ಕೊಪ್ಪಳ: ‘ರಾಜ್ಯದಲ್ಲಿಯೇ ಮಾದರಿ ಗುರುಭವನ ಕೊಪ್ಪಳದಲ್ಲಿ ನಿರ್ಮಿಸಿ, ಅದಕ್ಕೆ ಅಗತ್ಯ ಸಹಕಾರ ನೀಡುತ್ತೇನೆ’ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಭರವಸೆ ನೀಡಿದರು.
ನಗರದಶಾಸಕರ ಮಾದರಿಯ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಗುರುಭವನ ನಿರ್ಮಾಣಕ್ಕೆ ಮಂಜೂರಾಗಿರುವ ನಿವೇಶನ ವೀಕ್ಷಿಸಿ ಮಾತನಾಡಿದರು.
ಪ್ರಾಥಮಿಕ ಶಾಲಾ ಶಿಕ್ಷಕರ ವೃಂದ ಮತ್ತು ನೇಮಕಾತಿ ನಿಯಮ ತಿದ್ದುಪಡಿ, ಸೇವಾವಧಿಯಲ್ಲಿ ಸ್ವಂತ ಜಿಲ್ಲೆಗೆ ವರ್ಗಾವಣೆ ಹೊಂದುವ ಅವಕಾಶ, ಮುಖ್ಯಶಿಕ್ಷಕರಿಗೆ ವೇತನ ಬಡ್ತಿ ಮಂಜೂರಿ, ಎನ್ಪಿಎಸ್ ರದ್ದು ಮಾಡಿ ಒಪಿಎಸ್ ಜಾರಿ ಮಾಡುವುದು. ಗುರುಭವನ ನಿರ್ಮಾಣಕ್ಕೆ ಸರ್ಕಾರದಿಂದ ಮತ್ತು ಶಿಕ್ಷಕರ ಕಲ್ಯಾಣ ನಿಧಿಯಿಂದ ಅನುದಾನ ಬಿಡುಗಡೆ ಮಾಡಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಶಿಕ್ಷಕರು ಮನವಿ ಸಲ್ಲಿಸಿದ್ದಾರೆ. ಬೇಡಿಕೆ ಈಡೇರಿಕೆಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಶಂಭುಲಿಂಗನಗೌಡ ಪಾಟೀಲ, ಜಿಲ್ಲಾ ಘಟಕದ ಅಧ್ಯಕ್ಷ ಶರಣಗೌಡ ಪಾಟೀಲ ಅವರು ಸಚಿವರನ್ನು ಸನ್ಮಾನಿಸಿ ಮನವಿ ಸಲ್ಲಿಸಿದರು.
ಜಿಲ್ಲೆಯ ಶೈಕ್ಷಣಿಕ ವಲಯದ ಸಮಸ್ಯೆಗಳನ್ನು ಸಂಸದ ಸಂಗಣ್ಣ ಕರಡಿ ಸಚಿವರ ಗಮನಕ್ಕೆ ತಂದರು.
ಶಾಸಕ ಅಮರೇಗೌಡ ಬಯ್ಯಾಪುರ, ಪ್ರಧಾನ ಕಾರ್ಯದರ್ಶಿ ಮಂಜುನಾಥ ಬಿ. ತಾಲ್ಲೂಕು ಘಟಕದ ಅಧ್ಯಕ್ಷ ಪ್ರಾಣೇಶ ಪೂಜಾರ್,ಕೊಟ್ರಪ್ಪ ಗಡಗಿ ಹಾಗೂ ಮುಂತಾದವರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.