ADVERTISEMENT

ಕುಷ್ಟಗಿ | ಅಭಿವೃದ್ಧಿ ನಿರ್ಲಕ್ಷಿಸಿದರೆ ನಿರ್ದಾಕ್ಷಿಣ್ಯ ಕ್ರಮ

​ಪ್ರಜಾವಾಣಿ ವಾರ್ತೆ
Published 6 ಜನವರಿ 2026, 3:46 IST
Last Updated 6 ಜನವರಿ 2026, 3:46 IST
ಕುಷ್ಟಗಿಯಲ್ಲಿ ಶನಿವಾರ ಶಾಸಕ ದೊಡ್ಡನಗೌಡ ಪಾಟೀಲ ಅಧ್ಯಕ್ಷತೆಯಲ್ಲಿ ಕೆಡಿಪಿ ಪ್ರಗತಿ ಪರಿಶೀಲನೆ ಸಭೆ ನಡೆಯಿತು
ಕುಷ್ಟಗಿಯಲ್ಲಿ ಶನಿವಾರ ಶಾಸಕ ದೊಡ್ಡನಗೌಡ ಪಾಟೀಲ ಅಧ್ಯಕ್ಷತೆಯಲ್ಲಿ ಕೆಡಿಪಿ ಪ್ರಗತಿ ಪರಿಶೀಲನೆ ಸಭೆ ನಡೆಯಿತು   

ಕುಷ್ಟಗಿ: ಕ್ಷೇತ್ರದ ಅಭಿವೃದ್ಧಿಗೆ ಅಧಿಕಾರಿಗಳು ಸ್ಪಂದಿಸಬೇಕು. ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಶಿಫಾರಸು ಮಾಡಲಾಗುವುದು’ ಎಂದು ಶಾಸಕ ದೊಡ್ಡನಗೌಡ ಪಾಟೀಲ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಶನಿವಾರ ಇಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಕೆಲ ಪದನಿಮಿತ್ತ ಮತ್ತು ನಾಮನಿರ್ದೇಶಿತ ಸದಸ್ಯರು, ಪ್ರತಿ ಸಭೆಯಲ್ಲೂ ಮೂಲ ಸಮಸ್ಯೆಗಳಾದ ಕುಡಿಯುವ ನೀರು, ಹದಗೆಟ್ಟ ರಸ್ತೆಗಳ ಬಗ್ಗೆ ಪದೇ ಪದೇ ಪ್ರಸ್ತಾಪವಾಗುತ್ತದೆ. ಆದರೆ ಪರಿಹಾರ ಮಾತ್ರ ಇಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.ಇದಕ್ಕೆ ದನಿಗೂಡಿಸಿದ ಶಾಸಕ ಪಾಟೀಲ, ನೆಪ ಹೇಳುತ್ತ ಹೋದರೆ ಜನರ ಸಮಸ್ಯೆಗೆ ಪರಿಹಾರ ಸಿಗಲ್ಲ ಎಂದರು. 

ಜೆಜೆಎಂ ಶುದ್ಧ ಕುಡಿಯುವ ನೀರು ಪೂರೈಕೆ ಯೋಜನೆ ಕೇವಲ ಹೆಸರಿಗೆ ಮಾತ್ರ ಎನ್ನುವಂತಾಗಿದೆ. ಬಹುತೇಕ ಹಳ್ಳಿಗಳಲ್ಲಿನ ನಲ್ಲಿಗಳಿಗೆ ನೀರು ಬರುವುದಿಲ್ಲ. ನಲ್ಲಿಗಳು ಕಿತ್ತು ಹೋಗಿವೆ. ಎಂದು ಸದಸ್ಯರು ಪ್ರಶ್ನಿಸಿದರು. ಕೊಳವೆಗಳು ಒಡೆದ ಕಾರಣ ವ್ಯತ್ಯಯವಾಗಿತ್ತು ಎಂದು ಆರ್‌ಡಬ್ಲೂಎಸ್‌ ಉಪ ವಿಭಾಗದ ಎಂಜಿನಿಯರ್‌ ಹೇಳಿದ್ದಕ್ಕೆ ಆಕ್ಷೇಪ ವ್ಯಕ್ತವಾಯಿತು. 

