
ಕೊಪ್ಪಳ: ಇಲ್ಲಿನ ನಗರ, ಭಾಗ್ಯನಗರ ಹಾಗೂ 20 ಭಾದಿತ ಹಳ್ಳಿಗಳ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ನಡೆಸುತ್ತಿರುವ ಮಾಲಿನ್ಯಕಾರಕ ಕಾರ್ಖಾನೆಗಳ ವಿರೋಧಿ ಹೋರಾಟದ 78ನೇ ದಿನಕ್ಕೆ ಬೆಂಬಲ ನೀಡಿದ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ‘ಜ 22ರಂದು ನಡೆಯುವ ವಿಶೇಷ ಅಧಿವೇಶನದಲ್ಲಿ ಪ್ರಸ್ತಾಪ ಮಾಡಿ ಸರ್ಕಾರವನ್ನು ಎಚ್ಚರಿಸಲಾಗುವುದು’ ಎಂದು ತಿಳಿಸಿದರು.
‘ಬಸಾಪುರ ಕೆರೆ ಸಮುದಾಯದ ಆಸ್ತಿ ಅದನ್ನು ಯಾವುದೇ ಸರ್ಕಾರ ಕಟ್ಟಿಲ್ಲ, ಸರ್ಕಾರ ಅದನ್ನು ಮಾರಲು ಬರುವುದಿಲ್ಲ ಕೂಡಲೇ ಅದನ್ನು ತೆರವುಗೊಳಿಸಬೇಕು. ಈ ಕುರಿತು ಅಧಿವೇಶನದ ನಂತರವೂ ಹೋರಾಟ ಮುಂದುವರಿಸಲಾಗುವುದು. ಜನರ ಆರೋಗ್ಯ ಬಹಳ ಮುಖ್ಯ. ಮುಖಮಂತ್ರಿ ಹಾಗೂ ಉದ್ಯಮ ಸಚಿವರು ಕೇಂದ್ರದತ್ತ ಬೊಟ್ಟು ಮಾಡುತ್ತಿರುವುದು ಸರಿಯಲ್ಲ. ಕೇಂದ್ರದಲ್ಲಿ ಏನಾದರೂ ಇದ್ದರೂ ಅದನ್ನು ನಾವೂ ಗಮನಿಸುತ್ತೇವೆ, ಆದರೆ ಈ ಹೋರಾಟಕ್ಕೆ ನಮ್ಮ ಬೆಂಬಲ ಇದೆ. ಈಗಾಗಲೇ ಹೋರಾಟವನ್ನು ಮುಂದುವರಿಸಿದ್ದು, ಮುಂದಿನ ದಿನಗಳಲ್ಲಿ ತೀವ್ರಗೊಳಿಸುವ ಕೆಲಸ ಮಾಡುತ್ತೇವೆ’ ಎಂದು ಹೇಳಿದರು.
ಬಲ್ಡೋಟ, ಕಿರ್ಲೋಸ್ಕರ್, ಕಲ್ಯಾಣಿ ಸ್ಟೀಲ್, ಮುಕುಂದ ಸುಮಿ, ಎಕ್ಸ್ ಇಂಡಿಯಾ ಸೇರಿದಂತೆ ವಿವಿಧ ಕಾರ್ಖಾನೆಗಳ ವಿಸ್ತರಣೆ ವಿರೋಧಿಸಿ ಧರಣಿ ನಡೆಯುತ್ತಿದೆ.
ಇಲ್ಲಿನ ನಗರಸಭೆ ಮುಂದೆ ಜಿಲ್ಲಾ ಬಚಾವೊ ಆಂದೋಲನ ಸಮಿತಿ ಹಾಗೂ ಪರಿಸರ ಹಿತರಕ್ಷಣಾ ವೇದಿಕೆ ಇದರ ಜಂಟಿ ವೇದಿಕೆ ನೇತೃತ್ವದಲ್ಲಿ ನಡೆಯುತ್ತಿರುವ ಅನಿರ್ದಿಷ್ಟ ಧರಣಿಯಲ್ಲಿ ಸಂಚಾಲಕ ಅಲ್ಲಮಪ್ರಭು ಬೆಟ್ಟದೂರು, ನಿವೃತ್ತ ಪ್ರಾಚಾರ್ಯ ಬಿ.ಜಿ. ಕರಿಗಾರ, ಸಂಚಾಲಕರಾದ ಮಲ್ಲಿಕಾರ್ಜುನ ಬಿ. ಗೋನಾಳ, ಎಸ್.ಬಿ. ರಾಜೂರು, ಶಂಭುಲಿಂಗಪ್ಪ ಹರಗೇರಿ, ಜಿ. ಬಿ. ಪಾಟೀಲ್, ಮಂಜುನಾಥ ಜಿ. ಗೊಂಡಬಾಳ, ರಾಜೇಶ ಸಸಿಮಠ, ಬಿಜೆಪಿ ಮುಖಂಡರಾದ ಡಾ. ಬಸವರಾಜ ಕ್ಯಾವಟರ್, ಗಣೇಶ ಹೊರತಟ್ನಾಳ, ಕನಕಪ್ಪ ಚಲುವಾದಿ, ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ಗ್ಯಾನೇಶ, ಕನಕಮೂರ್ತಿ ಚಲುವಾದಿ, ರವಿ ಕಾಂತನವರ, ಎ. ಎಂ. ಮದರಿ, ಕಾಶಪ್ಪ ಚಲುವಾದಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.