ಯಲಬುರ್ಗಾ: ತಾಲ್ಲೂಕಿನ ಮಂಗಳೂರು ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಉಪನ್ಯಾಸಕರನ್ನು ನೇಮಿಸಬೇಕು ಮತ್ತು ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ವಿದ್ಯಾರ್ಥಿಗಳು, ಕನ್ನಡಪರ ಸಂಘಟನೆ ಪದಾಧಿಕಾರಿಗಳು ಬುಧವಾರ ಪ್ರಾಚಾರ್ಯರಿಗೆ ಮನವಿಪತ್ರ ಸಲ್ಲಿಸಿದರು.
ಸಂಘಟನೆಯ ತಾಲ್ಲೂಕು ಘಟಕದ ಅಧ್ಯಕ್ಷ ರಾಜಶೇಖರ ಶ್ಯಾಗೋಟಿ ಮಾತನಾಡಿ, ಕಾಲೇಜಿನಲ್ಲಿ ಸೇವೆ ಸಲ್ಲಿಸುತ್ತಿರುವ ಉಪನ್ಯಾಸಕರು ಎರವಲು ಸೇವೆಯಾಗಿ ಪದೇ ಪದೇ ಬೇರೆ ಬೇರೆ ಕಾಲೇಜಿಗೆ ಹೋಗುತ್ತಾರೆ. ಬದಲಿಗೆ ಬೇರೆ ಕಾಲೇಜಿನ ಉಪನ್ಯಾಸಕರು ಕೂಡ ಇಲ್ಲಿ ನೇಮಕವಾಗದ ಕಾರಣ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗುತ್ತಿದೆ. ಪ್ರತಿ ವರ್ಷ ಇದೇ ಸಮಸ್ಯೆ ವಿದ್ಯಾರ್ಥಿಗಳು ಎದುರಿಸುತ್ತಿರುವುದರಿಂದ ಮಕ್ಕಳ ಶೈಕ್ಷಣಿಕ ಪ್ರಗತಿಯಲ್ಲಿ ಹಿನ್ನಡೆಗೆ ಕಾರಣವಾಗುತ್ತಿದೆ ಎಂದರು.
ಮುಖಂಡ ಮಂಜುನಾಥ ಬೇವಿನಹಾಲ ಮಾತನಾಡಿ, ಕಾಲೇಜಿನಲ್ಲಿ ಕಳೆದ ಮೂರು–ನಾಲ್ಕು ವರ್ಷಗಳಿಂದ ಕನ್ನಡ, ರಾಜ್ಯಶಾಸ್ತ್ರ ಹಾಗೂ ಇತಿಹಾಸ ವಿಷಯಗಳ ಉಪನ್ಯಾಸರು ಭರ್ತಿಯಾಗದೇ ಖಾಲಿ ಉಳಿದಿವೆ. ಈ ಸ್ಥಾನಕ್ಕೆ ಅತಿಥಿ ಉಪನ್ಯಾಸಕರನ್ನು ತಡವಾಗಿ ನೇಮಿಸಿಕೊಳ್ಳುವುದರಿಂದ ಸರಿಯಾದ ಸಮಯಕ್ಕೆ ಪಾಠ ಬೋಧನೆ ಸಾಧ್ಯವಾಗುತ್ತಿಲ್ಲ. ಈ ಸಮಸ್ಯೆಯನ್ನು ಕೂಡಲೇ ಪರಿಹರಿಸಬೇಕು’ ಎಂದರು.
ಮನವಿಗೆ ಸ್ಪಂದಿಸಿದ ಪ್ರಾಚಾರ್ಯ ಹನಮಂತಪ್ಪ ದೊಡ್ಮನಿ, ‘ಉಪನ್ಯಾಸಕರ ನೇಮಕ ವಿಷಯವನ್ನು ಹಿರಿಯ ಅಧಿಕಾರಿಗಳ ಗಮನಕ್ಕೆ ತರುತ್ತೇನೆ. ಸಮಸ್ಯೆ ನಿವಾರಣೆಗೆ ಪ್ರಯತ್ನಿಸುತ್ತೇನೆ’ ಎಂದರು.
ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ವಿಶ್ವನಾಥ ಮರಿಬಸಪ್ಪನರ ಹಾಗೂ ವಿವಿಧ ತರಗತಿ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.