ಕೊಪ್ಪಳ: ಆದಾಯಕ್ಕಿಂತಲೂ ಹೆಚ್ಚು ಆಸ್ತಿ ಗಳಿಸಿದ ಮತ್ತು ಹಲವು ಕಾಮಗಾರಿಗಳಲ್ಲಿ ವ್ಯಾಪಕ ಭ್ರಷ್ಟಾಚಾರದ ಆರೋಪ ಕೇಳಿಬಂದಿದ್ದರಿಂದ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಇಲ್ಲಿನ ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್ ಸಹೋದರ ಶಕೀಲ್ ಪಟೇಲ್ ಹಾಗೂ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ್ದಾರೆ.
ಕಳೆದ ವರ್ಷ ನಡೆದ 300ಕ್ಕೂ ಹೆಚ್ಚು ಕಾಮಗಾರಿಗಳಲ್ಲಿ ಸುಮಾರು ₹10 ಕೋಟಿಗೂ ಹೆಚ್ಚು ಭ್ರಷ್ಟಾಚಾರ ಆಗಿದೆ ಎನ್ನುವ ಆರೋಪದ ಬಗ್ಗೆ ತನಿಖೆ ನಡೆಯುತ್ತಿದೆ. ಈ ಬಗ್ಗೆ ಲೋಕಾಯುಕ್ತಕ್ಕೂ ಕೆಲವರು ದೂರು ಸಲ್ಲಿಸಿದ್ದರು. ಮಂಗಳವಾರ ಬೆಳಿಗ್ಗೆಯಿಂದಲೇ ಲೋಕಾಯುಕ್ತ ಅಧಿಕಾರಿಗಳ ಒಂದು ತಂಡ ನಗರಸಭೆ ಕಚೇರಿಯಲ್ಲಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದೆ.
ಇನ್ನುಳಿದ ತಂಡಗಳು ನಗರಸಭೆಯ ಜೆ.ಇ. ಸೋಮಲಿಂಗಪ್ಪ ಮನೆಯಿರುವ ಇಲ್ಲಿನ ಶಿವಗಂಗಾ ನಗರ, ಆರ್.ಐ. ಉಜ್ವಲ್ ಹಾಗೂ ಪ್ರವೀಣ್ ಕಂದಾರಿ ಸೇರಿದಂತೆ ವಿವಿಧೆಡೆ ತಪಾಸಣೆಯಲ್ಲಿ ತೊಡಗಿವೆ.
‘ದಾಖಲೆಗಳ ಪರಿಶೀಲನೆ ಕಾರ್ಯ ನಡೆಯುತ್ತಿದ್ದು, ಪೂರ್ಣಗೊಂಡ ಬಳಿಕ ಮಾಹಿತಿ ಸಿಗಲಿದೆ’ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.