ADVERTISEMENT

ಕೊಪ್ಪಳ: ‘ಸರಳೀಕರಿಸಿ ಮಕ್ಕಳಿಗೆ ಪಾಠಮಾಡಿ’

ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಣೆಗೆ ಕ್ರಮ: ಪ್ರಗತಿ ಪರಿಶೀಲನಾ ಸಭೆ

​ಪ್ರಜಾವಾಣಿ ವಾರ್ತೆ
Published 17 ಡಿಸೆಂಬರ್ 2025, 7:20 IST
Last Updated 17 ಡಿಸೆಂಬರ್ 2025, 7:20 IST
ಕೊಪ್ಪಳದಲ್ಲಿ ಮಂಗಳವಾರ ನಡೆದ ಎಸ್‌ಎಸ್‌ಎಲ್‌ಸಿ ವಾರ್ಷಿಕ ಫಲಿತಾಂಶ ಸುಧಾರಣೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡಿದ್ದ ಶಿಕ್ಷಣ ಇಲಾಖೆ ಸಿಬ್ಬಂದಿ  
ಕೊಪ್ಪಳದಲ್ಲಿ ಮಂಗಳವಾರ ನಡೆದ ಎಸ್‌ಎಸ್‌ಎಲ್‌ಸಿ ವಾರ್ಷಿಕ ಫಲಿತಾಂಶ ಸುಧಾರಣೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡಿದ್ದ ಶಿಕ್ಷಣ ಇಲಾಖೆ ಸಿಬ್ಬಂದಿ     

ಕೊಪ್ಪಳ: ‘ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಣೆಗೆ ಶಿಕ್ಷಕರು ಕಠಿಣ ವಿಷಯಗಳನ್ನು ಸರಳೀಕರಿಸಿ ಮಕ್ಕಳಿಗೆ ಸುಲಭವಾಗಿ ತಿಳಿಯುವ ಹಾಗೆ ಪಾಠ ಬೋಧನೆ ಮಾಡಬೇಕು’ ಎಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಹೇಳಿದರು.

ಜಿಲ್ಲಾ ಪಂಚಾಯಿತಿಯ ಜೆ.ಎಚ್‌. ಪಟೇಲ್‌ ಸಭಾಂಗಣದಲ್ಲಿ ಮಂಗಳವಾರ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು, ದತ್ತು ಶಾಲೆ, ಎಸ್ಎಸ್‌ಎಲ್‌ಸಿ ತಾಲ್ಲೂಕು ನೋಡಲ್‌ ಅಧಿಕಾರಿಗಳು, ನೋಡಲ್‌ ಮತ್ತು ಅನುದಾನಿತ ಪ್ರೌಢಶಾಲೆಯ ಮುಖ್ಯ ಶಿಕ್ಷಕರ ಜೊತೆ ನಡೆದ ವಾರ್ಷಿಕ ಪರೀಕ್ಷಾ ಫಲಿತಾಂಶ ಸುಧಾರಣೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. 

‘ಮಕ್ಕಳಿಗೆ ಸರಿಯಾಗಿ ತಿಳಿಯುವ ರೀತಿಯಲ್ಲಿ ವಿಶೇಷ ಕೌಶಲ್ಯಗಳನ್ನು ಉಪಯೋಗಿಸಿ ಪಾಠ ಮಾಡಿದರೆ ಅವರು ತಮ್ಮ ತರಗತಿಯಲ್ಲಿ ಆಸಕ್ತಿಯಿಂದ ಕುಳಿತು ತಾವು ಹೇಳುವ ಪಾಠ ಕಲಿಯುತ್ತಾರೆ. ನಾವು ಕಲಿಯುವ ಅಂದಿನ ದಿನಮಾನಗಳಲ್ಲಿ ಶಿಕ್ಷಕರು ಮಕ್ಕಳನ್ನು ತಮ್ಮ ಮಕ್ಕಳಂತೆ ತಿಳಿದು ವಿಶೇಷ ಕಾಳಜಿವಹಿಸಿ ಪಾಠ ಮಾಡುತ್ತಿದ್ದರು. ಗಣಿತ, ಹಳೆಗನ್ನಡ ಸೇರಿದಂತೆ ಇತರೆ ಕಠಿಣ ವಿಷಯಗಳನ್ನು ಸರಳೀಕರಿಸಿ ಪಾಠ ಮಾಡಿದಾಗ ಆ ವಿಷಯ ಮಕ್ಕಳ ತಲೆಯಲ್ಲಿ ಸುಲಭವಾಗಿ ಹೋಗುತ್ತದೆ’ ಎಂದು ಸಲಹೆ ನೀಡಿದರು.