ADVERTISEMENT

ರಸ್ತೆಗಳನ್ನು ಸುಸ್ಥಿತಿಯಲ್ಲಿಡಬೇಕು, ಮಳೆಗಾಲದಲ್ಲಿ ಹಾಳಾಗಿರುವ ರಸ್ತೆಗಳ ಸ್ಥಿತಿ ಇನ್ನೂ ಸುಧಾರಿಸಿಲ್ಲ ಈ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳಿ, ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಸಮರ್ಪಕವಾಗಿ ವಿದ್ಯುತ್‌ ಪೂರೈಸಬೇಕು. ಬೇಸಿಗೆ ಸಂದರ್ಭದಲ್ಲಿ ತೊಂದರೆಯಾಗದಂತೆ ಅಗತ್ಯ ಮುಂಜಾಗ್ರತೆ ವಹಿಸುವಂತೆ ಜೆಸ್ಕಾಂ ಅಧಿಕಾರಿಗಳಿಗೆ ಶಾಸಕ ಸೂಚಿಸಿದರು.

ವಿವಿಧ ಇಲಾಖೆಗಳ ವಿಷಯಗಳಿಗೆ ಸಂಬಂಧಿಸಿದಂತೆ ಸಭೆಯಲ್ಲಿ ಪ್ರಗತಿ ಪರಿಶೀಲಿಸಲಾಯಿತು.

ಸದಸ್ಯರಾದ ಶೇಖರಗೌಡ ಮಾಲೀಪಾಟೀಲ, ಗೋಪಾಲರಾವ್ ಕುಲಕರ್ಣಿ, ಯಲ್ಲಪ್ಪ ಬಾಗಲಿ, ಸಿದ್ದನಗೌಡ ಪಾಟೀಲ, ಹನುಮಗೌಡ, ಅನ್ವರ್ ಅತ್ತಾರ. ತಹಶೀಲ್ದಾರ್ ಅಶೋಕ ಶಿಗ್ಗಾಂವಿ, ಕಾರ್ಯನಿರ್ವಹಣಾಧಿಕಾರಿ ಪಂಪಾಪತಿ ಹಿರೇಮಠ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

‘ಪ್ರತಿ ಮೂರು ತಿಂಗಳಿಗೆ ಒಮ್ಮೆ ನಡೆಯುವ ಕೆಡಿಪಿ ಸಭೆ ಕಾಟಾಚಾರಕ್ಕೆ ಎನ್ನುವಂತಾಗಿದೆ. ಯಾವ ವಿಷಯದ ಬಗ್ಗೆಯೂ ಗಂಭೀರತೆ ಇರುವುದಿಲ್ಲ. ಶಾಸಕರು ಎಚ್ಚರಿಕೆ ನೀಡಿದರೂ ಅದು ಸಭೆಗೆ ಮಾತ್ರ ಸೀಮಿತವಾಗುತ್ತದೆ ಹೊರತು ಅಧಿಕಾರಿಗಳಿಗೆ ಹೆದರಿಕೆ ಇಲ್ಲದಂತಾಗಿದೆ. ತಾಲ್ಲೂಕಿನಲ್ಲಿ ಬಹಳಷ್ಟು ಸಮಸ್ಯೆಗಳಿದ್ದರೂ ಅಧಿಕಾರಿಗಳು ಏನಾದರೊಂದು ಸಬೂಬು ಹೇಳಿ ಹೋಗುತ್ತಾರೆ. ಅನುಪಾಲನಾ ವರದಿಯೂ ಇರುವುದಿಲ್ಲ’ ಎಂದು ಸಭೆ ನಂತರ ಸದಸ್ಯರೊಬ್ಬರು ‘ಪ್ರಜಾವಾಣಿ’ ಬಳಿ ಬೇಸರ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.