ಗಂಗಾವತಿ: ‘ಸಮಾಜದಲ್ಲಿ ಶಾಂತಿ, ನೆಮ್ಮದಿಯಿಂದ ಜೀವನ ನಡೆಸಲು ಎಲ್ಲರಿಗೂ ಕಾನೂನಿನ ಅರಿವು ಅಗತ್ಯ’ ಎಂದು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ನ್ಯಾಯಾಧೀಶ ಎಂ.ಜಿ ಶಿವಳ್ಳಿ ಅಭಿಪ್ರಾಯಪಟ್ಟರು.
ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಶಿಕ್ಷಣ ಇಲಾಖೆ, ಪೋಲಿಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಇವರುಗಳ ಸಂಯುಕ್ತ ಆಶ್ರಯದಲ್ಲಿ 75ನೇ ಸ್ವಾತಂತ್ರೋತ್ಸವ ಅಮೃತ ಮಹೋತ್ಸವದ ಅಂಗವಾಗಿ ಮಂಗಳವಾರ ತಾ.ಪಂ ಮಂಥನ ಸಭಾಂಗಣದಲ್ಲಿ ನಡೆದ ಕಾನೂನು ಅರಿವು– ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಜನರಿಗೆ ಕಾನೂನಿನ ಅರಿವು ಮೂಡಿಸುವಲ್ಲಿ ವಕೀಲರ ಪಾತ್ರ ತುಂಬಾ ಮುಖ್ಯವಾಗುತ್ತದೆ. ಆದ್ದರಿಂದ ವಕೀಲರು ಹೆಚ್ಚಿನ ಜ್ಞಾನ ಪಡೆದು, ಜನರಿಗೆ ಅರ್ಥವಾಗುವ ರೀತಿಯಲ್ಲಿ ಕಾನೂನು ಅರಿವು ಮೂಡಿಸಬೇಕು.
ಸರ್ಕಾರ ಆಡಳಿತದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪ್ರತಿ ಇಲಾಖೆಯ ಅಧಿಕಾರಿಗಳು ಜಂಟಿಯಾಗಿ ದೇಶದ ಕಾನೂನು ಕುರಿತು ಜನರಿಗೆ ಜಾಗೃತಿ ಮೂಡಿಸುವಂತೆ ನಿರ್ದೇಶನ ನೀಡಿದೆ.
ಈ ನಿಟ್ಟಿನಲ್ಲಿ ಅಧಿಕಾರಿಗಳು ಕಾನೂನು ಸೇವಾ ಸಮಿತಿ ಕಾರ್ಯಕ್ರಮಗಳ ಅಡಿಯಲ್ಲಿ ಸಾರ್ವಜನಿಕರಿಗೆ ಕಾನೂನು ಅರಿವು ಮೂಡಿಸುವ ಕೆಲಸ ಮಾಡಬೇಕು ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ತಾಲ್ಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷ ವಿ.ನಾಗರಾಜ ಅವರು ಜನರ ದಿನ ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾದ ಕಾನೂನಿನ ಕುರಿತು ಮಾಹಿತಿ ನೀಡಿದರು.
ಅಪರ ಸರ್ಕಾರಿ ವಕೀಲ ಎಚ್.ಸಿ.ಯಾದವ ಅವರು ಕಾನೂನಿನ ಕುರಿತು ಉಪನ್ಯಾಸ ನೀಡಿದರು.
ಪ್ರಧಾನ ಸಿವಿಲ್ ನ್ಯಾಯಾಧೀಶ ವಿಶ್ವನಾಥ ಮುಗುತಿ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಗೌರಮ್ಮ ಪಾಟೀಲ್, ಡಿವೈಎಸ್ಪಿ ರುದ್ರೇಶ್ ಉಜ್ಜನಕೊಪ್ಪ, ಬಿಇಒ ಸೋಮಶೇಖರಗೌಡ ಪಾಟಿಲ್, ಗ್ರೇಡ್ 2 ತಹಶೀಲ್ದಾರ ವಿ.ಎಚ್.ಹೊರಪೇಟೆ, ಶಿಶು ಅಭಿವೃದ್ಧಿ ಕಲ್ಯಾಣ ಇಲಾಖೆಯ ಶರಣಮ್ಮ, ಕಾರ್ಮಿಕ ಇಲಾಖೆ ನಿರೀಕ್ಷಕ ಗೋಪಾಲ ಭೂಪದ್, ವಕೀಲರ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಮುಸಾಲಿ, ಉಪಾಧ್ಯಕ್ಷ ಪ್ರಭು, ಕಾರ್ಯದರ್ಶಿ ವಿರುಪಾಕ್ಷಪ್ಪ ಭಾವಿಕಟ್ಟಿ,ವಕೀಲ ಎಚ್.ಸಿ.ರೋಣದ, ಪಾಟೀಲ್ ಗುಂಡೂರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.