
ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕನ ಸ್ವಂತ ಖರ್ಚಿನಲ್ಲಿ ವಿದ್ಯಾರ್ಥಿಗಳ ವಿಮಾನಯಾನ!
ಕೊಪ್ಪಳ: ತಾಲ್ಲೂಕಿನ ಬಹದ್ದೂರಬಂಡಿ ಗ್ರಾಮದ ಸರ್ಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಬೀರಪ್ಪ ಅಂಡಗಿ ಅವರು ಸ್ವಂತ ಹಣದಿಂದ ತಮ್ಮ ಶಾಲೆಯ 24 ವಿದ್ಯಾರ್ಥಿಗಳನ್ನು ವಿಮಾನದಲ್ಲಿ ಶೈಕ್ಷಣಿಕ ಪ್ರವಾಸಕ್ಕೆ ಶುಕ್ರವಾರ ಬೆಂಗಳೂರಿಗೆ ಕರೆದುಕೊಂಡು ಹೋದರು.
ಬಳ್ಳಾರಿಯ ಜಿಂದಾಲ್ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ತೆರಳಿದ ಮಕ್ಕಳು ವಿಮಾನದಲ್ಲಿ ಫೋಟೊ ಕ್ಲಿಕ್ಕಿಸಿಕೊಂಡು ಶಿಕ್ಷಕರು ಹಾಗೂ ಸಿಬ್ಬಂದಿ ಜೊತೆ ಸಂಭ್ರಮಿಸಿದರು. ಮೊದಲ ಬಾರಿಗೆ ವಿಮಾನಯಾನ ಪ್ರಯಾಣ ಮಾಡಿದ ಮಕ್ಕಳಲ್ಲಿ ಸಂಭ್ರಮ ಮನೆ ಮಾಡಿತ್ತು. ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರೂ ಆದ ಬೀರಪ್ಪ ಅಂಡಗಿ ಹಣ ಸಂಗ್ರಹ ಮಾಡದೆ ವಿದ್ಯಾರ್ಥಿಗಳ ವಿಮಾನ ಪ್ರಯಾಣ, ಊಟ ಹಾಗೂ ವಸತಿ ಸೌಲಭ್ಯದ ಖರ್ಚು ಭರಿಸಿದ್ದಾರೆ.
ವಿಮಾನದಲ್ಲಿ ಪ್ರವಾಸಕ್ಕೆ ಕರೆದುಕೊಂಡು ಹೋಗುವ ವಿದ್ಯಾರ್ಥಿಗಳ ಆಯ್ಕೆಗಾಗಿ ಪ್ರವೇಶ ಪರೀಕ್ಷೆ ನಡೆಸಿ 5ರಿಂದ 8ನೇ ತರಗತಿ ತನಕ ಪ್ರತಿ ತರಗತಿಯಿಂದ ತಲಾ ಆರು ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಪ್ರವಾಸಕ್ಕೆ ಕರೆದುಕೊಂಡು ಹೋಗಿದ್ದಾರೆ. ಬಹದ್ದೂರ್ ಬಂಡಿ ಶಾಲೆಯಿಂದ ಜಿಲ್ಲಾಡಳಿತ ಭವನಕ್ಕೆ ಬಂದ ಮಕ್ಕಳು ಮತ್ತು ಪ್ರವಾಸ ವ್ಯವಸ್ಥೆ ಮಾಡಿದ ಬೀರಪ್ಪ ಅವರಿಗೆ ಸಂಸದ ರಾಜಶೇಖರ ಹಿಟ್ನಾಳ ಶುಭ ಕೋರಿದರು.
ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಬೀರಪ್ಪ ’ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣದ ಅನುಭವ ಕಿರಿಯ ವಯಸ್ಸಿನಲ್ಲಿಯೇ ಲಭಿಸಬೇಕೆಂದು ಈ ವ್ಯವಸ್ಥೆ ಮಾಡಲಾಗಿದೆ. ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ವಿಮಾನ ಪ್ರವಾಸಕ್ಕೆ ಮಕ್ಕಳನ್ನು ಆಯ್ಕೆ ಮಾಡಲಾಗಿದೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.