ADVERTISEMENT

ಜನಾಶೀರ್ವಾದ ಯಾತ್ರೆ ಸಮಾರೋಪ ಇಂದು

ಜನಾಶೀರ್ವಾದ ಯಾತ್ರೆ ಸಮಾರೋಪ ಸಮಾವೇಶ ಇಂದು

​ಪ್ರಜಾವಾಣಿ ವಾರ್ತೆ
Published 19 ಆಗಸ್ಟ್ 2021, 1:57 IST
Last Updated 19 ಆಗಸ್ಟ್ 2021, 1:57 IST
ದೊಡ್ಡನಗೌಡ ಪಾಟೀಲ
ದೊಡ್ಡನಗೌಡ ಪಾಟೀಲ   

ಕೊಪ್ಪಳ: ‘ದೇಶದಾದ್ಯಂತ ಕೇಂದ್ರ ಸಚಿವರ ನೇತೃತ್ವದಲ್ಲಿ ನೂತನ ಕೇಂದ್ರ ಸಚಿವರನ್ನು ಪರಿಚಯಿಸುವ ಮತ್ತು ಸರ್ಕಾರದ ವಿವಿಧ ಯೋಜನೆಗಳನ್ನು ಪ್ರಚುರಪಡಿಸುವ ಉದ್ದೇಶದಿಂದ ಆಗಸ್ಟ್ 16 ರಿಂದ ‘ಜನಾಶೀರ್ವಾದ ಯಾತ್ರೆ’ ಪ್ರಾರಂಭಿಸಲಾಗಿದೆ. ಅದು ಆ.19ರಂದು ನಗರದಲ್ಲಿ ಮುಕ್ತಾಯವಾಗಲಿದೆ’ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ದೊಡ್ಡನಗೌಡ.ಎಚ್‌.ಪಾಟೀಲ ಹೇಳಿದರು.

ರಾಜ್ಯದಾದ್ಯಂತ ನಾಲ್ವರು ಕೇಂದ್ರ ಸಚಿವರ ನೇತೃತ್ವದಲ್ಲಿ ಯಾತ್ರೆ ನಡೆಯುತ್ತಿದೆ. ಕಲ್ಯಾಣ ಕರ್ನಾಟಕದಲ್ಲಿ ನವೀಕರಿಸಬಹುದಾದ ಇಂಧನ ಮೂಲ ಮತ್ತು ರಾಸಾಯನಿಕ, ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ನೇತೃತ್ವದಲ್ಲಿ ನಡೆಯುತ್ತಿದೆ. ಮಧ್ಯಾಹ್ನ 3 ಕ್ಕೆ ಜಿಲ್ಲೆಗೆ ಬರಲಿದೆ. ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ನೂತನ ಕೇಂದ್ರ ಸಚಿವರನ್ನುಮತ್ತು ಜನಾಶೀರ್ವಾದ ಯಾತ್ರೆಯನ್ನು ಸ್ವಾಗತಿಸಲಾಗುವುದು ಎಂದು ಹೇಳಿದರು.

ಮಧ್ಯಾಹ್ನ 3ಕ್ಕೆ ಶಿವಶಾಂತವೀರ ಮಂಗಲ ಭವನದಲ್ಲಿ ನಡೆಯಲಿರುವ ಸಮಾರೋಪ ಸಮಾವೇಶದಲ್ಲಿ ಸಚಿವರಾದ ಭಗವಂತ ಖೂಬಾ ಪ್ರಮುಖ ಭಾಷಣ ಮಾಡಲಿದ್ದಾರೆ. ಸಚಿವ ಹಾಲಪ್ಪ ಆಚಾರ, ಸಂಸದ ಸಂಗಣ್ಣ ಕರಡಿ, ಶಾಸಕರಾದ ಪರಣ್ಣ ಮುನವಳ್ಳಿ, ಬಸವರಾಜ ದಢೇಸೂಗೂರು ಸೇರಿದಂತೆ ಪಕ್ಷದ ಎಲ್ಲ ಮುಖಂಡರು ಪಾಲ್ಗೊಳ್ಳಲಿದ್ದಾರೆ ಎಂದು ಜಿಲ್ಲಾ ಮಾಧ್ಯಮ ಸಂಚಾಲಕ ಬಿ.ಗಿರೀಶಾನಂದ ಜ್ಞಾನಸುಂದರ ತಿಳಿಸಿದ್ದಾರೆ. ಯಾತ್ರೆಯ ಸ್ವಾಗತಕ್ಕೆ ನಗರದ ಪ್ರಮುಖ ವೃತ್ತಗಳನ್ನು ಅಲಂಕರಿಸಲಾಗಿದೆ. ನೂರಾರು ಕಾರ್ಯಕರ್ತರು ಕೋವಿಡ್‌ ಮಾರ್ಗಸೂಚಿ ಅನುಸರಿಸಿ ಸಮಾವೇಶದಲ್ಲಿ ಪಾಲ್ಲೊಳ್ಳುವರು ಎಂದರು.

ADVERTISEMENT

ಬೈಕ್‌ರ‍್ಯಾಲಿ: ಜನಾಶೀರ್ವಾದ ಯಾತ್ರೆಯನ್ನು ಹೊಸಪೇಟೆ ರಸ್ತೆಯ ರಿಲಯನ್ಸ್‌ ಪೆಟ್ರೋಲ್‌ ಬಂಕ್‌ನಿಂದ ಬೃಹತ್‌ ಬೈಕ್‌ರ‍್ಯಾಲಿ ಮೂಲಕ ಸ್ವಾಗತಿಸಲಾಗುತ್ತದೆ. ಮೆರವಣಿಗೆ ನಡೆಯಲಿದೆ ಎಂದು ಬಿಜೆಪಿ ಯುವ ಮುಖಂಡ ಅಮರೇಶ ಕರಡಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.