ADVERTISEMENT

ಸೌಹಾರ್ದದಿಂದ ಹಬ್ಬ ಆಚರಿಸಿ: ಅತುಲ್‌

ಗೌರಿ ಗಣೇಶ ಹಬ್ಬ, ಈದ್ ಮಿಲಾದ್: ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆಯಿಂದ ಶಾಂತಿಸಭೆ

​ಪ್ರಜಾವಾಣಿ ವಾರ್ತೆ
Published 30 ಆಗಸ್ಟ್ 2024, 5:31 IST
Last Updated 30 ಆಗಸ್ಟ್ 2024, 5:31 IST
ಕೊಪ್ಪಳದಲ್ಲಿ ಗುರುವಾರ ನಡೆದ ಗೌರಿ ಗಣೇಶ ಹಬ್ಬ, ಈದ್ ಮಿಲಾದ್ ಶಾಂತಿ ಸಭೆಯಲ್ಲಿ ಜಿಲ್ಲಾಧಿಕಾರಿ ನಲಿನ್‌ ಅತುಲ್‌ ಮಾತನಾಡಿದರು
ಕೊಪ್ಪಳದಲ್ಲಿ ಗುರುವಾರ ನಡೆದ ಗೌರಿ ಗಣೇಶ ಹಬ್ಬ, ಈದ್ ಮಿಲಾದ್ ಶಾಂತಿ ಸಭೆಯಲ್ಲಿ ಜಿಲ್ಲಾಧಿಕಾರಿ ನಲಿನ್‌ ಅತುಲ್‌ ಮಾತನಾಡಿದರು   

ಕೊಪ್ಪಳ: ‘ಗೌರಿ ಗಣೇಶ ಮತ್ತು ಈದ್ ಮಿಲಾದ್ ಎರಡೂ ಹಬ್ಬಗಳು ಏಕಕಾಲಕ್ಕೆ ಬಂದಿರುವುದರಿಂದ ಎಲ್ಲರೂ ಪರಸ್ಪರ ಸ್ನೇಹ ಭಾವನೆಯಿಂದ ಹಬ್ಬ ಆಚರಿಸಬೇಕು. ಸೌಹಾರ್ದತೆ ಕಾಯ್ದುಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ನಲಿನ್‌ ಅತುಲ್‌ ಹೇಳಿದರು.

ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್‌ ಇಲಾಖೆಯಿಂದ ಗುರುವಾರ ನಡೆದ ಶಾಂತಿ ಸಭೆಯಲ್ಲಿ ಮಾತನಾಡಿದ ಅವರು ‘ಶಾಂತಿ ಸೌಹಾರ್ದತೆಗೆ ಹೆಸರಾದ ಜಿಲ್ಲೆಗೆ ಕಳಂಕ ಬಾರದ ರೀತಿಯಲ್ಲಿ, ಎಲ್ಲ ಧರ್ಮೀಯರೂ ಸೇರಿ ಕಾನೂನು ಸುವ್ಯವಸ್ಥೆಗೆ ಹಾಗೂ ಕೋಮು ಭಾವನೆಗಳಿಗೆ ಧಕ್ಕೆಬಾರದಂತೆ ಹಬ್ಬ ಆಚರಿಸಬೇಕು. ಇದಕ್ಕೆ ಜಿಲ್ಲಾಡಳಿತವೂ ಸಹಕಾರ ನೀಡುತ್ತದೆ’ ಎಂದರು.

‘ಹಬ್ಬ ಆಚರಣೆ ಸಂಬಂಧ ಸರ್ಕಾರ ಹೊರಡಿಸಿರುವ ಮಾರ್ಗಸೂಚಿ ಪಾಲನೆ ಮಾಡಬೇಕು. ಆಸ್ಪತ್ರೆ, ಶಾಲೆ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಸಾರ್ವಜನಿಕರು ಜವಾಬ್ದಾರಿಯುತವಾಗಿ ವರ್ತಿಸಬೇಕು. ಗಣೇಶ ಪ್ರತಿಷ್ಠಾಪನೆಗೆ ಅಗತ್ಯವಿರುವ ಸ್ಥಳ, ಪೆಂಡಾಲ್ ವಿದ್ಯುತ್ ಸಂಪರ್ಕ ಮುಂತಾದ ಪರವಾನಿಗೆಗಳನ್ನು ಏಕಗವಾಕ್ಷಿ ಪದ್ಧತಿಯಡಿ ಪಡೆದುಕೊಳ್ಳಬೇಕು. ಶುಭಾಶಯ ಕೋರುವ ಬ್ಯಾನರ್, ಬಂಟಿಂಗ್ ಆಳವಡಿಸಲು ಆಯಾ ಸ್ಥಳೀಯ ಪ್ರಾಧಿಕಾರದಿಂದ ಅನುಮತಿ ಪಡೆದುಕೊಳ್ಳಬೇಕು‘ ಎಂದು ಸೂಚಿಸಿದರು.

