ಕೊಪ್ಪಳ: ಕಲ್ಯಾಣ ಕರ್ನಾಟಕದ ಸಮಗ್ರ ಹಾಗೂ ಪರಿಣಾಮಕಾರಿ ಅಭಿವೃದ್ಧಿಗಾಗಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಜಾಥಾ ಹಮ್ಮಿಕೊಂಡಿದ್ದು, ಇದು ಕಲ್ಯಾಣ ಭಾಗದ ಎಲ್ಲ ಜಿಲ್ಲೆಗಳಲ್ಲಿಯೂ ಸಂಚರಿಸಲಿದೆ.
ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ರಾಜ್ಯಾಧ್ಯಕ್ಷ ತಾಹೇರ್ ಹುಸೇನ್ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ‘ಕಲ್ಯಾಣ ಕರ್ನಾಟಕದ ಪ್ರತಿ ಜಿಲ್ಲೆಯಲ್ಲಿಯೂ ವಿಭಿನ್ನವಾದ ಸಮಸ್ಯೆಗಳಿವೆ. ಜಾಥಾ ಮೂಲಕ ಎಲ್ಲ ಜಿಲ್ಲೆಗಳಿಗೆ ಭೇಟಿ ನೀಡಿ 371 ಜೆ ಅನುಷ್ಠಾನಕ್ಕೆ ಹೋರಾಡಿದ ಎಲ್ಲ ರಾಜಕೀಯ ಪಕ್ಷಗಳು, ಹೋರಾಟಗಾರರನ್ನು ಭೇಟಿಯಾಗಿ ಸಮಾಲೋಚನೆ ಮಾಡಲಾಗುತ್ತದೆ’ ಎಂದು ತಿಳಿಸಿದರು.
’ಈ ಭಾಗದಲ್ಲಿ ಮಾನವ ಅಭಿವೃದ್ಧಿ ಸೂಚಂಕ್ಯ ಹೆಚ್ಚಿಸಬೇಕು, ಜಿಲ್ಲಾ ಖನಿಜ ಪ್ರತಿಷ್ಠಾನ, ಕರ್ನಾಟಕ ಗಣಿ ಪರಿಸರದ ಪುನಶ್ಚೇತನ ಅಡಿ ಮತ್ತು ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಅನುದಾನ ಸಮರ್ಪಕವಾಗಿ ಬಳಕೆಯಾಗಬೇಕು, ಹೇರಳವಾಗಿರುವ ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು ಕೊಡಬೇಕು. ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಬೇಕು, ವಿಶೇಷ ಕೈಗಾರಿಕಾ ನೀತಿ ಜಾರಿ ಮಾಡಬೇಕು, ಬಾಕಿ ಇರುವ ನೀರಾವರಿ ಯೋಜನೆಗಳನ್ನು ಜಾರಿ ಮಾಡಬೇಕು. ಅಲ್ಪಸಂಖ್ಯಾತರು, ಹಿಂದುಳಿದವರು ಹಾಗೂ ದಲಿತರ ಮೇಲೆ ನಡೆಯುತ್ತಿರುವ ಅನ್ಯಾಯದ ವಿಚಾರಣೆ ನಡೆಸಲು ಪ್ರತ್ಯೇಕ ನ್ಯಾಯಾಲಯ ರಚನೆಯಾಗಬೇಕು’ ಎನ್ನುವ ಬೇಡಿಕೆಗಳ ಈಡೇರಿಕೆಗಾಗಿ ಜಾಥಾ ನಡೆಯುತ್ತಿದೆ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.