ಕೊಪ್ಪಳ: ‘ಅನ್ನದಾನ, ರಕ್ತದಾನ, ನೇತ್ರದಾನ ಹಾಗೂ ಅಕ್ಷರಜ್ಞಾನದಂತೆ ಮತದಾನ ಕೂಡ ಅತ್ಯಂತ ಶ್ರೇಷ್ಠ ಮತ್ತು ಮಹತ್ವದ ದಾನವಾಗಿದೆ’ ಎಂದು ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್ ಹೇಳಿದರು.
ನಗರದ 18ನೇ ವಾರ್ಡ್ನಲ್ಲಿ ಕಾಂಗ್ರೆಸ್ ವತಿಯಿಂದ ಶುಕ್ರವಾರ ನಡೆದ ಮತ ಕಳವು ಕುರಿತ ಸಹಿ ಸಂಗ್ರಹ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ,‘ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರ ಮತ ಕಳವು ಮಾಡಿ ಮೂರು ಬಾರಿ ಅಧಿಕಾರಕ್ಕೆ ಬಂದಿದೆ’ ಎಂದು ಆರೋಪಿಸಿದರು.
‘ಈ ಕಾರಣಕ್ಕಾಗಿ ನಮ್ಮ ಪಕ್ಷದ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ದೇಶದ ಜನರಿಗೆ ಜಾಗೃತಿ ಮೂಡಿಸಲು ಮತ ಕಳವಿನ ವಿರುದ್ಧ ಸಾರ್ವಜನಿಕರಿಂದ ಸಹಿ ಸಂಗ್ರಹ ಮಾಡಲಾಗುತ್ತಿದೆ. ಪ್ರತಿ ವಾರ್ಡ್ಗಳಲ್ಲಿ ಇದರ ಬಗ್ಗೆ ಜಾಗೃತಿ ನಡೆಸುವ ಮೂಲಕ ಜನರಿಗೆ ಎಚ್ಚರಿಕೆ ವಹಿಸುವಂತೆ ತಿಳಿಹೇಳಲಾಗುತ್ತಿದೆ. ಮತಗಳ್ಳತನ ಮಾಡುವ ಪಕ್ಷಕ್ಕೆ ತಕ್ಕ ಪಾಠ ಕಲಿಸಬೇಕು. ದೇಶದ ಪ್ರತಿಯೊಬ್ಬರೂ ಇದರ ಬಗ್ಗೆ ಕಾಳಜಿ ವಹಿಸಬೇಕು’ ಎಂದರು.
ಕಾಂಗ್ರೆಸ್ ಯುವ ನಾಯಕ ಕೆ.ಸೋಮಶೇಖರ ಹಿಟ್ನಾಳ, ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಮೈನುದ್ದೀನ್ ಮುಲ್ಲಾ ಕುಷ್ಟಗಿ, ಪಕ್ಷದ ಮುಖಂಡರಾದ ಮಲ್ಲಿಕಾರ್ಜುನ ಪೂಜಾರ, ಗವಿಸಿದ್ದನಗೌಡ, ಜಾಕಿರ್ ಹುಸೇನ್ ಕಿಲ್ಲೇದಾರ್, ಜ್ಯೋತಿ ಗೊಂಡಬಾಳ, ಮೊಹಮ್ಮದ್ ಜಿಲಾನ್ ಕಿಲ್ಲೇದಾರ್, ಸೈಯದ್ ನಾಸಿರುದ್ದೀನ್ ಹುಸೇನಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.