ADVERTISEMENT

‘ಜಿಲ್ಲೆಯ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆಗೆ ಶಿಕ್ಷಕರು ವಿಶೇಷ ಒತ್ತು ನೀಡಬೇಕು. ಕಳೆದ ಸಲದಂತೆ ಈ ಸಲ ನಮ್ಮ ಜಿಲ್ಲೆಯ ಫಲಿತಾಂಶ ಕಡಿಮೆಯಾಗಬಾರದು. ಜಿಲ್ಲೆಯಲ್ಲಿ ಈ ಹಿಂದೆ ಒಳ್ಳೆಯ ಫಲಿತಾಂಶ ಬಂದ ಶಾಲೆಗಳಿಗೆ ಭೇಟಿ ನೀಡಿ, ಅಲ್ಲಿ ಮಕ್ಕಳಿಗೆ ಯಾವ ರೀತಿಯಲ್ಲಿ ಬೋಧನೆ ಮಾಡುತ್ತಿದ್ದಾರೆ ಎಂದು ತಿಳಿದು ಅದನ್ನು ನಿಮ್ಮಲ್ಲಿ ಅಳವಡಿಸಿಕೊಳ್ಳಬೇಕು. ಫಲಿತಾಂಶ ಕಡಿಮೆಯಾದ ಶಾಲೆಗಳನ್ನು ದತ್ತು ಪಡೆದು ಅವುಗಳ ಸುಧಾರಣೆಗೆ ಒತ್ತು ನೀಡಬೇಕು‘ ಎಂದು ಹೇಳಿದರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಸೋಮಶೇಖರಗೌಡ ಪಾಟೀಲ ಮಾತನಾಡಿ ‘ಜಿಲ್ಲೆಯ ಸರ್ಲಾರಿ ಶಾಲೆಗಳಿಗೆ ಭೇಟಿ ನೀಡಿ ಅಲ್ಲಿನ ಶೈಕ್ಷಣಿಕ ಚಟುವಟಿಕೆಗಳನ್ನು ವೀಕ್ಷಣೆ ಮಾಡಲಾಗುತ್ತಿದೆ. ವಾರ್ಷಿಕ ಪರೀಕ್ಷೆಗೆ ಮೂರು ತಿಂಗಳು ಮಾತ್ರ ಉಳಿದಿದ್ದು, ಎಲ್ಲಾ ಮುಖ್ಯೋಪಾಧ್ಯಾಯರು ಜವಾಬ್ದಾರಿಯಿಂದ ಕೆಲಸ ಮಾಡಬೇಕು. ಬೆಳಿಗ್ಗೆ ಮತ್ತು ಸಂಜೆ ವಿಶೇಷ ತರಗತಿ ತೆಗೆದುಕೊಳ್ಳುವಾಗಿ ಎಲ್ಲಾ ಶಿಕ್ಷಕರ ಉಪಸ್ಥಿತಿ ಮುಖ್ಯವಾಗಿದೆ’ ಎಂದರು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಟಿ.ಕೃಷ್ಣಮೂರ್ತಿ, ಜಿಲ್ಲೆಯ ಎಲ್ಲಾ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಇಲಾಖೆಯ ಸಿಬ್ಬಂದಿ ಪಾಲ್ಗೊಂಡಿದ್ದರು.

ಕಲಿಕೆ ನಿರಂತರ ಪ್ರಕ್ರಿಯೆಯಾಗಿದ್ದು ಎಲ್ಲರೂ ಒಂದಿಲ್ಲ ಒಂದು ಹೊಸ ವಿಷಯ ಕಲಿಯುತ್ತಲೇ ಇರಬೇಕು. ಶಿಕ್ಷಕರು ಅಹಂ ಬಿಟ್ಟು ಕೆಲಸ ಮಾಡಿದಾಗ ತಮ್ಮ ಗುರಿ ತಲುಪಲು ಸಾಧ್ಯವಿದೆ.
– ಡಾ. ಸುರೇಶ ಇಟ್ನಾಳ ಜಿಲ್ಲಾಧಿಕಾರಿ
ಅಕ್ಷರ ದಾಸೋಹವು ಯೋಜನೆಯಷ್ಟೇ ಅಲ್ಲ. ಅದು ಸಾಮಾಜಿಕ ಕಳಕಳಿಯ ಕಾರ್ಯಕ್ರಮ. ಪ್ರತಿನಿತ್ಯದ ಅಡುಗೆಯನ್ನು ಸ್ವಚ್ಛತೆಯಿಂದ ಮಾಡುತ್ತಿದ್ದಾರೆಯೇ ಎಂಬುವುದರ ಬಗ್ಗೆ ಮುಖ್ಯ ಗುರುಗಳು ಪರಿಶೀಲಿಸಬೇಕು.
– ಸೋಮಶೇಖರಗೌಡ ಪಾಟೀಲ ಉಪನಿರ್ದೇಶಕ  ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ

ಶೂನ್ಯ ಫಲಿತಾಂಶ ಶಾಲೆಗೆ ನೋಟಿಸ್‌

ಕೊಪ್ಪಳ: ‘ಕೆಲವೊಂದು ಶಾಲೆಗಳಲ್ಲಿ ಶಿಕ್ಷಕರು ಸರಿಯಾಗಿ ಪಾಠಮಾಡುವುದಿಲ್ಲ ಹಾಗೂ ಅನಧಿಕೃತ ಗೈರಾಗುತ್ತಾರೆ ಎನ್ನುವ ದೂರುಗಳಿದ್ದು ಅವುಗಳು ಮರುಕಳಿಸದಂತೆ ಎಚ್ಚರವಹಿಸಬೇಕು. ಕಡಿಮೆ ಫಲಿತಾಂಶ ಬಂದ ಶಾಲೆಯ ಸುಧಾರಣೆಗೆ ಏನು ಕ್ರಮವಹಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಸಂಬಂಧಿಸಿದ ಶಾಲೆಯ ಶಿಕ್ಷಕರಿಗೆ ಪ್ರಶ್ನಿಸಿದರು. ಬಳಿಕ ಶೂನ್ಯ ಫಲಿತಾಂಶ ಪಡೆದ ಶಾಲೆಗಳಿಗೆ ನೋಟಿಸ್‌ ಜಾರಿ ಮಾಡುವಂತೆ ಅವರು ಸೂಚಿಸಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.