ADVERTISEMENT

ಎಸ್ಸೆಸ್ಸೆಲ್ಸಿ ಪರೀಕ್ಷೆ; 'ಮಕ್ಕಳಲ್ಲಿ ಆತ್ಮಸ್ಥೈರ್ಯ ತುಂಬಿ'

ಜು.19-22 ರಂದು ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ

​ಪ್ರಜಾವಾಣಿ ವಾರ್ತೆ
Published 16 ಜುಲೈ 2021, 15:45 IST
Last Updated 16 ಜುಲೈ 2021, 15:45 IST
ಕುಷ್ಟಗಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಪೂರ್ವಸಿದ್ಧತೆ ಸಭೆಯಲ್ಲಿ ಶಾಸಕ ಅಮರೇಗೌಡ ಬಯ್ಯಾಪುರ ಶಿಕ್ಷಣ ಇಲಾಖೆಗೆ ಮಾಸ್ಕ್‌ಗಳನ್ನು ಹಸ್ತಾಂತರಿಸಿದರು
ಕುಷ್ಟಗಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಪೂರ್ವಸಿದ್ಧತೆ ಸಭೆಯಲ್ಲಿ ಶಾಸಕ ಅಮರೇಗೌಡ ಬಯ್ಯಾಪುರ ಶಿಕ್ಷಣ ಇಲಾಖೆಗೆ ಮಾಸ್ಕ್‌ಗಳನ್ನು ಹಸ್ತಾಂತರಿಸಿದರು   

ಕುಷ್ಟಗಿ: ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಗೆ ಹಾಜರಾಗುವ ಮಕ್ಕಳಲ್ಲಿ ಪಾಲಕರು ಮತ್ತು ಶಿಕ್ಷಕರು ಆತ್ಮಸ್ಥೈರ್ಯ ತುಂಬುವುದಕ್ಕೆ ಮುಂದಾಗಬೇಕು ಎಂದು ಶಾಸಕ ಅಮರೇಗೌಡ ಬಯ್ಯಾಪುರ ಶುಕ್ರವಾರ ಇಲ್ಲಿ ಹೇಳಿದರು.

ಜು.19-22 ರಂದು ನಡೆಯಲಿರುವ ಪರೀಕ್ಷೆಗೆ ಸಂಬಂಧಿಸಿದಂತೆ ಪೂರ್ವಸಿದ್ಧತೆ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮುಂಬರುವ ದಿನಗಳಲ್ಲಿ ಕೋವಿಡ್‌ 3ನೇ ಅಲೆಯ ಸಾಧ್ಯತೆಯ ಬಗ್ಗೆ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಇಂಥ ಸಂಭವನೀಯ ಸವಾಲಿನ ನಡುವೆಯೂ ಪರೀಕ್ಷೆಯನ್ನು ಅತ್ಯಂತ ಜಾಗರುಕತೆ ಮತ್ತು ಜವಾಬ್ದಾರಿಯಿಂದ ನಡೆಸುವ ಹೊಣೆಗಾರಿಕೆ ಶಿಕ್ಷಣ ಇಲಾಖೆಯ ಜೊತೆಗೆ ಪ್ರತಿಯೊಬ್ಬರ ಮೇಲೆಯೂ ಇದೆ ಎಂದರು.

ಪರೀಕ್ಷೆ ಸಂದರ್ಭದಲ್ಲಿ ಕೋವಿಡ್‌ ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಅಳವಡಿಸಿಕೊಳ್ಳಬೇಕು, ಇತರೆ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಶಿಕ್ಷಣ ಇಲಾಖೆಗೆ ಸಹಕಾರ ನೀಡಬೇಕು ಎಂದು ಹೇಳಿದರು.

ADVERTISEMENT

ಇದೇ ಸಂದರ್ಭದಲ್ಲಿ ಪರೀಕ್ಷೆಗೆ ಆಗಮಿಸುವ ಮಕ್ಕಳಿಗಾಗಿ ವೈಯಕ್ತಿಕ ಕೊಡುಗೆಯಾಗಿ ನೀಡಿದ 5,000 ಮಾಸ್ಕ್‌ಗಳನ್ನು ಶಾಸಕ ಅಮರೇಗೌಡ ಬಯ್ಯಾಪುರ ಶಿಕ್ಷಣ ಇಲಾಖೆಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ತಹಶೀಲ್ದಾರ್ ಎಂ.ಸಿದ್ದೇಶ್‌, ಪರೀಕ್ಷಾ ಸಿಬ್ಬಂದಿ ಪ್ರತಿಯೊಬ್ಬರೂ ಕೋವಿಡ್‌ ಲಸಿಕೆ ಹಾಕಿಸಿಕೊಂಡಿದ್ದನ್ನು ದೃಢಪಡಿಸಬೇಕು. ಕೋವಿಡ್‌ ನಿಯಮಗಳ ಅನುಸಾರವೇ ಪರೀಕ್ಷೆ ನಡೆಸಬೇಕಿದೆ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಚೆನ್ನಬಸಪ್ಪ ಮಾತನಾಡಿ, ತಾಲ್ಲೂಕಿನಲ್ಲಿ ಒಟ್ಟು 28 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದ್ದು 4539 ವಿದ್ಯಾರ್ಥಿಗಳು ಪರೀಕ್ಷೆಗೆ ಆಗಮಿಸಲಿದ್ದಾರೆ ಎಂದು ವಿವರಿಸಿದರು.

ಆರೋಗ್ಯ ಇಲಾಖೆ ಸೇವೆ ಮಾಹಿತಿ ನೀಡಿದ ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಆನಂದ ಗೋಟೂರು, ಬೆಳಿಗ್ಗೆ 8 ರಿಂದಲೇ ಪರೀಕ್ಷಾ ಕೇಂದ್ರದಲ್ಲಿ ಇಲಾಖೆ ಸಿಬ್ಬಂದಿ ಕೋವಿಡ್ ತಪಾಸಣೆ ನಡೆಸಲಿದ್ದಾರೆ ಎಂದು ಹೇಳಿದರು.

ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ಶ್ರೀಶೈಲ ಸೋಮನಕಟ್ಟಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಡಾ.ಜಯರಾಮ ಚವ್ಹಾಣ, ಸಬ್‌ ಇನ್‌ಸ್ಪೆಕ್ಟರ್‌ ತಿಮ್ಮಣ್ಣ ನಾಯಕ, ಜೆಸ್ಕಾಂ ಎಂಜಿನಿಯರ್‌ ಸುನಿಲ್‌, ಡಯಟ್‌ ಉಪನ್ಯಾಸಕ ವೆಂಕಟೇಶ್‌ ಕೊಂಕಲ್, ಧರ್ಮಕುಮಾರ ಕಂಬಳಿ ಹಾಗೂ ವಿವಿಧ ಇಲಾಖೆಗಳ ಸಿಬ್ಬಂದಿ ಸಭೆಯಲ್ಲಿ ಇದ್ದರು. ಶರಣಪ್ಪ ತೆಮ್ಮಿನಾಳ ನಿರೂಪಿಸಿದರು. ಹಾಗೂ ವಿವಿಧ ಇಲಾಖೆಗಳ ಸಿಬ್ಬಂದಿ ಸಭೆಯಲ್ಲಿ ಇದ್ದರು.

ಶರಣಪ್ಪ ತೆಮ್ಮಿನಾಳ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.