ADVERTISEMENT

ಕೊಪ್ಪಳದಲ್ಲಿನ ಅಗ್ನಿಪಥ್‌ ಸೇನಾ ನೇಮಕಾತಿ ರ್‍ಯಾಲಿಯಲ್ಲಿ ಅರ್ಹತೆ ಪಡೆದವರು ಎಷ್ಟು?

ಕೊಪ್ಪಳದಲ್ಲಿ ಹಲವು ದಿನಗಳಿಂದ ನಡೆಯುತ್ತಿರುವ ಅಗ್ನಿಪಥ್‌ ಸೇನಾ ನೇಮಕಾತಿ ರ್‍ಯಾಲಿ

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2024, 13:22 IST
Last Updated 6 ಡಿಸೆಂಬರ್ 2024, 13:22 IST
   

ಕೊಪ್ಪಳ: ಕೊಪ್ಪಳದಲ್ಲಿ ಹಲವು ದಿನಗಳಿಂದ ನಡೆಯುತ್ತಿರುವ ಅಗ್ನಿಪಥ್‌ ಸೇನಾ ನೇಮಕಾತಿ ರ್‍ಯಾಲಿಯಲ್ಲಿ 7,186 ಅಭ್ಯರ್ಥಿಗಳು ಓಟದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.

30 ಸಾವಿರಕ್ಕಿಂತಲೂ ಹೆಚ್ಚಿನ ಅಭ್ಯರ್ಥಿಗಳು ಲಿಖಿತ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದರು. ಅದರಲ್ಲಿ 9,130 ಅಭ್ಯರ್ಥಿಗಳು ದೈಹಿಕ ಕ್ಷಮತೆ ಪರೀಕ್ಷೆಗೆ ಅರ್ಹತೆ ಪಡೆದುಕೊಂಡಿದ್ದರು. 2,380 ವೈದ್ಯಕೀಯ ಪರೀಕ್ಷೆ ಉತ್ತೀರ್ಣರಾಗಿದ್ದಾರೆ. 1,878 ಅಭ್ಯರ್ಥಿಗಳದ್ದು ವೈದ್ಯಕೀಯ ಪರೀಕ್ಷೆಯ ಮರು ಪರಿಶೀಲನೆಗೆ ಕಳುಹಿಸಲಾಗಿದ್ದು, ಆಯ್ಕೆಯಾದವರ ಅಂತಿಮ ಪಟ್ಟಿ ಡಿ. 8ರಂದು ಲಭಿಸಲಿದೆ.

ನೇಮಕಾತಿ ಪ್ರಕ್ರಿಯೆ ನಡೆಯುತ್ತಿರುವ ಇಲ್ಲಿನ ಜಿಲ್ಲಾ ಕ್ರೀಡಾಂಗಣಕ್ಕೆ ಶುಕ್ರವಾರ ಸೇನಾ ನೇಮಕಾತಿ ವಿಭಾಗದ ಎಡಿಜಿ ಬೆಂಗಳೂರಿನ ಮೇಜರ್‌ ಜನರಲ್ ಹರಿಪಿಳೈ ಭೇಟಿ ನೀಡಿ ಪರಿಶೀಲಿಸಿದರು. ‘ಇಲ್ಲಿ ಸೇನಾ ನೇಮಕಾತಿ ರ‍್ಯಾಲಿ ಸುಸೂತ್ರವಾಗಿ ನಡೆಯಲು ಸಹಕಾರ ನೀಡಿದ ಜಿಲ್ಲಾಡಳಿತ ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳ ಕಾರ್ಯ ಶ್ಲಾಘನೀಯ’ ಎಂದು ಹೇಳಿದರು.

ADVERTISEMENT

‘ಬೆಳಗಾವಿ ವಿಭಾಗದಲ್ಲಿ ನಡೆದ ದೊಡ್ಡಮಟ್ಟದ ಈ ರ‍್ಯಾಲಿ ಯಶಸ್ವಿಯಾಗಿ ನಡೆಯಲು ತಮ್ಮೆಲ್ಲರ ಉತ್ತಮ ಸಹಕಾರ ಇದೆ. ನಮ್ಮ ಪ್ರಯತ್ನ ನಿಜವಾದ ಪ್ರತಿಭಾವಂತರಿಗೆ ತಲುಪಬೇಕು. ತಾಲ್ಲೂಕು ಹಾಗೂ ಗ್ರಾಮೀಣ ಭಾಗದಲ್ಲಿ ಬಹಳಷ್ಟು ಪ್ರತಿಭಾವಂತ ವಿದ್ಯಾರ್ಥಿಗಳಿದ್ದು ಅಂಥವರಿಗೆ ಪ್ರೋತ್ಸಾಹ ನೀಡಬೇಕಿದೆ’ ಎಂದರು.

ನೇಮಕಾತಿ ವಿಭಾಗದ ನಿರ್ದೇಶಕ ಬೆಳಗಾವಿಯ ಕರ್ನಲ್ ಎ.ಕೆ. ಉಪಾಧ್ಯಾಯ ಮಾತನಾಡಿ ‘ಆರಂಭದ ಮೊದಲ ಸಭೆಯಿಂದ ಜಿಲ್ಲಾಡಳಿತ ನಮಗೆ ಉತ್ತಮ ಸಹಕಾರ ನೀಡಿದೆ. ನವೆಂಬರ್ 26ರಿಂದ ಆರಂಭವಾದ ರ‍್ಯಾಲಿ ಡಿ. 8ರಂದು ಪೂರ್ಣಗೊಳ್ಳಲಿದ್ದು, ಬೆಳಗಾವಿ ವಿಭಾಗದ ಬೆಳಗಾವಿ, ಬೀದರ್‌, ಯಾದಗಿರಿ, ಕಲಬುರಗಿ, ಕೊಪ್ಪಳ ಅಭ್ಯರ್ಥಿಗಳು ಪಾಲ್ಗೊಂಡಿದ್ದರು.

ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ರತ್ನಂ ಪಾಂಡೆಯ ಮಾತನಾಡಿ ‘ಕೊಪ್ಪಳದಲ್ಲಿ ರ‍್ಯಾಲಿ ಮಾಡಿದ್ದು ಖುಷಿಯ ವಿಚಾರ. ಇದರಿಂದ ಈ ಭಾಗದ ವಿದ್ಯಾರ್ಥಿಗಳಿಗೆ ಉದ್ಯೋಗ ದೊರೆಯುವದರ ಜೊತೆಗೆ ಸೇನೆಗೆ ಸೇರಲು ಅವರಿಗೆ ಪ್ರೇರಣೆ ನೀಡಿದಂತಾಗಿದೆ’ ಎಂದರು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್‌. ಅರಸಿದ್ಧಿ, ಹೆಚ್ಚುವರಿ ಜಿಲ್ಲಾಧಿಕಾರಿ ಸಿದ್ರಾಮೇಶ್ವರ. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಹೇಮಂತ್ ಕುಮಾರ್, ಸಹಾಯಕ ಆಯುಕ್ತ ಕ್ಯಾಪ್ಟನ್‌ ಮಹೇಶ್ ಮಾಲಗತ್ತಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ಸೇನಾ ನೇಮಕಾತಿ ಕಚೇರಿಯ ಸುಬೇದಾರ್ ಮೇಜರ್ ದಿನೇಶ್ ರಾಮ್ ಲೋಹಿಯಾ, ಯುವ ಸಬಲೀಕರ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವಿಠ್ಠಲ ಜಾಬಗೌಡರ, ನಗರಸಭೆ ಪೌರಾಯುಕ್ತ ಗಣಪತಿ ಪಾಟೀಲ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.