ADVERTISEMENT

ಕೊಪ್ಪಳ | ಕಿರಾಣಿ ಅಂಗಡಿಗಳಲ್ಲಿಯೂ ಮದ್ಯ ಮಾರಾಟ

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2026, 5:49 IST
Last Updated 8 ಫೆಬ್ರುವರಿ 2026, 5:49 IST
ಕೊಪ್ಪಳದಲ್ಲಿ ಶನಿವಾರ ನಡೆದ ಸಭೆಯಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಮಾತನಾಡಿದರು
ಕೊಪ್ಪಳದಲ್ಲಿ ಶನಿವಾರ ನಡೆದ ಸಭೆಯಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಮಾತನಾಡಿದರು   

ಕೊಪ್ಪಳ: ಯಥೇಚ್ಚವಾಗಿ ದೊರೆಯುವ ಮದ್ಯ ಮತ್ತು ಮಾದಕ ವಸ್ತುಗಳು ಮಹಿಳೆಯರ ಮೇಲಿನ ಹಲ್ಲೆ, ಅತ್ಯಾಚಾರದಂತಹ ದೌರ್ಜನ್ಯಕ್ಕೆ ಪ್ರಮುಖ ಕಾರಣವಾಗುತ್ತಿವೆ. ಜಿಲ್ಲೆಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಕಿರಾಣಿ ಅಂಗಡಿಗಳಲ್ಲಿಯೂ ಮದ್ಯ ಸಿಗುತ್ತಿದ್ದು ತಪಾಸಣೆ ನಡೆಸಿ ವರದಿ ನೀಡಬೇಕು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಸೂಚಿಸಿದ್ದಾರೆ.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ನಡೆದ ಮಹಿಳಾ ಸ್ಪಂದನಾ ಕಾರ್ಯಕ್ರಮ ಮತ್ತು ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು ‘ಮದ್ಯ, ಗಾಂಜಾ, ಡ್ರಗ್ಸ್‌ನಂಥ ಮಾದಕ ವಸ್ತುಗಳು ಯಾವುದೇ ವ್ಯಕ್ತಿಯನ್ನು ನಶೆಯಲ್ಲಿ ಮುಳುಗಿಸಿ, ನೈತಿಕ ಪ್ರಜ್ಞೆ ಕಳೆದುಕೊಳ್ಳುವಂತೆ ಮಾಡುತ್ತವೆ. ಇಂತಹ ಸಂದರ್ಭಗಳಲ್ಲಿ ನಶೆಯಲ್ಲಿ ಮಹಿಳೆಯರ ಮೇಲೆ ಹಲ್ಲೆ, ಅತ್ಯಾಚಾರ, ಕೊಲೆಯಂತಹ ದೌರ್ಜನ್ಯವೆಸಗುತ್ತಾರೆ. ಜಿಲ್ಲೆಯಲ್ಲಿ ಇಂಥ ಚಟುವಟಿಕೆಗೆ ಕಡಿವಾಣ ಹಾಕಬೇಕು’ ಎಂದು ಸೂಚಿಸಿದರು. 

‘ಗ್ರಾಮೀಣ ಪ್ರದೇಶಗಳಲ್ಲಿ ಕಿರಾಣಿ, ಪಾನ್ ಮಸಾಲಾ ಅಂಗಡಿಗಳಲ್ಲಿಯೂ ಮದ್ಯ ದೊರೆಯುತ್ತಿದೆ.  ಈ ಬಗ್ಗೆ ಜಿಲ್ಲಾಧಿಕಾರಿಗಳು ಹಾಗೂ ಅಬಕಾರಿ ಇಲಾಖೆ ಕ್ರಮ ತೆಗೆದುಕೊಂಡು ವರದಿ ಸಲ್ಲಿಸಬೇಕು. ಮಹಿಳೆಯರ ಮೇಲೆ ಕೆಲಸದ ಸ್ಥಳದಲ್ಲಿ ನಡೆಯುವ ಲೈಂಗಿಕ ಕಿರುಕುಳ, ಮಾನಸಿಕ ಒತ್ತಡಗಳನ್ನು ತಡೆಯಲು ಜಿಲ್ಲೆಯ ಎಲ್ಲ ಪೊಲೀಸ್ ಠಾಣೆಗಳಲ್ಲಿ, ಮಹಿಳೆಯರು ಅಥವಾ ಪುರುಷರು ಎಂದು ನೋಡದೆ ಹತ್ತಕ್ಕಿಂತ ಹೆಚ್ಚು ಉದ್ಯೋಗಿಗಳು ಕಾರ್ಯನಿರ್ವಹಿಸುವ ಎಲ್ಲ ಸರ್ಕಾರಿ, ಖಾಸಗಿ ಸಂಸ್ಥೆ, ಕಾರ್ಖಾನೆಗಳಲ್ಲಿ ಕಡ್ಡಾಯವಾಗಿ ಆಂತರಿಕ ದೂರು ನಿವಾರಣಾ ಸಮಿತಿ ರಚಿಸಬೇಕು. ಸಮಿತಿ ಇರುವ ಬಗ್ಗೆ ಪ್ರತಿ ಕಚೇರಿಗಳಲ್ಲಿ ಪ್ರದರ್ಶನ ಫಲಕ ಅಳವಡಿಸಬೇಕು. ಈ ಬಗ್ಗೆ ಕ್ರಮ ವಹಿಸದಿದ್ದರೆ ಮುಂದಿನ ದಿನಗಳಲ್ಲಿ ₹5 ಲಕ್ಷದವರೆಗೆ ದಂಡ ವಿಧಿಸುವ ಸಾಧ್ಯತೆ ಇರುತ್ತದೆ’ ಎಂದು ಎಚ್ಚರಿಕೆ ನೀಡಿದರು.

