ಕೊಪ್ಪಳ: ಲೋಕಸಭಾ ಚುನಾವಣೆಗೆ ಏಪ್ರಿಲ್ 12ರಿಂದ 19ರ ವರೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆಯಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ನಲಿನ್ ಅತುಲ್ ಹೇಳಿದ್ದಾರೆ.
‘ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸಾರ್ವತ್ರಿಕ ರಜಾ ದಿನಗಳನ್ನು ಹೊರತುಪಡಿಸಿ ನಿಗದಿತ ಅವಧಿಯಲ್ಲಿ ಬೆಳಿಗ್ಗೆ 11ರಿಂದ ಮಧ್ಯಾಹ್ನ 3 ಗಂಟೆ ಅವಧಿಯೊಳಗೆ ನಾಮಪತ್ರ ಸಲ್ಲಿಸಬಹುದು. ಏ. 20ರಂದು ಬೆಳಿಗ್ಗೆ 11ಕ್ಕೆ ನಾಮಪತ್ರಗಳ ಪರಿಶೀಲನೆ, 22ರಂದು ಮಧ್ಯಾಹ್ನ 3ರ ತನಕ ನಾಮಪತ್ರ ವಾಪಸ್ ಪಡೆಯಲು ಅವಕಾಶವಿದೆ. ನಂತರ ಸ್ಪರ್ಧೆಯಲ್ಲಿರುವ ಅಭ್ಯರ್ಥಿಗಳಿಗೆ ಚುನಾವಣಾ ಚಿಹ್ನೆಯ ಹಂಚಿಕೆ ಕಾರ್ಯ ನಡೆಯಲಿದೆ’ ಎಂದು ಅವರು ತಿಳಿಸಿದ್ದಾರೆ.
‘ನಾಮಪತ್ರ ಸಲ್ಲಿಸಲು ಚುನಾವಣಾಧಿಕಾರಿಗಳ ಕೊಠಡಿಗೆ ಅಭ್ಯರ್ಥಿ ಸೇರಿದಂತೆ ಗರಿಷ್ಠ 5 ಜನರಿಗೆ ಮಾತ್ರ ಪ್ರವೇಶಿಸಲು ಅವಕಾಶವಿರುತ್ತದೆ. ಕಚೇರಿಯ 100 ಮೀಟರ್ ವ್ಯಾಪ್ತಿಯ ಮುಖ್ಯದ್ವಾರದವರೆಗೆ ಉಮೇದುವಾರಿಕೆಯ ಸಲ್ಲಿಸುವ ಅಭ್ಯರ್ಥಿಗೆ ಗರಿಷ್ಠ 3 ವಾಹನ ಬಳಕೆಗೆ ಅವಕಾಶವಿದೆ’ ಎಂದಿದ್ದಾರೆ.
‘ಆಯೋಗದ ಮಾರ್ಗಸೂಚಿಯ ಮೇರೆಗೆ ಅಭ್ಯರ್ಥಿಗಳ ವಾಹನ ಹಾಗೂ ಪ್ರವೇಶಾತಿ ಮೇಲೆ ನಿಗಾವಹಿಸಲು ಕೊಪ್ಪಳ ಡಿವೈಎಸ್ಪಿ ನೇತೃತ್ವದಲ್ಲಿ ಇಬ್ಬರು ವೃತ್ತ ನಿರೀಕ್ಷಕರು, ಮೂವರು ಸಬ್ ಇನ್ಸ್ಪೆಕ್ಟರ್ಗಳು, ಐದು ಸಹಾಯಕ ಸಬ್ ಇನ್ಸ್ಪೆಕ್ಟರ್ಗಳು, ಮಹಿಳಾ ಪೊಲೀಸ್ ಸೇರಿ ಒಟ್ಟು 70 ಜನ ಪೊಲೀಸರನ್ನು ನಿಯೋಜಿಸಲಾಗಿದೆ’ ಎಂದು ನಲಿನ್ ಅತುಲ್ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.