ಕೊಪ್ಪಳ: ರಾಜ್ಯದ ತೋಟಗಾರಿಕಾ ಹಬ್ ಆಗಿ ಬೆಳೆಯುತ್ತಿರುವ ಜಿಲ್ಲೆಯಲ್ಲಿ ತೋಟಗಾರಿಕೆ ತಂತ್ರಜ್ಞಾನ ಪಾರ್ಕ್ ಆರಂಭಿಸಬೇಕು ಎನ್ನುವ ಐದು ವರ್ಷಗಳ ಬೇಡಿಕೆಗೆ ಕೊನೆಗೂ ಮನ್ನಣೆ ಲಭಿಸಿದೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕನಕಗಿರಿ ತಾಲ್ಲೂಕಿನ ಸಿರವಾರ ಗ್ರಾಮದ ಬಳಿ ಪಾರ್ಕ್ ಆರಂಭಿಸಲು ಸರ್ಕಾರ ಅಸ್ತು ಎಂದಿದ್ದು, ರೈತರ ಆಸೆಗೆ ಬಲ ಬಂದಂತಾಗಿದೆ.
ಸಿರವಾರದ ಗ್ರಾಮದ ಬಳಿ ಇರುವ 194.33 ಎಕರೆ ಜಮೀನಿನಲ್ಲಿ ಸಾರ್ವಜನಿಕ ಹಾಗೂ ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಯಡಿ ₹83.79 ಕೋಟಿ ಅಂದಾಜು ವೆಚ್ಚದಲ್ಲಿ ತಂತ್ರಜ್ಞಾನ ಪಾರ್ಕ್ ಆರಂಭಿಸುವುದಾಗಿ ಸರ್ಕಾರ ತಿಳಿಸಿದೆ. 2020–21ರಲ್ಲಿ ಆಗಿನ ಬಿಜೆಪಿ ಸರ್ಕಾರ ತನ್ನ ಬಜೆಟ್ನಲ್ಲಿ ಪಾರ್ಕ್ ಘೋಷಣೆ ಮಾಡಿತ್ತು. ಆಗಿನಿಂದಲೂ ಅನುಷ್ಠಾನಕ್ಕೆ ತರಬೇಕು ಎಂದು ಅನೇಕ ಬಾರಿ ಪ್ರಯತ್ನ ಮಾಡಿದ್ದರೂ ಸಾಧ್ಯವಾಗಿರಲಿಲ್ಲ. ಕಳೆದ ವರ್ಷ ಸೆಪ್ಟೆಂಬರ್ 17ರಂದು ಕಲಬುರಗಿಯುಲ್ಲಿ ನಡೆದಿದ್ದ ಸಚಿವ ಸಂಪುಟ ಸಭೆಯಲ್ಲಿಯೂ ಚರ್ಚೆಗೆ ಬರಲಿಲ್ಲ. ಈ ಸಲವೂ ಕೊನೆಯ ಹಂತದಲ್ಲಿ ಸಂಪುಟ ಸಭೆಯಲ್ಲಿ ಪಾರ್ಕ್ ಕುರಿತ ವಿಚಾರವನ್ನು ಚರ್ಚೆಗೆ ತೆಗೆದುಕೊಂಡು ಸರ್ಕಾರ ಒಪ್ಪಿಗೆ ನೀಡಿದ್ದು ಜಿಲ್ಲೆಯ ತೋಟಗಾರಿಕಾ ಬೆಳೆಗಾರರ ಖುಷಿಗೆ ಕಾರಣವಾಗಿದೆ.
ಜಿಲ್ಲೆಯಲ್ಲಿ ವಿವಿಧ ತಳಿಗಳು ಮಾವು, ಪೇರಲ, ನೇರಳೆ, ಹಲಸು, ದ್ರಾಕ್ಷಿ, ದಾಳಿಂಬೆ, ಪೇರಲ, ಅಂಜೂರ, ಕಲ್ಲಂಗಡಿ, ಕರಬೂಜ, ಬಾಳೆ, ಪಪ್ಪಾಯ, ಅಣಬೆ, ದ್ರಾಕ್ಷಿ ತಳಿಗಳಾದ ಸೋನಾಕಾ, ಬೆಂಗಳೂರು ಬ್ಲ್ಯೂ ಹೀಗೆ ಅನೇಕ ಹಣ್ಣುಗಳನ್ನು ಬೆಳೆಯಲಾಗುತ್ತಿದೆ.
ಜಿಲ್ಲೆಯಲ್ಲಿಯೇ ತಂತ್ರಜ್ಞಾನ ಪಾರ್ಕ್ ಆದರೆ ಅವುಗಳ ಸಂಗ್ರಹ, ಮಾರುಕಟ್ಟೆ, ಮೌಲ್ಯವರ್ಧನೆ ಸುಲಭವಾಗುತ್ತದೆ. ನರ್ಸರಿ, ಮರಳಿ ಖರೀದಿಸು ಕೃಷಿ, ರೈತರಿಗೆ ನಿಶ್ಚಿತ ಆದಾಯ ಮತ್ತು ಉದ್ಯೋಗದ ಅವಕಾಶಗಳು ಹೆಚ್ಚಾಗಿ ತೋಟಗಾರಿಕಾ ಕ್ಷೇತ್ರವೂ ಹೆಚ್ಚಾಗಲು ಸಾಧ್ಯವಾಗುತ್ತದೆ.
