ಶಿವರಾಜ ತಂಗಡಗಿ
ಕೊಪ್ಪಳ: ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಸೇರಿದಂತೆ ಅನೇಕರು ಸೋಮವಾರ ನಡೆಯಲಿರುವ ಸರ್ಕಾರಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, ಕನಿಷ್ಠ ಒಂದು ಲಕ್ಷ ಜನ ಸೇರುವ ನಿರೀಕ್ಷೆಯಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದರು.
ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ‘ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಾರ್ಯಕ್ರಮದಲ್ಲಿ ಭಾಗವಹಿಸುವರು. ಪಕ್ಷದ ರಾಜ್ಯ ಉಸ್ತುವಾರಿ ಸುರ್ಜೇವಾಲಾ ಬರುವ ನಿರೀಕ್ಷೆಯಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ವಸತಿ ನಿಲಯಗಳ ಭೂಮಿಪೂಜೆ ಜರುಗಲಿದೆ. ಈಗಾಗಲೇ ಕೊಪ್ಪಳಕ್ಕೆ ಘೋಷಣೆಯಾಗಿರುವ ಸೂಪರ್ ಸ್ಟೆಷಾಲಿಟಿ ಆಸ್ಪತ್ರೆಗೆ ಇನ್ನಷ್ಟು ಅನುದಾನ ಒದಗಿಸಬೇಕು ಮತ್ತು ಏತ ನೀರಾವರಿ ಯೋಜನೆ ಕೊಡುವಂತೆ ಮುಖ್ಯಮಂತ್ರಿಗೆ ಮನವಿ ಮಾಡಲಾಗಿದೆ’ ಎಂದು ತಿಳಿಸಿದರು.
‘ಕನಕಗಿರಿ ತಾಲ್ಲೂಕಿನಲ್ಲಿ ತೋಟಗಾರಿಕಾ ತಂತ್ರಜ್ಞಾನ ಪಾರ್ಕ್ ಆರಂಭಿಸಲು ಒಂಬತ್ತು ಕಂಪನಿಯವರು ಮುಂದೆ ಬಂದಿದ್ದು, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಿಂದ ₹10 ಕೋಟಿ ಅನುದಾನ ನೀಡಲಾಗುತ್ತಿದೆ. ರೈಸ್ ಟೆಕ್ನಾಲಜಿ ಪಾರ್ಕ್ಗೆ ಭೂಮಿ ನೀಡಿದ ರೈತರು ನ್ಯಾಯಾಲಯದ ಮೊರೆ ಹೋಗಿದ್ದು ಹೆಚ್ಚುವರಿ ಪರಿಹಾರಕ್ಕಾಗಿ ಬೇಡಿಕೆ ಇಟ್ಟಿದ್ದಾರೆ’ ಎಂದರು.
‘ಕೊಪ್ಪಳ ವಿಶ್ವವಿದ್ಯಾಲಯ ಜಿಲ್ಲಾಕೇಂದ್ರದಲ್ಲಿಯೇ ಇರಬೇಕು ಎನ್ನುವುದು ಅನೇಕರ ಬೇಡಿಕೆಯಾಗಿದ್ದು, ಈ ಕುರಿತು ಬಸವರಾಜ ರಾಯರಡ್ಡಿ ಅವರ ಜೊತೆ ಚರ್ಚಿಸುವೆ. ಅಂಜನಾದ್ರಿ ಸುತ್ತಮುತ್ತಲಿನ ಪ್ರಮುಖ ಸ್ಥಳಗಳು ಸೇರಿದಂತೆ ವಿವಿಧೆಡೆ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲು ಅರಣ್ಯ ಇಲಾಖೆಯ ಅನುಮತಿ ಅಗತ್ಯವಿದೆ. ಹೀಗಾಗಿ ಎಲ್ಲೆಡೆಯೂ ಕಾಮಗಾರಿ ನಡೆಸಲು ಆಗುತ್ತಿಲ್ಲ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.