ADVERTISEMENT

ಪರಿಸರ ರಕ್ಷಣೆ ನಮ್ಮೆಲ್ಲರ ಕರ್ತವ್ಯ–ನಳಿನ್ ಕುಮಾರ್ ಕಟೀಲ್

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅಭಿಮತ

​ಪ್ರಜಾವಾಣಿ ವಾರ್ತೆ
Published 23 ಜೂನ್ 2021, 13:43 IST
Last Updated 23 ಜೂನ್ 2021, 13:43 IST
ಕುಕನೂರು ತಾಲ್ಲೂಕಿನ ತಳಕಲ್ ಗ್ರಾಮದ ಕೌಶಲಾಭಿವೃದ್ಧಿ ಕೇಂದ್ರದಲ್ಲಿ ನಡೆದ ವೃಕ್ಷಾರೋಪಣ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭಾಗವಹಿಸಿದ್ದರು
ಕುಕನೂರು ತಾಲ್ಲೂಕಿನ ತಳಕಲ್ ಗ್ರಾಮದ ಕೌಶಲಾಭಿವೃದ್ಧಿ ಕೇಂದ್ರದಲ್ಲಿ ನಡೆದ ವೃಕ್ಷಾರೋಪಣ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭಾಗವಹಿಸಿದ್ದರು   

ತಳಕಲ್ (ಕುಕನೂರು): ‘ನೀರು ಅತ್ಯಮೂಲ್ಯ ನೈಸರ್ಗಿಕ ಸಂಪತ್ತು. ಆಮ್ಲಜನಕ ನೀಡುವ ಗಿಡ–ಮರಗಳ ಸಂರಕ್ಷಣೆ ನಮ್ಮೆಲ್ಲರ ಹೊಣೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅಭಿಪ್ರಾಯಪಟ್ಟರು.

ಪಂಡಿತ್ ದೀನದಯಾಳ್ ಉಪಾಧ್ಯಾಯ ಜನ್ಮಶತಾಬ್ದಿ ಪ್ರಯುಕ್ತ ಬಿಜೆಪಿ ಪಕ್ಷದ ವತಿಯಿಂದ ತಾಲ್ಲೂಕಿನ ತಳಕಲ್ ಗ್ರಾಮದ ಕೌಶಲಾಭಿವೃದ್ಧಿ ಕೇಂದ್ರದಲ್ಲಿ ಬುಧವಾರ ನಡೆದ ವೃಕ್ಷಾರೋಪಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ತಾಲ್ಲೂಕಿನಲ್ಲಿ ನಿರ್ಮಿಸಲಾದ ಕೌಶಲಾಭಿವೃದ್ಧಿ ಕೇಂದ್ರ ರಾಜ್ಯದಲ್ಲಿಯೇ ಅತ್ಯುತ್ತಮ ಕೇಂದ್ರವಾಗಿದೆ. ಇದರ ಸದುಪಯೋಗ ಪಡೆಯಬೇಕು ಎಂದರು.

ADVERTISEMENT

ಹುಟ್ಟಿದ ಪ್ರತಿಯೊಬ್ಬರಿಗೂ ಬದುಕುವ ಹಕ್ಕಿರುವಂತೆ ಎಲ್ಲ ಪಶು–ಪಕ್ಷಿ, ಪ್ರಾಣಿ, ಮರ-ಗಿಡಗಳಿಗೂ ಇದೆ. ಇವೆಲ್ಲವೂ ಬದುಕಿದಾಗ ಮಾತ್ರ ನಾವು-ನೀವು ಎಲ್ಲರೂ ಜೀವಿಸಲು ಸಾಧ್ಯ ಎಂದು ಎಚ್ಚರಿಸಿದರು.

ಅರಣ್ಯದಲ್ಲಿರುವ ಆನೆ, ಹುಲಿ, ಚಿರತೆ ಇಂದಿನ ದಿನಗಳಲ್ಲಿ ಅಲ್ಲಲ್ಲಿ ಗ್ರಾಮ, ಪಟ್ಟಣ ಮತ್ತು ನಗರಗಳಲ್ಲಿ ಕಾಣಿಸಿಕೊಳ್ಳುತ್ತಿವೆ. ಅರಣ್ಯ ನಾಶವೇ ಇದಕ್ಕೆ ಮೂಲ ಕಾರಣ. ಪ್ರಾಣಿ ಸಂಕುಲಗಳು ಅರಣ್ಯ ಬಿಟ್ಟು ಊರೊಳಗೆ ಬರುವುದು ಸಹಜ ಎಂದರು.

ಪ್ರಸಕ್ತ ದೇಶದ ಜನಸಂಖ್ಯೆಗೆ ಅನುಗುಣವಾಗಿ ನಿರೀಕ್ಷಿಸಿದ ಮಟ್ಟದಲ್ಲಿ ಅರಣ್ಯ ಬೆಳೆಯುತ್ತಿಲ್ಲ. ಇರುವ ಅರಣ್ಯ ವಿನಾಶದ ಅಂಚಿನಲ್ಲಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.

ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣ್ ಜಿ, ವಿಧಾನಪರಿಷತ್ ಮಾಜಿ ಸದಸ್ಯ ಸಿ.ಅಶ್ವಥ್ ನಾರಾಯಣ್, ಜಿಲ್ಲಾ ಘಟಕದ ಅಧ್ಯಕ್ಷ ದೊಡ್ಡನಗೌಡ ಪಾಟೀಲ, ಶಾಸಕ ಹಾಲಪ್ಪ ಆಚಾರ, ತಾಲ್ಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಮಾರುತಿ ಗಾವರಾಳ, ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಶಂಬಣ್ಣ ಜೋಳದ, ಬಸನಗೌಡ ತೊಂಡಿಹಾಳ, ಕಳಕಪ್ಪ ಕಂಬಳಿ, ಹೇಮಂತ್ ರಾಜ್ ಹಾಗೂ ಶರಣಬಸಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.