ADVERTISEMENT

ಕೊಪ್ಪಳ: ಬಿಜೆಪಿ ಟಿಕೆಟ್‌ಗೆ ಜಿದ್ದಾಜಿದ್ದಿ

​ಪ್ರಜಾವಾಣಿ ವಾರ್ತೆ
Published 31 ಮಾರ್ಚ್ 2023, 6:45 IST
Last Updated 31 ಮಾರ್ಚ್ 2023, 6:45 IST
ಕೊಪ್ಪಳ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ತಮ್ಮ ಸರತಿಗೆ ಕಾದಿರುವ ಕಾರ್ಯಕರ್ತರು
ಕೊಪ್ಪಳ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ತಮ್ಮ ಸರತಿಗೆ ಕಾದಿರುವ ಕಾರ್ಯಕರ್ತರು   

ಕೊಪ್ಪಳ: ಜಿಲ್ಲೆಯ ಐದೂ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್‌ಗಾಗಿ ಭಾರಿ ಜಿದ್ದಾಜಿದ್ದಿ ಏರ್ಪಟ್ಟಿದ್ದು, ಪಕ್ಷದ ಪ್ರಮುಖರ ಎದುರು ಶಕ್ತಿ ತೋರಿಸಲು ಆಕಾಂಕ್ಷಿಗಳು ಕಾಯುತ್ತಿದ್ದಾರೆ.

ಇಲ್ಲಿನ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಶುಕ್ರವಾರ ಪ್ರಮುಖರ ಸಭೆ ಆರಂಭವಾಗಿದ್ದು, ಕೇಂದ್ರ ಸಚಿವ ಭಗವಂತ್ ಖೂಬಾ, ಸಂಸದ ಸಂಗಣ್ಣ ಕರಡಿ ಸೇರಿದಂತೆ ಹಲವರು ಭಾಗವಹಿಸಿದ್ದಾರೆ. ವಿವಿಧ ಪ್ರಕೋಷ್ಠಗಳ ಮುಖ್ಯಸ್ಥರು, ಆಕಾಂಕ್ಷಿಗಳು, ಪೇಜ್‌ ಪ್ರಮುಖರು, ಶಕ್ತಿಕೇಂದ್ರದ ಪ್ರಮುಖರು, ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿ, ಜಿಲ್ಲೆಯ ಪದಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರು, ಹಾಲಿ ಶಾಸಕರು ಹಾಗೂ ಮಾಜಿ ಶಾಸಕರು ಸಭೆಯಲ್ಲಿ ಭಾಗವಹಿಸಿದ್ದಾರೆ.

ಕೊಪ್ಪಳ ಕ್ಷೇತ್ರದಲ್ಲಿ ಬಿಜೆಪಿ ಮುಖಂಡ ಸಿ.ವಿ. ಚಂದ್ರಶೇಖರ್‌ ಟಿಕೆಟ್‌ ಆಕಾಂಕ್ಷಿಯಾಗಿದ್ದು, ಈಗಾಗಲೇ ಕ್ಷೇತ್ರ ವ್ಯಾಪ್ತಿಯಲ್ಲಿ ಬಿರುಸಿನ ಪ್ರಚಾರ ನಡೆಸಿದ್ದಾರೆ. 2018ರ ಚುನಾವಣೆಯಲ್ಲಿ ಚಂದ್ರಶೇಖರ್‌ ಅವರಿಗೆ ಟಿಕೆಟ್‌ ಘೋಷಿಸಿ ಅಂತಿಮವಾಗಿ ಸಂಸದ ಸಂಗಣ್ಣ ಕರಡಿ ಪುತ್ರ ಅಮರೇಶ ಕರಡಿಗೆ ಬಿ ಫಾರ್ಮ್‌ ನೀಡಲಾಗಿತ್ತು. ಈ ಬಾರಿ ಸಂಗಣ್ಣ ಕರಡಿ ಸ್ಪರ್ಧೆ ಮಾಡುತ್ತಾರೆ ಅಥವಾ ಅವರ ಮಗ ಅಮರೇಶ ಕರಡಿಗೆ ಟಿಕೆಟ್ ನೀಡಿ ಎಂದು ಕೇಳುತ್ತಿದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ.