ADVERTISEMENT

ಸಭೆಯ ನಂತರ ಅವರು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಏಕ ಪೋಷಕತ್ವ ಹೊಂದಿದ ಮಹಿಳೆಯರು, ಮಕ್ಕಳಿಗೆ ಪ್ರಾಯೋಜಕತ್ವ ಯೋಜನೆಯಡಿ ಮಾಸಿಕ ₹6000 ಒದಗಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್.ಅರಸಿದ್ದಿ, ಡಿಎಫ್‌ಒ ನಿರ್ಮಲಾ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೇಮಂತಕುಮಾರ್, ಡಿವೈಎಸ್‌ಪಿ ಮುತ್ತಣ್ಣ ಸವರಗೋಳ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.

ಆಂತರಿಕ ದೂರು ಸಮಿತಿ ರಚಿಸಲು ಸೂಚನೆ ಪ್ರತಿ ಮೂರು ತಿಂಗಳಿಗೊಮ್ಮೆ ವರದಿ ನೀಡಲು ನಿರ್ದೇಶನ ಮಹಿಳೆಯರ ಆರೋಗ್ಯದ ಮೇಲೆ ನಿಗಾ ವಹಿಸಲು ಕ್ರಮಕ್ಕೆ ಸಲಹೆ

ಪರಿಹಾರ ಕ್ರಮದ ವರದಿ ನೀಡಲು ನಿರ್ದೇಶನ ಕೊಪ್ಪಳ: ಜಿಲ್ಲೆಯಲ್ಲಿ ಮೂರು ದಿನಗಳ ಕಾಲ ವಿವಿಧೆಡೆ ಭೇಟಿ ನೀಡಿ ಸಮಸ್ಯೆಗಳನ್ನು ಆಲಿಸಿದ ಡಾ. ನಾಗಲಕ್ಷ್ಮೀ ಚೌಧರಿ ಸಮಸ್ಯೆಗೆ ಕಂಡುಕೊಂಡ ಪರಿಹಾರದ ವರದಿ ನೀಡಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ‘ಮಹಿಳೆಯರಿಗೆ ಸಂಬಂಧಿಸಿದ ಯಾವುದೇ ಸಮಸ್ಯೆಗಳನ್ನು ಪರಿಹರಿಸಲು ರಾಜ್ಯ ಮಹಿಳಾ ಆಯೋಗ ಸಿದ್ದವಾಗಿದ್ದು ಮಹಿಳೆಯರ ರಕ್ಷಣೆಗೆ ಹಾಗೂ ಮಹಿಳೆಯರಿಗೆ ಕಾನೂನಾತ್ಮಕ ನೆರವು ನೀಡಲು ಬದ್ಧವಾಗಿರುತ್ತದೆ’ ಎಂದರು. ‘ಜಿಲ್ಲೆಯ ಕೆಲವು ಬಾಲಕರ ವಸತಿನಿಲಯಗಳಲ್ಲಿ ಮೂಲ ಸೌಕರ್ಯಗಳ ಕೊರತೆಯಿದ್ದು ಎಲ್ಲಾ  ಹಾಸ್ಟೆಲ್‌ಗಳಿಗೆ  ಭೇಟಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.