
ಕೊಪ್ಪಳ: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತದ ಸಾವಿರ ದಿನಗಳ ಅವಧಿಯಲ್ಲಿ ಮಿತಿ ಮೀರಿದ ಭ್ರಷ್ಟಾಚಾರ, ಆಡಳಿತ ವೈಫಲ್ಯ ಹಾಗೂ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿತ ಕಂಡಿದೆ’ ಎಂದು ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್ ಆರೋಪಿಸಿದರು.
ವಿಧಾನಪರಿಷತ್ ಸದಸ್ಯೆ ಹೇಮಲತಾ ನಾಯಕ್, ಮಾಜಿ ಸಚಿವ ಹಾಲಪ್ಪ ಆಚಾರ, ಕೊಪ್ಪಳ ಲೋಕಸಭಾ ಕ್ಷೇತ್ರದ ನಿಕಟಪೂರ್ವ ಅಭ್ಯರ್ಥಿ ಡಾ. ಬಸವರಾಜ ಕ್ಯಾವಟರ್ ಅವರು ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು ‘ರಾಜ್ಯದ ಜನ ಅತ್ಯಂತ ದುರಾಡಳಿತದ ದಿನಗಳೆಂದರೇ ಈ ಸಾವಿರ ದಿನಗಳಾಗಿವೆ’ ಎಂದು ಆರೋಪಿಸಿದ್ದಾರೆ.
‘ಅಬಕಾರಿ ಇಲಾಖೆಯಲ್ಲಿ ಪರವಾನಗಿ, ವರ್ಗಾವಣೆಗಳಿಗೆ ಲಂಚ ಬೇಡಿಕೆ ಆರೋಪದ ಕುರಿತು ಸಾಕ್ಷಿಗಳಿದ್ದರೂ ಸಚಿವ ಆರ್.ಬಿ. ತಿಮ್ಮಾಪುರ ಅವರನ್ನು ಸಮರ್ಥಿಸಿಕೊಂಡ ಸರ್ಕಾರವಿದು. ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಭಾರಿ ಪ್ರಮಾಣದ ಹಣ ವ್ಯಯವಾಗಿದ್ದು, ಅದರ ಅನುಷ್ಠಾನದಲ್ಲಿ ಪಾರದರ್ಶಕತೆ ಕೊರತೆ ಇದೆ‘ ಎಂದಿದ್ದಾರೆ.
‘ಇದೇ ವೇಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಜಯೋತ್ಸವ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತ ಘಟನೆ ಕೂಡ ಆಡಳಿತದ ನಿರ್ಲಕ್ಷ್ಯಕ್ಕೆ ಉದಾಹರಣೆ. ಆಡಳಿತ ಪಕ್ಷ ನಾಯಕರು ಈ ಆರೋಪಗಳಲ್ಲಿ ಹಲವನ್ನು ರಾಜಕೀಯ ಪ್ರೇರಿತ ಎಂದು ತಳ್ಳಿ ಹಾಕಿರುವುದು ದುರದೃಷ್ಟಕರ’ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.