
ಏರ್ ಇಂಡಿಯಾ ಮತ್ತು ಇಂಡಿಗೊ ವಿಮಾನಗಳು
–ರಾಯಿಟರ್ಸ್ ಚಿತ್ರಗಳು
ಕೊಪ್ಪಳ: ತಾಲ್ಲೂಕಿನ ಬಹದ್ದೂರಬಂಡಿ ಶಾಲೆಯ ಮುಖ್ಯೋಪಾಧ್ಯಾಯ ಬೀರಪ್ಪ ಅಂಡಗಿ ಅವರು ಸ್ವಂತ ಹಣದಿಂದ ತಮ್ಮ ಶಾಲೆಯ 24 ವಿದ್ಯಾರ್ಥಿಗಳನ್ನು ವಿಮಾನದಲ್ಲಿ ಶೈಕ್ಷಣಿಕ ಪ್ರವಾಸಕ್ಕೆ ಕರೆದುಕೊಂಡು ಹೋಗಲು ಸಿದ್ಧತೆ ಮಾಡಿಕೊಂಡಿದ್ದಾರೆ.
ವಿಮಾನದಲ್ಲಿ ಪ್ರವಾಸಕ್ಕೆ ಕರೆದುಕೊಂಡು ಹೋಗುವ ವಿದ್ಯಾರ್ಥಿಗಳ ಆಯ್ಕೆ ಪಾರದರ್ಶಕವಾಗಿ ಇರಬೇಕು ಎನ್ನುವ ಕಾರಣಕ್ಕೆ ಅವರು ಕಳೆದ ಏಪ್ರಿಲ್ನಲ್ಲಿ ಬೇರೆ ಬೇರೆ ಶಾಲೆಗಳ ಶಿಕ್ಷಕರನ್ನು ನೇಮಕ ಮಾಡಿ ಅವರಿಂದಲೇ ಪ್ರಶ್ನೆಪತ್ರಿಕೆ ಸಿದ್ಧಪಡಿಸಿ ಪ್ರವಾಸಕ್ಕೆ ತೆರಳುವ ವಿದ್ಯಾರ್ಥಿಗಳ ಆಯ್ಕೆಗೆ ಪರೀಕ್ಷೆ ನಡೆಸಿದ್ದರು.
ಪರೀಕ್ಷೆಗೆ 220 ವಿದ್ಯಾರ್ಥಿಗಳು ಹಾಜರಾಗಿದ್ದು, 5ರಿಂದ 8ನೇ ತರಗತಿ ತನಕ ಪ್ರತಿ ತರಗತಿಯಿಂದ ತಲಾ ಆರು ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಪ್ರವಾಸಕ್ಕೆ ಕರೆದುಕೊಂಡು ಹೋಗಲಾಗುತ್ತಿದೆ. ಬಳ್ಳಾರಿಯ ಜಿಂದಾಲ್ ವಿಮಾನ ನಿಲ್ದಾಣದಿಂದ ಡಿ. 26ರಂದು ಬೆಂಗಳೂರಿಗೆ ಮಕ್ಕಳು ತೆರಳುವರು. ವಿದ್ಯಾರ್ಥಿಗಳಿಂದ ಯಾವುದೇ ಹಣ ಸಂಗ್ರಹ ಮಾಡದೆ ಮುಖ್ಯೋಪಧ್ಯಾಯರೇ ವಿಮಾನ ಪ್ರಯಾಣದ ವೆಚ್ಚ, ಊಟ ಹಾಗೂ ವಸತಿ ಸೌಲಭ್ಯವನ್ನು ಭರಿಸಲಿದ್ದಾರೆ.
‘ವಿದ್ಯಾರ್ಥಿಗಳ ಪ್ರಯಾಣ ಹಾಗೂ ಅವರಿಗಾಗಿ ಮಾಡುವ ವೆಚ್ಚ ಸೇರಿ ಒಟ್ಟು ₹4 ಲಕ್ಷ ಆಗಲಿದೆ.
ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವನೆ ಬೆಳೆಯಬೇಕು, ಸರ್ಕಾರಿ ಶಾಲೆಯ ಮಕ್ಕಳಿಗೂ ವಿಮಾನಯಾನದ ಅನುಭವ ದೊರೆಯಬೇಕು ಎನ್ನುವ ಕಾರಣಕ್ಕಾಗಿ ಸ್ವಂತ ಖರ್ಚಿನಲ್ಲಿ ಪ್ರಯಾಣಕ್ಕೆ ಕರೆದುಕೊಂಡು ಹೋಗುತ್ತಿದ್ದೇನೆ’ ಎಂದು ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರೂ ಆದ ಬೀರಪ್ಪ ಅಂಡಗಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.