
ಕೊಪ್ಪಳ: ಪೌಲ್ಟ್ರಿ ಫೀಡ್, ಕೋಳಿ ಫಾರಂಗಳ ಮೂಲಕ ರೈತರ ಮೆಕ್ಕಜೋಳ ಖರೀದಿಸಲು ಜಿಲ್ಲೆಯ ಪ್ರತಿ ಕೋಳಿ ಫಾರಂಗಳ ಬೇಡಿಕೆಯಂತೆ ಪೂರೈಸಲು ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಅವರು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಲಾಖೆ ಅಧಿಕಾರಿಗಳು, ರೈತರು ಹಾಗೂ ಕೋಳಿ ಫಾರ್ಮ್ ಮಾಲೀಕರ ಜೊತೆ ನಡೆದ ಸಭೆಯಲ್ಲಿ ಮಾತನಾಡಿದ ಅವರು ‘ಸರ್ಕಾರದ ಆದೇಶದಂತೆ 2025-26ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿ ಮುಂಗಾರು ಹಂಗಾಮಿನಲ್ಲಿ ರೈತರು ಬೆಳೆದ ಮೆಕ್ಕೆಜೋಳವನ್ನು ಪ್ರತಿ ರೈತರಿಂದ 50 ಕ್ವಿಂಟಲ್ ಮೆಕ್ಕೆಜೋಳವನ್ನು ಪ್ರತಿ ಕ್ವಿಂಟಲ್ಗೆ ₹2400ರಂತೆ ಖರೀದಿ ಸಂಸ್ಥೆಯಾದ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿ ಮೂಲಕ ಖರೀದಿಸಬೇಕಾಗಿದೆ’ ಎಂದರು.
‘ಕೋಳಿ ಫಾರಂಗಳ ಆಹಾರ ತಯಾರಿಕೆಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಮೆಕ್ಕೆಜೋಳವನ್ನು ಬಳಸಲಾಗುತ್ತದೆ. ಹಾಗಾಗಿ ಪ್ರಸಕ್ತ ಸಾಲಿನಲ್ಲಿ ಕೋಳಿ ಫಾರಂಗಳಿಗೆ ಅವಶ್ಯವಿರುವ ಒಟ್ಟಾರೆ ಬೇಡಿಕೆಯನ್ನು ನೀಡಬೇಕು’ ಎಂದರು.
ಕೋಳಿ ಫಾರಂ ಮಾಲೀಕರ ಪ್ರತಿನಿಧಿಗಳು ಮಾತನಾಡಿ ಒಟ್ಟು ಮೂರು ಸಾವಿರ ಮೆಟ್ರಿಕ್ ಟನ್ ಮೆಕ್ಕಜೋಳ ಬೆಂಬಲ ಬೆಲೆ ಯೋಜನೆಯಡಿ ಖರೀದಿಸುವುದಾಗಿ ತಿಳಿಸಿದರು.
ಕೃಷಿ ಇಲಾಖೆ ಜಂಟಿ ನಿರ್ದೇಶಕ ಜಿ.ಡಿ. ಕೃಷ್ಣಮೂರ್ತಿ, ಕೊಪ್ಪಳ ಕೃಷಿ ಮಾರಾಟ ಇಲಾಖೆಯ ಸಹಾಯಕ ನಿರ್ದೇಶಕ ವಿ.ಜಿ. ಹಿರೇಮಠ, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕ ಡಾ. ಪಿ.ಎಂ. ಮಲ್ಲಯ್ಯ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.