ADVERTISEMENT

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್ ಅರಿಸಿದ್ದಿ ಮಾತನಾಡಿ ‘ಗಣೇಶ ಪ್ರತಿಷ್ಠಾಪನೆಯ ಪೆಂಡಾಲ್‌ಗಳಲ್ಲಿ ಅಗ್ನಿನಂದಕ ಬಳಕೆ ಮಾಡಬೇಕು, ಸಿಸಿಟಿವಿ ಕ್ಯಾಮೆರಾ ಸಾರ್ವಜನಿಕರ ಪ್ರವೇಶ ಮತ್ತು ನಿರ್ಗಮನಕ್ಕೆ ಪ್ರತ್ಯೇಕ ದ್ವಾರ ನಿರ್ಮಿಸಬೇಕು. ಗಣೇಶ ಪ್ರತಿಷ್ಠಾಪನಾ ಮಂಡಳಿಯವರು ಮೂರ್ತಿಗಳ ವಿಸರ್ಜನೆ, ಮೆರವಣಿಗೆ ಮಾಡುವ ಮಾರ್ಗವನ್ನು ಮುಂಚಿತವಾಗಿ ಸಂಬಂಧಪಟ್ಟ ಪೊಲೀಸ್ ಠಾಣೆಗೆ ನೀಡಿ ಪರವಾನಗಿ ಪಡೆದುಕೊಳ್ಳಬೇಕು’ ಎಂದು ಹೇಳಿದರು.

ಕೊಪ್ಪಳ ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್‌ ಮಾತನಾಡಿ ‘ನಮ್ಮ ಜಿಲ್ಲೆಯಲ್ಲಿ ಶಾಂತಿ ನೆಲೆಸಿದೆ. ಇಲ್ಲಿ ಎಲ್ಲರೂ ಶಾಂತಿ, ಸೌಹಾರ್ದಯಿಂದ ಬಾಳುತ್ತಿದ್ದೇವೆ. ಎಲ್ಲಾ ಹಬ್ಬಗಳನ್ನು ಹಿಂದೂ-ಮುಸ್ಲಿಂ ಒಗ್ಗೂಡಿ ಆಚರಿಸುತ್ತೇವೆ’ ಎಂದು ಭರವಸೆ ನೀಡಿಎದರು. 

ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್‌ ರತ್ನಂ ಪಾಂಡೆಯ, ಹೆಚ್ಚುವರಿ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೇಮಂತ ಕುಮಾರ್, ಉಪ ವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ, ಮುಖಂಡರಾದ ನಾಸೀರ ಹುಸೇನಿ, ರಾಜಶೇಖರ ಆಡೂರ, ಗಂಗಾವತಿಯ ಶಾಮೀದ್ ಮನಿಯಾರ್‌ ಸೇರಿದಂತೆ ವಿವಿಧ ಸಮುದಾಯಗಳ ಮುಖಂಡರು ಪಾಲ್ಗೊಂಡಿದ್ದರು.

ನಿಗದಿತ ಮಾರ್ಗದಲ್ಲಿಯೇ ಮೂರ್ತಿ ವಿಸರ್ಜನೆಗೆ ನಿರ್ದೇಶನ ಗಣೇಶ ಪ್ರತಿಷ್ಠಾಪನೆ ಅನುಮತಿಗೆ ಏಕಗವಾಕ್ಷಿ ಪದ್ಧತಿ ಪರಿಸರ ಸ್ನೇಹಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಸೂಚನೆ

ಜಿಲ್ಲೆಯ ಸಾರ್ವಜನಿಕರು ಇದುವರೆಗೆ ಜಿಲ್ಲಾಡಳಿತ ಜಿಲ್ಲಾ ಪೊಲೀಸ್ ಇಲಾಖೆಗೆ ಸಹಕಾರ ನೀಡಿದ್ದಾರೆ. ಮುಂದೆಯು ಸಹ ಸಹಕಾರ ನೀಡಿ ಎರಡೂ ಹಬ್ಬಗಳು ಶಾಂತಿಯಿಂದ ನೆರವೇರುವಂತೆ ಮಾಡಬೇಕು.
ನಲಿನ್‌ ಅತುಲ್‌ ಜಿಲ್ಲಾಧಿಕಾರಿ
ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆ ಮಾರ್ಗದ ಬಗ್ಗೆ ಪ್ರತಿಷ್ಠಾಪನಾ ಮಂಡಳಿಯವರು ಮೊದಲೇ ಮಾಹಿತಿ ನೀಡಿ ಅನುಮತಿ ಪಡೆದುಕೊಳ್ಳಬೇಕು. ಯಾವುದೇ ಕಾರಣಕ್ಕೂ ಮಾರ್ಗ ಬದಲಿಸಬಾರದು.
ಡಾ. ರಾಮ್. ಎಲ್‌. ಅರಸಿದ್ಧಿ ಎಸ್‌.ಪಿ ಕೊಪ್ಪಳ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.