ADVERTISEMENT

ಸಚಿವರಿಂದ ಜನತೆಗೆ ತಪ್ಪು ಸಂದೇಶ

ಸನ್ಮಾನ ಕಾರ್ಯಕ್ರಮ: ಮಾಜಿ ಸಚಿವ ಬಸವರಾಜ ರಾಯರಡ್ಡಿ ಟೀಕೆ

​ಪ್ರಜಾವಾಣಿ ವಾರ್ತೆ
Published 18 ಆಗಸ್ಟ್ 2021, 5:19 IST
Last Updated 18 ಆಗಸ್ಟ್ 2021, 5:19 IST
ಯಲಬುರ್ಗಾ ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಸನ್ಮಾನಿಸಲಾಯಿತು
ಯಲಬುರ್ಗಾ ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಸನ್ಮಾನಿಸಲಾಯಿತು   

ಯಲಬುರ್ಗಾ: ‘ಸಿದ್ಧರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕೆರೆ ತುಂಬಿಸುವ ಯೋಜನೆ ಜಾರಿಗೆ ತಂದಿದ್ದನ್ನು ಮರೆತು ಸಚಿವ ಹಾಲಪ್ಪ ಆಚಾರ ತಾವು ಜಾರಿಗೆ ತಂದಿರುವುದಾಗಿ ಸುಳ್ಳು ಹೇಳುವ ಮೂಲಕ ಕ್ಷೇತ್ರದ ಜನತೆಗೆ ತಪ್ಪು ಸಂದೇಶ ನೀಡುತ್ತಿದ್ದಾರೆ’ ಎಂದು ಮಾಜಿ ಸಚಿವ ಬಸವರಾಯ ರಾಯರಡ್ಡಿ ಆರೋಪಿಸಿದರು.

ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಮುಖಂಡರ ಸಭೆ ಹಾಗೂ ಪಕ್ಷಕ್ಕೆ ಸೇರ್ಪಡೆಗೊಂಡವರನ್ನು ಸನ್ಮಾನಿಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಸಿದ್ಧರಾಮಯ್ಯನವರೇ ಈ ಯೋಜನೆಗೆ ಚಾಲನೆ ನೀಡಿದ್ದಾರೆ. ಕಾರ್ಯಕ್ರಮಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಜನರು ಸೇರಿದ್ದರು. ಸಚಿವರು ಇದನ್ನೆಲ್ಲ ಮರೆತು ಕೆರೆಗೆ ನೀರು ತುಂಬಿಸುವ ಯೋಜನೆ ಕುರಿತು ಮಾತನಾಡುತ್ತಿರುವುದು ಶೋಭೆ ತರುವುದಿಲ್ಲ. ಕಾಲ ಮಿಂಚಿಲ್ಲ. 50 ಹೊಸ ಕೆರೆ ತುಂಬಿಸಲು ಪ್ರಯತ್ನಿಸಿದರೆ ಸಂತೋಷ ಪಡುತ್ತೇವೆ’ ಎಂದರು.

ADVERTISEMENT

ಬಡವರಿಗಾಗಿ ತೆರೆದಿರುವ ಇಂದಿರಾ ಕ್ಯಾಂಟಿನ್‍ನ ಹೆಸರು ಬದಲಿಸಲು ಹೊರಟಿರುವ ಬಿಜೆಪಿಯವರ ಧೋರಣೆಯು ಕೆಟ್ಟ ರಾಜಕೀಯ ಸಂಸ್ಕೃತಿಯನ್ನು ಬೆಳೆಸುವಂತಿದೆ. ಯಾವುದೇ ಪಕ್ಷಕ್ಕೂ ಇದು ಶೋಭೆ ತರುವುದಿಲ್ಲ. ಜನವಿರೋಧಿ ನೀತಿ ಅನುಸರಿಸುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ದೇಶಕ್ಕಾಗಲಿ, ನಾಡಿನ ಜನತೆಗಾಗಲಿ ಪ್ರಯೋಜನವಿಲ್ಲ ಎಂದು ದೂರಿದರು.

ಕೆಟ್ಟ ನಡಾವಳಿಯುಳ್ಳ ಬಿಜೆಪಿಯನ್ನು ತಿರಸ್ಕರಿಸುವ ಸಮಯ ಸನ್ನಿಹಿತವಾಗಿದೆ. ತಕ್ಕ ಪಾಠ ಕಲಿಸಲು ಜನ ತುದಿಗಾಲಲ್ಲಿ ನಿಂತಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಹೆಚ್ಚಿನ ಸ್ಥಾನಗಳಿಸಿ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದರು.

ತರಲಕಟ್ಟಿ ಗ್ರಾಮದ ಬಿಜೆಪಿ ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಸೇರಿದರು. ಸಂಕನೂರು, ಹಿರೇಮ್ಯಾಗೇರಿ ಗ್ರಾಮ ಪಂಚಾಯಿತಿ ಪದಾಧಿಕಾರಿಗಳನ್ನು ಸನ್ಮಾನಿಸಲಾಯಿತು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಉಳ್ಳಾಗಡ್ಡಿ, ಕೆರಿಬಸಪ್ಪ ನಿಡಗುಂದಿ, ಬಿ.ಎಂ.ಶಿರೂರು, ಡಾ.ಶರಣಪ್ಪ ಕೊಪ್ಪಳ, ಡಾ.ಶಿವನಗೌಡ ದಾನರೆಡ್ಡಿ, ಆನಂದ ಉಳ್ಳಾಗಡ್ಡಿ, ಶರಣಪ್ಪ ಗಾಂಜಿ, ರಾಜಶೇಖರ ನಿಂಗೋಜಿ, ಛತ್ರಪ್ಪ ಛಲವಾದಿ, ಈಶ್ವರ ಅಟಮಾಳಗಿ ಹಾಗೂ ಸಂಗಣ್ಣ ಟೆಂಗಿನಕಾಯಿ ಸೇರಿ ಹಲವರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.