ಗಂಗಾವತಿ: ತಾಲ್ಲೂಕಿನ ಸಾಣಾಪುರ ಗ್ರಾಮದ ಒಂದನೇ ವಾರ್ಡ್ನ ಪ್ರಗತಿ ಕೃಷ್ಣ ಗ್ರಾಮೀಣ ಬ್ಯಾಂಕ್ ಸಮೀಪ ರಸ್ತೆ ಬದಿ ಕೊಳಚೆ ನೀರು ಹರಿದು, ಸೊಳ್ಳೆಗಳ ಹಾವಳಿ ಹೆಚ್ಚಾಗಿದ್ದು, ನಿವಾಸಿಗಳಿಗೆ ಸಾಂಕ್ರಾಮಿಕ ರೋಗ ಹರಡುವ ಭೀತಿ ಉಂಟಾಗಿದೆ.
ಬ್ಯಾಂಕ್ ಹಿಂಬದಿಯ ಮನೆಗಳಿಗೆ ಚರಂಡಿ ವ್ಯವಸ್ಥೆ ಕಲ್ಪಿಸದ ಕಾರಣ ಉಪಯೋಗಿಸಿದ ನೀರು ರಸ್ತೆ ಬದಿಯಲ್ಲಿ ಹರಿಯುತ್ತಿದೆ. ರಸ್ತೆ ಬದಿಯಲ್ಲಿ ಹುಲ್ಲು ಬೆಳೆದು ದುರ್ವಾಸನೆ ಬೀರುತ್ತಿದೆ. ಕೊಳಚೆ ನೀರು ಸಂಚಾರಕ್ಕೆ 1ನೇ ವಾರ್ಡಿನ ನಿವಾಸಿಗಳು ಚರಂಡಿ ನಿರ್ಮಿಸುವಂತೆ ಗ್ರಾಮ ಪಂಚಾಯಿತಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಕ್ರಮ ಜರುಗಿಸಿಲ್ಲ.
ಮಳೆಗಾಲ ಇರುವುದರಿಂದ ಮಳೆ ನೀರು ನಿರಂತರವಾಗಿ ರಸ್ತೆಬದಿಯಲ್ಲಿ ಹರಿಯುತ್ತಿದೆ. ಈ ರಸ್ತೆಯಲ್ಲಿ ಹಲವರು ಬೈಕ್ನಿಂದ ಬಿದ್ದು ಗಾಯಗೊಂಡಿದ್ದಾರೆ. ಕೂಡಲೇ ಪಿಡಿಒ ಈ ಸಮಸ್ಯೆಗೆ ಪರಿಹಾರ ಒದಗಿಸಬೇಕು. ಇಲ್ಲವಾದಲ್ಲಿ ಗ್ರಾ.ಪಂ ಎದುರು ಪ್ರತಿಭಟನೆ ನಡೆಸಲಾಗುತ್ತದೆ ಎಂದು ವಾರ್ಡ್ ನಿವಾಸಿಗಳು ಎಚ್ಚರಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.