹೊಸ ವಿಚಾರಗಳನ್ನು ತಿಳಿದುಕೊಂಡು ಮೈಗೂಡಿಸಿಕೊಳ್ಳುವುದರಿಂದ ಶಿಕ್ಷಕನ ಶೈಕ್ಷಣಿಕ ಗುಣಮಟ್ಟ ಹೆಚ್ಚುತ್ತದೆ. ನಿಮ್ಮೆಲ್ಲ ಒತ್ತಡಗಳ ನಡುವೆ ಉತ್ತಮ ರಾಷ್ಟ್ರ ನಿರ್ಮಾಣಕ್ಕೆ ಎಲ್ಲಾ ಮಕ್ಕಳನ್ನು ಶೈಕ್ಷಣಿಕವಾಗಿ ಸಧೃಡಗೊಳಿಸಬೇಕು’ ಎಂದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಎಂ.ಎ ರೆಡ್ಡರ್ ಪ್ರಾಸ್ತವಿಕವಾಗಿ ಮಾತನಾಡಿ ‘ಗುಣಾತ್ಮಕ ಶಿಕ್ಷಣಕ್ಕೆ ಒತ್ತು ನೀಡಬೇಕು. ಮೊದಲು ವ್ಯವಸ್ಥೆಯನ್ನು ಅರ್ಥಮಾಡಿಕೊಂಡು ಸುಧಾರಣೆಗೆ ಪ್ರಯತ್ನಿಸಿ ಜಿಲ್ಲೆಯ ಶೈಕ್ಷಣಿಕ ಅಭಿವೃದ್ಧಿಯಲ್ಲಿ ಪ್ರಾಮಾಣಿಕವಾಗಿ ನಿಮ್ಮ ಕರ್ತವ್ಯ ನಿರ್ವಹಿಸಿ’ ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ಅಮೀನ್ ಅತ್ತಾರ, ಹಿರಿಯ ಶಿಕ್ಷಣಾಧಿಕಾರಿ ಪೊನ್ನಪ್ಪ ರೆಡ್ಡಿ, ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಕ್ಷೇತ್ರ ಶಿಕ್ಷಣಧಿಕಾರಿಗಳು ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.