
ಕನಕಗಿರಿ: ಗ್ರಾಮೀಣ ಭಾಗದ ಅರ್ಹ ಫಲಾನುಭವಿಗಳು ಗ್ಯಾರಂಟಿ ಯೋಜನೆಗಳಿಂದ ವಂಚಿತರಾಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ತಾಲ್ಲೂಕು ಪಂಚಾಯಿತಿ ಯೋಜನಾಧಿಕಾರಿ ಬಿ.ಹುಲಗಪ್ಪ ಹೇಳಿದರು.
ತಾಲ್ಲೂಕಿನ ಚಿಕ್ಕಡಂಕನಕಲ್ ಗ್ರಾಮ ಪಂಚಾಯಿತಿಯಲ್ಲಿ ಬುಧವಾರ ಆಯೋಜಿಸಿದ್ದ ಗ್ಯಾರಂಟಿ ಯೋಜನೆ ಪ್ರಗತಿ ಪರಿಶೀಲನಾ ಸಭೆ ಹಾಗೂ ಫಲಾನುಭವಿಗಳ ಜತೆ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಶಿಶು ಅಭಿವೃದ್ದಿ ಯೋಜನಾಧಿಕಾರಿ ವಿರೂಪಾಕ್ಷಿ ಮಾತನಾಡಿ, ‘ಸರ್ಕಾರದ ಯೋಜನೆಗಳನ್ನು ಮನೆ ಬಾಗಿಲಿಗೆ ತಲುಪಿಸಲಾಗುತ್ತಿದೆ. ಗೃಹಲಕ್ಷ್ಮೀ ಯೋಜನೆ ಬಡವರಿಗೆ ವರದಾನವಾಗಿದೆ’ ಎಂದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ತಾಲ್ಲೂಕು ಅಧ್ಯಕ್ಷ ಹಜರತ ಹುಸೇನ ಮಾತನಾಡಿ, ‘ಅನ್ನಭಾಗ್ಯದಡಿ ಪ್ರತಿ ತಿಂಗಳು ಪಡಿತರ ನೀಡಲಾಗುತ್ತಿದೆ. ನವೆಂಬರ್ ತಿಂಗಳಿನಿಂದ 75 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಮನೆ ಬಾಗಿಲಿಗೆ ಪಡಿತರ ತಲುಪಿಸಲು ಸರ್ಕಾರ ‘ಅನ್ನ ಸುವಿಧಾ’ ಯೋಜನೆ ಜಾರಿಗೆ ತಂದಿದೆ’ ಎಂದರು.
ಈ ಸಂದರ್ಭದಲ್ಲಿ ಯುವನಿಧಿ, ಗೃಹಜ್ಯೋತಿ, ಗೃಹ ಶಕ್ತಿ ಯೋಜನೆಯ ಪ್ರಗತಿ ಪರಿಶೀಲಿಸಲಾಯಿತು.
ಹುಲಗಪ್ಪ, ಗ್ರಾಪಂ ಮಾಜಿ ಅಧ್ಯಕ್ಷೆ ನೀಲಮ್ಮ ಪವಾರ, ಮಾಜಿ ಉಪಾಧ್ಯಕ್ಷ ರಾಮಚಂದ್ರಗೌಡ, ಪಿಡಿಒ ಲಕ್ಷ್ಮಣ,
ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯ ಜಗದೀಶ ರಾಥೋಡ, ಜಗದೀಶ ಅಂಗಡಿ, ಭೀಮೇಶ, ವೀರೇಶ, ಯಮನೂರಪ್ಪ, ಕೊಟ್ರಯ್ಯ ಸ್ವಾಮಿ ಸೇರಿದಂತೆ ಅನೇಕರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.