
ಕೊಪ್ಪಳ: ‘ಮಹಾತ್ಮ ಗಾಂಧಿ ಅಧ್ಯಕ್ಷತೆ ವಹಿಸಿದ್ದ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ನಡೆಸಿ ಒಂದು ವರ್ಷ ಪೂರ್ಣಗೊಳ್ಳುವುದರ ಒಳಗೆ ರಾಜ್ಯದಾದ್ಯಂತ ಗಾಂಧೀಜಿ ಭೇಟಿ ನೀಡಿದ ಸ್ಥಳ ಅಥವಾ ಆ ಜಿಲ್ಲೆಯಲ್ಲಿ ಅವರ ಪುತ್ಥಳಿ ಸಮೇತ ಸ್ತಂಭ ನಿರ್ಮಾಣ ಮಾಡಲಾಗುವುದು’ ಎಂದು ಗಾಂಧಿ ಭಾರತ ಶತಮಾನೋತ್ಸವ ಸಮಿತಿ ಅಧ್ಯಕ್ಷರೂ ಆದ ಕಾನೂನು ಸಚಿವ ಎಚ್.ಕೆ. ಪಾಟೀಲ ಹೇಳಿದರು.
ನಗರದಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿ ‘ಶತಮಾನೋತ್ಸವ ಕಾರ್ಯಕ್ರಮದ ವೇಳೆ ಅಂದುಕೊಂಡಂತೆ ಗಾಂಧಿ ಭಾರತ ಯಾತ್ರೆಯ ಕಾರ್ಯಕ್ರಮಗಳನ್ನು ಅ. 2ರ ಒಳಗೆ ಪೂರ್ಣಗೊಳಿಸಬೇಕಿತ್ತು. ಸಾಧ್ಯವಾಗದ ಕಾರಣ ದಿನಾಂಕ ವಿಸ್ತರಣೆ ಮಾಡಿದ್ದೇವೆ’ ಎಂದರು.
ಡಿಸೆಂಬರ್ ಅಂತ್ಯಕ್ಕೆ ಕಾಮಗಾರಿ ಪೂರ್ಣ: ಅಂಜನಾದ್ರಿ ಬೆಟ್ಟದ ಅಭಿವೃದ್ದಿಗಾಗಿ ಈಗಾಗಲೇ ಕಾಮಗಾರಿಗಳು ನಡೆಯುತ್ತಿದ್ದು ಡಿಸೆಂಬರ್ ಅಂತ್ಯದ ವೇಳೆಗೆ ಪೂರ್ಣಗೊಳ್ಳಲಿವೆ ಎಂದು ಪ್ರವಾಸೋದ್ಯಮ ಸಚಿವರೂ ಆದ ಎಚ್.ಕೆ.ಪಾಟೀಲ್ ಹೇಳಿದರು.
‘ಗಂಗಾವತಿ ತಾಲ್ಲೂಕಿನ ಹಿರೇಬೆಣಕಲ್ ಗ್ರಾಮದ ಮೋರೇರ್ ತಟ್ಟೆಯ ಪ್ರದೇಶವನ್ನು ಯೂನಸ್ಕೊ ಪಟ್ಟಿಗೆ ಸೇರಿಸುವ ಬಗ್ಗೆ ಪ್ರಯತ್ನ ನಡೆದಿದ್ದು, ಇದಕ್ಕೆ ಪೂರಕವಾಗಿ ಬೆಂಗಳೂರಿನ ಬಾಂಕ್ವೆಟ್ ಹಾಲ್ನಲ್ಲಿ ಚಿತ್ರಕಲಾ ಪ್ರದರ್ಶನ ಏರ್ಪಡಿಸಲಾಗಿದೆ’ ಎಂದರು.
ಉತ್ತರಾಧಿಕಾರಿ ಕುರಿತು ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವಿಚಾರದ ಬಗ್ಗೆ ಕೇಳಲಾದ ಪ್ರಶ್ನೆಗೆ ‘ಪಕ್ಷದ ವೇದಿಕೆಯಲ್ಲಿ ಮಾತ್ರ ಈ ವಿಚಾರ ಮಾತನಾಡಬೇಕು ಎಂದು ಹೈಕಮಾಂಡ್ ಸೂಚಿಸಿದೆ. ಯಾವುದೇ ಕಾರಣಕ್ಕೂ ಈ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ. ಹಿರಿಯ ಸದಸ್ಯನಾದರೂ ಈ ಬಗ್ಗೆ ಏನೂ ಹೇಳುವುದಿಲ್ಲ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.