ADVERTISEMENT

ಗಂಗಾವತಿ ಕ್ಷೇತ್ರದಲ್ಲಿ ಪ್ರಸ್ತುತ ಬಿಜೆಪಿಯ ಪರಣ್ಣ ಮುನವಳ್ಳಿ ಶಾಸಕರಿದ್ದಾರೆ. ಶಿಕ್ಷಣ ಕೇಂದ್ರಗಳ ಮೂಲಕ ಹೆಸರು ಮಾಡಿರುವ ನೆಕ್ಕಂಟಿ ಸೂರಿಬಾಬು ಅಲ್ಲಿ ಆಕಾಂಕ್ಷಿಯಾಗಿದ್ದಾರೆ.

ಕುಷ್ಟಗಿ ಕ್ಷೇತ್ರದ ಮಾಜಿ ಶಾಸಕ ದೊಡ್ಡನಗೌಡ ಎಚ್‌. ಪಾಟೀಲ ಆಕಾಂಕ್ಷಿಯಾಗಿದ್ದು, ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಬಸವರಾಜ ಹಳ್ಳೂರ ಕೂಡ ಮುಖ್ಯಮಂತ್ರಿ, ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಬಿ.ಎಲ್‌. ಸಂತೋಷ ಹೀಗೆ ಪ್ರಮುಖರನ್ನು ಭೇಟಿಯಾಗಿ ಟಿಕೆಟ್ ಪಡೆಯುವ ನಿಟ್ಟಿನಲ್ಲಿ ಪ್ರಯತ್ನ ಮುಂದುವರಿಸಿದ್ದಾರೆ.

ಯಲಬುರ್ಗಾ ಕ್ಷೇತ್ರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಹಾಲಪ್ಪ ಆಚಾರ್‌ ಜೊತೆಗೆ ಮಾಜಿ ಶಾಸಕ ಈಶಣ್ಣ ಗುಳಗಣ್ಣನವರ ಅವರ ಪುತ್ರ ನವೀನ್ ಗುಳಗಣ್ಣನವರ ಮತ್ತು ಕೃಷಿ ಇಲಾಖೆಯ ಮಾಜಿ ಅಧಿಕಾರಿ ಶರಣಪ್ಪ ಗುಂಗಾಡಿ ಟಿಕೆಟ್‌ಗೆ ಪೈಪೋಟಿ ನಡೆಸುತ್ತಿದ್ದಾರೆ.

ಜಿಲ್ಲೆಯ ಏಕೈಕ ಮೀಸಲು ಕ್ಷೇತ್ರ ಕನಕಗಿರಿಯಲ್ಲಿ ಬಿಜೆಪಿಯ ಬಸವರಾಜ ದಢೇಸೂಗೂರು ಟಿಕೆಟ್‌ ಪಡೆಯಲು ಕಸರತ್ತು ನಡೆಸಿದ್ದು, ಗಾಯಿತ್ರಿ ತಿಮ್ಮಾರೆಡ್ಡಿ, ಈಶಪ್ಪ ಹಿರೇಮನಿ, ಲಂಕೇಶ ಗುಳದಾಳ, ಪಿ.ವಿ.ರಾಜಗೋಪಾಲ, ಡಿ.ಎಂ. ಧರ್ಮಣ್ಣ, ಮಿಥಲೇಶ್ವರ, ಪುಷ್ಪಾಂಜಲಿ ಗುನ್ನಾಳ ಟಿಕೆಟ್‌ ಸೇರಿದಂತೆ ಹಲವರು ಆಕಾಂಕ್ಷಿಗಳಾಗಿದ್ದಾರೆ.

ಈ ಸಭೆಯಲ್ಲಿಗೌಪ್ಯ ಮತದಾನದ ಮೂಲಕ ಆಕಾಂಕ್ಷಿಗಳ ಬಗ್ಗೆ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ.

ಮತದಾರರ ಚೀಟಿಯಲ್ಲಿ ಜಿಲ್ಲೆ, ಕ್ಷೇತ್ರ ಹಾಗೂ ಸಂಭಾವ್ಯ ಅಭ್ಯರ್ಥಿಗಳ ಹೆಸರು ಸೂಚಿಸಲು ಅವಕಾಶ ಕಲ್ಪಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.