ADVERTISEMENT

ಕಲ್ಯಾಣ ಕರ್ನಾಟಕ ಉತ್ಸವ: ಈ ಭಾಗದ ಅಭಿವೃದ್ಧಿಗೆ ಒತ್ತು ನೀಡಿ -ಹಲಗಿ

ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮದಲ್ಲಿ ಉಪನ್ಯಾಸಕ ಈಶ್ವರ ಹಲಗಿ ಒತ್ತಾಯ

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2021, 12:01 IST
Last Updated 17 ಸೆಪ್ಟೆಂಬರ್ 2021, 12:01 IST
ಕನಕಗಿರಿಯ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನಡೆದ ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮದಲ್ಲಿ ಉಪನ್ಯಾಸಕ ಈಶ್ವರ ಹಲಗಿ ಮಾತನಾಡಿದರು.
ಕನಕಗಿರಿಯ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನಡೆದ ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮದಲ್ಲಿ ಉಪನ್ಯಾಸಕ ಈಶ್ವರ ಹಲಗಿ ಮಾತನಾಡಿದರು.   

ಕನಕಗಿರಿ: ‘ತ್ಯಾಗ, ಬಲಿದಾನ ಹಾಗೂ ಹೋರಾಟದ ಪ್ರತಿಫಲದಿಂದ ಹೈದರಾಬಾದ್ ಕರ್ನಾಟಕ ವಿಮೋಚನೆಗೊಂಡಿದೆ. ರಾಜಕಾರಣಿಗಳು ಇಚ್ಛಾಶಕ್ತಿ ಪ್ರದರ್ಶಿಸುವ ಮೂಲಕ ಹಿಂದುಳಿದ ಈ ಭಾಗದ ಅಭಿವೃದ್ದಿಗೆ ಹೆಚ್ಚಿನ ಒತ್ತು ನೀಡಬೇಕು’ ಎಂದು ಉಪನ್ಯಾಸಕ ಈಶ್ವರ ಹಲಗಿ ಆಗ್ರಹಿಸಿದರು.

ತಾಲ್ಲೂಕು ಆಡಳಿತದ ವತಿಯಿಂದ ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ಶುಕ್ರವಾರ ನಡೆದ ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕಲ್ಯಾಣ ಕರ್ನಾಟಕ ಪ್ರಾಂತ್ಯ ನಿಜಾಮನ ಕಪಿಮುಷ್ಠಿಯಿಂದ ಬಿಡುಗಡೆಗೊಂಡು 74 ವರ್ಷಗಳು ಕಳೆದರೂ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಹಾಗೂ ಕೈಗಾರಿಕಾ ಕ್ಷೇತ್ರದಲ್ಲಿ ಈ ಭಾಗ ತೀರ ಹಿಂದುಳಿದಿದೆ. ಶಿಕ್ಷಣ ಸಂಸ್ಥೆ ಅದರಲ್ಲಿಯೂ ವೃತ್ತಿ ಪರ ಶಿಕ್ಷಣ ಸಂಸ್ಥೆಗಳನ್ನು ತೆರೆಯುವ ಮೂಲಕ ನಿರುದ್ಯೋಗದ ಸಮಸ್ಯೆ ಹೋಗಲಾಡಿಸಬೇಕು ಎಂದು ಹೇಳಿದರು.

ADVERTISEMENT

ಬಹುತ್ವ ಭಾರತವನ್ನು ದುರ್ಬಲಗೊಳಿಸುವ ದುಷ್ಟ ಶಕ್ತಿಗಳ ವಿರುದ್ದ ಹೋರಾಟ ನಡೆಸುವುದು ಅನಿವಾರ್ಯವಾಗಿದೆ. ಸವಾಲುಗಳನ್ನು ಎದುರಿಸಿ ಭವ್ಯ ಭಾರತ ನಿರ್ಮಾಣ ಮಾಡಬೇಕು ಎಂದು ಅವರು ತಿಳಿಸಿದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕಾವ್ಯಾರಾಣಿ ಮಾತನಾಡಿ,‘ಈ ಭಾಗದ ಜನರಿಗೆ ಶಿಕ್ಷಣ ಹಾಗೂ ಉದ್ಯೋಗಾವಕಾಶಗಳನ್ನು ಒದಗಿಸಲು ಸಂವಿಧಾನದ 371 ಜೆ ತಿದ್ದುಪಡಿ ತುಂಬಾ ಸಹಾಯಕವಾಗಿದೆ. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿ ಉನ್ನತ ಹುದ್ದೆಗಳನ್ನು ಪಡೆಯಬೇಕು’ ಎಂದು ಹೇಳಿದರು.

ಗ್ರೇಡ್-2 ತಹಶೀಲ್ದಾರ್ ಮಹಾಂತಗೌಡ ಮಾತನಾಡಿದರು.

ಪಿಎಸ್‌ಐ ಕಾಶೀಂಸಾಬ, ತಾ.ಪಂ. ಯೋಜನಾ ಸಹಾಯಕ ರಾಜಶೇಖರ, ನರೇಗಾ ಸಹಾಯಕ ನಿರ್ದೇಶಕ ಚಂದ್ರಶೇಖರ, ಶಿಕ್ಷಣ ಸಂಯೋಜಕ ಆನಂದ ನಾಗಮ್ಮನವರ್, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷೆ ಶಂಶಾದಬೇಗ್ಂ, ಪ್ರಭಾರ ಪ್ರಾಂಶುಪಾಲ ಮಾರೆಪ್ಪ, ಅಧಿಕಾರಿಗಳಾದ ಇಮಾಲೆಪ್ಪ ಹಾಗೂ ಗಂಗಾಧರ ಇದ್ದರು.

ಶಾಮೀದಾಬ ಸ್ವಾಗತಿಸಿದರು. ಪ್ರಭುಲಿಂಗ ವಸ್ತ್ರದ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.