2020–21ರ ಬಜೆಟ್ನಲ್ಲಿ ಘೋಷಣೆಯಾಗಿದ್ದ ಪಾರ್ಕ್ ಸಾರ್ವಜನಿಕ ಹಾಗೂ ಖಾಸಗಿ ಸಹಭಾಗಿತ್ವ ಕನಕಗಿರಿ ತಾಲ್ಲೂಕಿನ ಸಿರವಾರದಲ್ಲಿ ಆರಂಭಕ್ಕೆ ನಿರ್ಧಾರ
ತಂತ್ರಜ್ಞಾನ ಪಾರ್ಕ್ನಿಂದ ಉತ್ತರ ಕರ್ನಾಟಕದ ಜಿಲ್ಲೆಗಳ ತೋಟಗಾರಿಕಾ ಬೆಳೆಗಳಿಗೆ ಸ್ಥಳೀಯವಾಗಿಯೇ ಮಾರುಕಟ್ಟೆ ಸಂಸ್ಕರಣೆ ಮೌಲ್ಯವರ್ಧನೆ ಸಾಧ್ಯವಾಗುತ್ತದೆ.ಕೃಷ್ಣ ಸಿ. ಉಕ್ಕುಂದ ತೋಟಗಾರಿಕಾ ಇಲಾಖೆ ಉಪನಿರ್ದೇಶಕ
ತೋಟಗಾರಿಕಾ ತಂತ್ರಜ್ಞಾನ ಪಾರ್ಕ್ ಆರಂಭಿಸಲು ಮಾಡಬೇಕಾದ ಕೆಲಸಗಳ ಬಗ್ಗೆ ನಿರಂತರ ಪ್ರಯುತ್ನ ನಡೆಯುತ್ತಲೇ ಇತ್ತು. ಪಾರ್ಕ್ ಆರಂಭದಿಂದ ರೈತರಿಗೆ ಹೆಚ್ಚು ಅನುಕೂಲವಾಗುತ್ತದೆ.ಶಿವರಾಜ ತಂಗಡಗಿ ಜಿಲ್ಲಾ ಉಸ್ತುವಾರಿ ಸಚಿವ
ಪರಮಾಣು ವಿದ್ಯುತ್ ಸ್ಥಾವರ: ಪ್ರಾಥಮಿಕ ಅಧ್ಯಯನಕ್ಕೆ ಒಪ್ಪಿಗೆ ಕೊಪ್ಪಳ: ಪರಮಾಣು ವಿದ್ಯುತ್ ಸ್ಥಾವರ ಸ್ಥಾಪನೆಯ ಉದ್ದೇಶಕ್ಕಾಗಿ ಜಿಲ್ಲೆಯ ವಿವಿಧೆಡೆ ಜಿಲ್ಲಾಡಳಿತ ಭೂಮಿ ಹುಡುಕಾಟ ನಡೆಸಿತ್ತು. ಇದಕ್ಕೆ ಸಾಕಷ್ಟು ವಿರೋಧ ವ್ಯಕ್ತವಾಗಿದ್ದರೂ ರಾಜ್ಯ ಸರ್ಕಾರ ಈಗ ಪರಮಾಣು ವಿದ್ಯುತ್ ಸ್ಥಾವರ ಸ್ಥಾಪಿಸಲು ತಾತ್ವಿಕ ಅನುಮೋದನೆ ಹಾಗೂ ಎನ್ಟಿಪಿಎಸ್ ಸಂಸ್ಥೆಯು ರಾಜ್ಯದಲ್ಲಿ ಪರಮಾಣು ವಿದ್ಯುತ್ ಸ್ಥಾಪನೆಗೆ ಗುರುತಿಸಿರುವ ಸಂಭಾವ್ಯ ಸ್ಥಳಗಳಲ್ಲಿ ಪ್ರಾಥಮಿಕ ಅಧ್ಯಯನ ನಡೆಸಲು ಅನುಮತಿ ನೀಡಿದೆ. ಈ ಸಂಸ್ಥೆ ಮೊದಲು ಕೊಪ್ಪಳ ತಾಲ್ಲೂಕಿನ ಇರಕಲ್ಲಗಡ ಗಂಗಾವತಿ ತಾಲ್ಲೂಕಿನ ಹಿರೇಬೆಣಕಲ್ ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ಭೂಮಿ ಪರಿಶೀಲನೆ ನಡೆಸಿತ್ತು. ಜೊತೆಗೆ ರಾಯಚೂರು ಮತ್ತು ವಿಜಯಪುರ ಜಿಲ್ಲೆಗಳಲ್ಲಿಯೂ ಸ್ಥಳ ಪರಿಶೀಲನೆ ನಡೆಸಿದೆ. ಈ ಕುರಿತು ಪ್ರಜಾವಾಣಿಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಸುರೇಶ ಇಟ್ನಾಳ ‘ಪರಮಾಣು ಸ್ಥಾವರ ವಿಚಾರ ಕುರಿತು ಸರ್ಕಾರಕ್ಕೆ ಯಾವುದೇ ವರದಿ ಸಲ್ಲಿಸಿಲ್ಲ’ ಎಂದರು. ಹಿಂದಿನ ಜಿಲ್ಲಾಧಿಕಾರಿ ನಲಿನ್ ಅತುಲ್ ಕೂಡ ಇದೇ ಮಾತು ಹೇಳಿದ್ದರು. ಸಚಿವ ಸಂಪುಟ ಸಭೆಯಲ್ಲಿ ಯಲಬುರ್ಗಾ ತಾಲ್ಲೂಕಿನಲ್ಲಿ ತಾಲ್ಲೂಕು ಪ್ರಜಾಸೌಧ ಕಟ್ಟಡ ಕಾಮಗಾರಿ ₹16 ಕೋಟಿಗಳ ಅಂದಾಜು ಮೊತ್ತದಲ್ಲಿ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ ಲಭಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.