ಕೊಪ್ಪಳ ತಾಲ್ಲೂಕಿನ ಮಂಗಳಾಪುರ ಗ್ರಾಮದಲ್ಲಿ ಸೋಮವಾರ ರಸ್ತೆಯ ಮಧ್ಯದಲ್ಲಿಯೇ ಅಂತಿಮ ಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿತ್ತು
ಕೊಪ್ಪಳ: ಜಿಲ್ಲಾ ಕೇಂದ್ರದ ಸಮೀಪದಲ್ಲಿರುವ ಮಂಗಳಾಪುರದಲ್ಲಿ ಶವ ಸಂಸ್ಕಾರಕ್ಕೆ ಜಾಗವಿಲ್ಲದ ಕಾರಣ ಶಾಲೆಯ ಆವರಣದಲ್ಲಿಯೇ ಶವಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಂಡು ಗ್ರಾಮಸ್ಥರು ಸೋಮವಾರ ತಾಲ್ಲೂಕು ಆಡಳಿತದ ವಿರುದ್ಧ ಆಕ್ರೋಶ ಹೊರಹಾಕಿದರು.
ಸಾವಂತ್ರಮ್ಮ ಮೆಳ್ಳಿಕೇರಿ (80) ಎಂಬ ಮಹಿಳೆ ಮೃತಪಟ್ಟಿದ್ದು, ಹಿಂದೂಗಳ ಅಂತಿಮ ಸಂಸ್ಕಾರ ಸಲ್ಲಿಸಲು ಜಾಗ ಇಲ್ಲದಿರುವುದರಿಂದ ಕುಟುಂಬಸ್ಥರು ಅಂತ್ಯಕ್ರಿಯೆಗೆ ಪರದಾಡುವಂತಾಯಿತು.
ಸ್ಮಶಾನ ಸೌಲಭ್ಯ ಕಲ್ಪಿಸುವಂತೆ ಅನೇಕ ಬಾರಿ ಮನವಿ ಮಾಡಿದ್ದರೂ ಬೇಡಿಕೆ ಈಡೇರಿರಲಿಲ್ಲ. ಸಾವಂತ್ರಮ್ಮ ಅವರಿಗೆ ಯಾವುದೇ ಜಮೀನು ಇಲ್ಲದ ಕಾರಣ ಅನಿವಾರ್ಯವಾಗಿ ರಸ್ತೆ ಮಧ್ಯದಲ್ಲಿಯೇ ಅಂತ್ಯಕ್ರಿಯೆಗೆ ಸಿದ್ಧತೆ ನಡೆಸಿದರು.
ಗ್ರಾಮಸ್ಥರು ಶಾಲೆ ಮುಂಭಾಗದ ರಸ್ತೆಯಲ್ಲಿ ಕಟ್ಟಿಗೆ ಜೋಡಿಸಿ ಅಂತ್ಯಕ್ರಿಯೆ ಮಾಡುವುದಾಗಿ ಪಟ್ಟು ಹಿಡಿದಾಗ ಕೊಪ್ಪಳ ತಹಶೀಲ್ದಾರ್ ವಿಠ್ಠಲ ಚೌಗುಲಾ ಹಾಗೂ ಪೊಲೀಸರು ಗ್ರಾಮಕ್ಕೆ ದೌಡಾಯಿಸಿದರು.
‘ಶವ ಸಂಸ್ಕಾರಕ್ಕೆ ಜಾಗವಿಲ್ಲ. ಹಲವು ಬಾರಿ ಮನವಿ ಮಾಡಿದರೂ ಸ್ಪಂದಿಸಿಲ್ಲ. ಈಗ ಬಂದು ಸಮಾಧಾನ ಮಾಡಬೇಡಿ’ ಎಂದು ಗ್ರಾಮಸ್ಥರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಕೆಲ ಹೊತ್ತು ಮಾತಿನ ಚಕಮಕಿಯೂ ನಡೆಯಿತು.
ಅಧಿಕಾರಿಗಳು ಹಾಗೂ ಪೊಲೀಸರ ಮನವೊಲಿಕೆ ಬಳಿಕ ಹಳ್ಳಕ್ಕೆ ತೆರಳುವ ರಸ್ತೆಯ ಬದಿಯಲ್ಲಿ ಅಂತಿಮ ಸಂಸ್ಕಾರ ನೆರವೇರಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.