ಕಾರಟಗಿ: ‘ಪಕ್ಷ ಸಂಘಟನೆಗೆ ಪ್ರಾಮಾಣಿಕವಾಗಿ ಶ್ರಮಿಸಿದವರನ್ನು ಗುರುತಿಸಿ ಬಿಜೆಪಿ ಸೂಕ್ತ ಸಮಯದಲ್ಲಿ ಸೂಕ್ತ ಸ್ಥಾನಮಾನ ನೀಡುತ್ತದೆ. ತಿಪ್ಪೇರುದ್ರಸ್ವಾಮಿ ಅವರ ಪ್ರಾಮಾಣಿಕತೆಯನ್ನು ಗುರುತಿಸಿ, ತುಂಗಭದ್ರಾ ಕಾಡಾ ಅಧ್ಯಕ್ಷರನ್ನಾಗಿ ನೇಮಿಸಿದೆ. ಇರುವ ಅಧಿಕಾರಾವಧಿಯಲ್ಲಿ ರೈತರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಶ್ರಮಿಸಲಿದ್ದಾರೆ’ ಎಂದು ಶಾಸಕ ಬಸವರಾಜ ದಢೇಸುಗೂರ ಹೇಳಿದರು.
ಪಟ್ಟಣದ ಶಾಸಕರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಕಾಡಾ ಅಧ್ಯಕ್ಷ ತಿಪ್ಪೇರುದ್ರಸ್ವಾಮಿಯವರನ್ನು ಸನ್ಮಾನಿಸಿ ಮಾತನಾಡಿದರು.
‘ರಾಜ್ಯದಲ್ಲಿ ಈಗ ವಿವಿಧ ಅಭಿವೃದ್ದಿ ಕಾರ್ಯಗಳಾಗುತ್ತಿವೆ. ಬಿಜೆಪಿ ಸರ್ಕಾರ ಜನಪರ ಆಡಳಿತ ನೀಡುತ್ತಿದೆ. ಕೊರೊನಾ ಸಂಕಷ್ಟದಲ್ಲೂ ವಿದ್ಯಾರ್ಥಿಗಳಿಗೆ ಸಮಸ್ಯೆಯಾದಿರಲು ಆನ್ಲೈನ್ ಮೂಲಕ ಪಠ್ಯ ಬೋಧನೆ ಮಾಡಲಾಗುತ್ತಿದೆ. ಈಚೆಗೆ ಶಾಲೆಗಳು ಆರಂಭವಾಗಿವೆ. ವಿದ್ಯಾರ್ಥಿಗಳು ಸುರಕ್ಷತೆ ಕಾಪಾಡಿಕೊಳ್ಳುತ್ತ, ಸರ್ಕಾರದ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು’ ಎಂದರು.
ಕಾಡಾ ಅಧ್ಯಕ್ಷ ತಿಪ್ಪೇರುದ್ರಸ್ವಾಮಿ ಮಾತನಾಡಿ,‘ಪಕ್ಷ ಹಾಗೂ ಜನಪ್ರತಿನಿಧಿಗಳು ತಮ್ಮ ಮೇಲಿಟ್ಟಿರುವ ವಿಶ್ವಾಸಕ್ಕೆ ಬದ್ದನಾಗಿ ಪ್ರಾಮಾಣಿಕವಾಗಿ
ಕಾರ್ಯನಿರ್ವಹಿಸಿ, ರೈತರ ಸಮಸ್ಯೆಗಳ ಪರಿಹಾರಕ್ಕೆ ಯತ್ನಿಸುವುದಾಗಿ’ ಹೇಳಿದರು.
ವಿಶೇಷ ಎಪಿಎಂಸಿ ಅಧ್ಯಕ್ಷ ಸೋಮಶೇಖರಗೌಡ ಮುಸ್ಟೂರು, ರೈತ ಸಂಘದ ಮರಿಯಪ್ಪ ಸಾಲೋಣಿ ಹಾಗೂ ಮಂಜುನಾಥ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.